ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ
ದಾವಣಗೆರೆ, ಆಗಸ್ಟ್ 28: ಗಣೇಶ ಹಬ್ಬ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಸಿದ್ಧತೆಯೂ ಜೋರಾಗಿ ಸಾಗುತ್ತದೆ. ಆದರೆ ಈ ಬಾರಿ ಗಣೇಶನ ಹಬ್ಬಕ್ಕೆ ಹಲವು ಕಟ್ಟುನಿಟ್ಟಿನ ನಿಯಮಗಳೂ ಜೊತೆಯಾಗಿವೆ. ದಾವಣಗೆರೆಯಲ್ಲೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಲು ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಣ್ಣಿನ ಗಣಪತಿ ಉಚಿತವಾಗಿ ಪಡೆಯಿರಿ
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗೌರಿ ಗಣೇಶ ಹಾಗೂ ಮೊಹರಂ ಹಬ್ಬಗಳ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದ್ದು, ಹಲವು ವಿಷಯಗಳನ್ನು ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಈಗಾಗಲೇ ಸ್ಥಳ ನಿಗದಿಪಡಿಸಲಾಗಿದ್ದು, ಅಲ್ಲಿಯೇ ವಿಸರ್ಜನೆ ಮಾಡುವಂತೆ ಆಗ್ರಹಿಸಲಾಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ಸಂಘಟನೆಗಳ ಮುಖಂಡರಿಗೆ ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ಸಲಹೆ ನೀಡಲಾಯಿತು. ಹಬ್ಬದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳ ಜೊತೆ ಜನರೂ ಸಹಕರಿಸಬೇಕು ಎಂದು ಸಹಕಾರ ಕೋರಲಾಯಿತು.
ಸರ್ಕಾರದ ಆದೇಶದಂತೆ ಗರಿಷ್ಠ ಐದು ಅಡಿಗಳಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸುವಂತಿಲ್ಲ ಎಂಬ ನಿಯಮ ಜಾರಿಯಾಗಿದೆ. ಅದರಂತೆ ಐದು ಅಡಿಗಿಂತ ಎತ್ತರದ ಗಣಪನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿಲ್ಲ. ಜೊತೆಗೆ ಜಿಲ್ಲೆಯಲ್ಲಿ ಪಿಒಪಿ ಗಣಪತಿ ಅಥವಾ ಪ್ಲಾಸ್ಟಿಕ್ ಗಣೇಶ ಮೂರ್ತಿಗಳನ್ನು ಬಳಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಗಣೇಶನಿಗೂ ತಟ್ಟಲಿದೆಯೇ ಪ್ರವಾಹದ ಬಿಸಿ? ಗಣಪನ ವಿಗ್ರಹ ಈ ಬಾರಿ ದುಬಾರಿ!
ಜಿಲ್ಲೆಯಲ್ಲಿ ಹಾಗೂ ಇತರೆ ಜಿಲ್ಲೆ, ರಾಜ್ಯಗಳಿಂದ ಬಂದ ಪಿಒಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೆ ಮಾರಾಟ ಮಾಡುವುದು ಕಂಡುಬಂದಲ್ಲಿ, ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳ ಪರವಾನಗಿ ರದ್ದು ಮಾಡುವಂತೆ ಹಾಗೂ ಪರವಾನಗಿ ಇಲ್ಲದ ತಯಾರಕ ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳನ್ನು ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು ಹಾಗೂ ವಿಸರ್ಜನೆ ಸಂದರ್ಭದಲ್ಲಿ ಹೂ ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿಗಳ ಸಮೇತ ಮೂರ್ತಿಗಳನ್ನು ವಿಸರ್ಜನೆ ಮಾಡದೇ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿ ತಿಳಿಸಿದ್ದಾರೆ.
ವಾರ್ಡ್ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿ ರಚಿಸಿಕೊಂಡು ಗಣೇಶ ಮೂರ್ತಿಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವಂತೆ ತಿಳಿಸಲಾಗಿದೆ. ಹಬ್ಬದ ಮುಂಚಿತವಾಗಿ ಶಾಲಾ ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರಸ್ನೇಹಿ ಗಣೇಶನ ಹಬ್ಬ ಆಚರಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಲೂ ಮುಂದಾಗಿದೆ.