ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
ದಾವಣಗೆರೆ, ಏಪ್ರಿಲ್, 24: ಲೋಕಸಭೆ ಚುನಾವಣೆ ಹಿನ್ನೆಲ್ಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತುದ್ದಾರೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ದಾವಣಗೆರೆ ಕ್ಷೇತ್ರಕ್ಕೆ ಮೇ7ರಂದು ಚುನವಾಣೆ ನಡೆಯಲಿದ್ದು, ಈ ಹಿನ್ನೆಲೆ ಏಪ್ರಿಲ್ 28ಕ್ಕೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಗೆ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಂದು ಮಧ್ಯಾಹ್ನ 12ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮೋದಿ ಅವರು 1 ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ. ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಲಕ್ಷಾಂತರ ಕಾರ್ಯಕರ್ತರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಸಮಾವೇಶ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ಇಂದು (ಏಪ್ರಿಲ್ 24) ಬಿಜೆಪಿ ಪ್ರಚಾರ ಸಮಾವೇಶದ ಹಂದರ ಕಂಬದ ಪೂಜೆ ನೆರವೇರಿಸಲಾಯಿತು.

ಪೂಜೆ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು, ಮೋದಿ ಅವರು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಕಾರವಾರಕ್ಕೆ ತೆರಳಲಿದ್ದಾರೆ. ಐದನೇ ಬಾರಿಗೆ ಪ್ರಧಾಇ ಮೋದಿ ದಾವಣಗೆರೆಗೆ ಆಗಮಿಸುತ್ತಿರುವುದು ಜಿಲ್ಲೆಯ ಜನರ ಪುಣ್ಯ. ಈ ಬಾರಿಯ ಚುನಾವಣೆಯಲ್ಲಿ ಜನರು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರು ಅತ್ಯಧಿಕ ಸಂಖ್ಯೆಯಲ್ಲಿ ಮತ ಗಳಿಸಿ ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸಲಿದ್ದಾರೆ ಎಂದರು.
ಮಧ್ಯಾಹ್ನ 1 ಗಂಟೆಯಿಂದ ಮೋದಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು. ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಆಗಮಿಸಲಿದ್ದು, ಅಪಾರ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ ಎಂದು ಹೇಳಿದರು.
ಜಗತ್ತಿನಲ್ಲಿ ಇಂದು (ಏಪ್ರಿಲ್ 24) ನರೇಂದ್ರ ಮೋದಿ ಅವರು ಅತ್ಯುತ್ತಮ ನಾಯಕ ಎಂದು ಕರೆಯಲ್ಪಡುತ್ತಿದ್ದಾರೆ. ಎಲ್ಲಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದರೆ, ಅದು ವಿಪಕ್ಷಗಳ ಕಣ್ಣಿಗೆ ಕಾಣುತ್ತಿಲ್ಲ. ದಾವಣಗೆರೆಗೆ ಸಂಸದರು ಅಭಿವೃದ್ಧಿ ಮಾಡಿಲ್ಲ. ಖಾಲಿ ಚೊಂಚು ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದು, ನಾನೇನು ಸಾಧನೆ ಮಾಡಿದ್ದೇನೆ ಎನ್ನುವುದು ಜಿಲ್ಲೆಯ ಜನರಿಗೆ ತಿಳಿದಿದೆ ಎಂದು ತಿಳಿಸಿದರು.
ಇಡೀ ಪ್ರಪಂಚದಲ್ಲಿ ಭಾರತ ದೇಶ ಪ್ರಬಲವಾಗಿ ಬೆಳೆಯುತ್ತಿದೆ. ಇಂತಹ ನಾಯಕ ಬೇಕು ಎಂದು ದೇಶದ ಇತರೆ ದೇಶದ ಜನರು ಹೇಳುತ್ತಿದ್ದಾರೆ. ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, 2047ರ ವೇಳೆಗೆ ಭಾರತ ದೇಶವು ವಿಶ್ವದ ನಂಬರ್ ಒನ್ ಸ್ಥಾನದಲ್ಲಿ ಇರಲಿದೆ ಎಂದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಮಾಜಿ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಯಶವಂತ ರಾವ್ ಜಾಧವ್, ಶಿವನಳ್ಳಿ ರಮೇಶ್, ಕೃಷ್ಣ ಮೂರ್ತಿ ಪವಾರ್, ಧನಂಜಯ ಕಡ್ಲೇಬಾಳು, ಎಸ್.ಟಿ.ವೀರೇಶ್, ವೈ. ಮಲ್ಲೇಶ್, ಪ್ರಸನ್ನ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.












Click it and Unblock the Notifications