ಜೂನ್ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ; ದಾವಣಗೆರೆಯಲ್ಲಿ ಈಗಲೇ ಸಿದ್ಧತೆ
ದಾವಣಗೆರೆ, ಮೇ 16: ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಸಂಬಂಧಿಸಿದ ತಹಶೀಲ್ದಾರರು ತಮ್ಮ ತಾಲ್ಲೂಕುಗಳಲ್ಲಿ ಜನ-ಜಾನುವಾರು ಸೇರಿ ಯಾವುದೇ ರೀತಿಯ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ವಿಪತ್ತು ನಿರ್ವಹಣೆ ಮುಂಜಾಗ್ರತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
'ಪ್ರತಿದಿನ 12 ಗಂಟೆಯೊಳಗಾಗಿ ದೂರವಾಣಿ ಕರೆ ಮಾಡಿ ಎಲ್ಲ ತಹಶೀಲ್ದಾರರು ತಾಲ್ಲೂಕಿನಲ್ಲಿ ಆಗಿರುವ ಮಳೆಯ ಪ್ರಮಾಣ, ಹಾನಿ ವಿವರ ಮತ್ತು ನದಿ ನೀರಿನ ಮಟ್ಟದ ವರದಿಯನ್ನು ಉಪವಿಭಾಗಾಧಿಕಾರಿಗಳ ಮುಖಾಂತರ ಸಲ್ಲಿಸಬೇಕು. ಜೀವ ಹಾನಿ ಮತ್ತು ಜಾನುವಾರು ಹಾನಿಗೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಎನ್ಡಿಆರ್ ಎಫ್ ಮಾರ್ಗಸೂಚಿ ಅನ್ವಯ ಪರಿಹಾರ ಒದಗಿಸಬೇಕು' ಎಂದು ಹೇಳಿದರು.

'ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ವಿಪತ್ತು ನಿರ್ವಹಣೆಗಾಗಿ ತಲಾ ₹30 ಲಕ್ಷಗಳನ್ನು ನೀಡಿದ್ದೇವೆ. ಇದನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಬೆಳೆಹಾನಿ ಕುರಿತು ಕೃಷಿ, ಮತ್ತು ತೋಟಗಾರಿಕೆ ಅಧಿಕಾರಿಗಳು ಜಂಟಿಯಾಗಿ ಕಾಲಕಾಲಕ್ಕೆ ಸಮೀಕ್ಷೆ ನಡೆಸಿ ಬೆಳೆ ಹಾನಿ ಕುರಿತಾಗಿ ವರದಿ ಸಲ್ಲಿಸಬೇಕು' ಎಂದರು.
'ಗ್ರಾಮಲೆಕ್ಕಿಗರು ಮತ್ತು ಕಂದಾಯ ನಿರೀಕ್ಷಕರು ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಪರಿಸ್ಥಿತಿಯನ್ನು ಸರ್ಮಪಕವಾಗಿ ನಿಭಾಯಿಸಬೇಕು. ಪ್ರವಾಹ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ, ಜನರನ್ನು ಸ್ಥಳಾಂತರ ಮಾಡುವುದು, ಗಂಜಿ ಕೇಂದ್ರ ತೆರೆಯುವ ಬಗ್ಗೆ ಯೋಜನೆ ಸಿದ್ದಪಡಿಸಿಕೊಳ್ಳಬೇಕು. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಘಡಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು 24X7 ಕಾರ್ಯನಿರ್ವಹಿಸುವಂತೆ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ತೆರೆಯಬೇಕು' ಎಂದು ಸೂಚಿಸಿದರು.

'ಕೃಷಿ ಇಲಾಖೆಯು ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇಟ್ಟುಕೊಳ್ಳಬೇಕು. ರಸಗೊಬ್ಬರ ದಾಸ್ತಾನು ಕಡಿಮೆ ಇದ್ದರೆ ತಿಳಿಸಿ. ಸರ್ಕಾರದೊಂದಿಗೆ ಮಾತನಾಡಲಾಗುವುದು. ಕಳಪೆ ಬಿತ್ತನೆ ಬೀಜದ ಬಗ್ಗೆ ದೂರುಗಳಿದ್ದವು. ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಿ ಎಂದ ಅವರು ಜಿಲ್ಲೆಯಲ್ಲಿ ಕಳಪೆ ಬಿತ್ತನೆ ಬೀಜ ಮಾರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಎಚ್ಚರಿಕೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಎಎಸ್ಪಿ ರಾಜೀವ್, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಇದ್ದರು.












Click it and Unblock the Notifications