ಕೋವಿಡ್ ಲಸಿಕೆ ಮೊದಲ ಹಂತದ ವಿತರಣೆಗೆ ತಯಾರಿ; ದಾವಣಗೆರೆ ಡಿಸಿ
ದಾವಣಗೆರೆ, ನವೆಂಬರ್ 27: ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ವಿತರಿಸಲು ಜಿಲ್ಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಅಭಿಯಾನ ಕಾರ್ಯಕಾರಿ ಸಮಿತಿ ಸಭೆ ಹಾಗೂ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ತಡೆಗೆ ಎಲ್ಲ ಹಂತಗಳ ಪ್ರಯೋಗದ ಬಳಿಕ ಯಶಸ್ವಿಯಾಗಿ ಬಳಸಬಹುದಾದ ಲಸಿಕೆ ಶೀಘ್ರ ಪೂರೈಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ಆರೋಗ್ಯ ಸಿಬ್ಬಂದಿಯ ಅಂಕಿ ಅಂಶ ಸಂಗ್ರಹ
ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ವೈದ್ಯರು, ನರ್ಸ್ಗಳು, ಸಿಬ್ಬಂದಿ, ಪ್ರಯೋಗಶಾಲಾ ತಂತ್ರಜ್ಞರು ಸೇರಿ ಎಲ್ಲ ಆಶಾ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಲು ಅಂಕಿ ಅಂಶಗಳನ್ನು ಸಂಗ್ರಹಿಸಲಾಗುವುದು. ಲಸಿಕೆ ದಾಸ್ತಾನು ಹಾಗೂ ವಿತರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
GHMC: ಬಿಜೆಪಿ ಪ್ರಣಾಳಿಕೆಯಲ್ಲಿ ಕೊರೊನಾ ಲಸಿಕೆ, ಚಿಕಿತ್ಸೆ
10,115 ಜನರು ಮೊದಲ ಹಂತದ ಫಲಾನುಭವಿಗಳು
ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳ ಒಟ್ಟು 10,115 ಜನರನ್ನು ಮೊದಲ ಹಂತದ ಫಲಾನುಭವಿಗಳೆಂದು ಗುರುತಿಸಲಾಗಿದೆ. ಅಲ್ಲದೆ 2,872 ಲಸಿಕೆ ನೀಡುವ ಕಾರ್ಯಕರ್ತರನ್ನು ಗುರುತಿಸಿ, ಹೆಸರು ಸಹಿತ ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ತಹಶೀಲ್ದಾರ್ ನೇತೃತ್ವದಲ್ಲಿ ತಾಲೂಕು ಮಟ್ಟದ ಕಾರ್ಯಪಡೆ ರಚಿಸಲು ಸೂಚಿಸಲಾಗಿದೆ ಎಂದು ವಿವರಿಸಿದರು.
105 ಕೋಲ್ಡ್ ಸ್ಟೋರೇಜ್ ಗಳ ಸಿದ್ಧತೆ
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ ಮಾತನಾಡಿ, ‘ಲಸಿಕೆ ಪೂರೈಕೆ ಹಾಗೂ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಕಾರ್ಯಪಡೆ ರಚಿಸಿ, ಹಲವು ಸಭೆಗಳನ್ನು ನಡೆಸಲಾಗಿದೆ. ಸರ್ಕಾರಿ ಸಂಸ್ಥೆಗಳ 983, ಖಾಸಗಿ ಸಂಸ್ಥೆಗಳ 1889 ಜನ ಲಸಿಕೆ ನೀಡುವ ಕಾರ್ಯಕರ್ತರ ಪಟ್ಟಿ ಸಿದ್ಧವಾಗಿದೆ. ಲಸಿಕೆ ದಾಸ್ತಾನು ಮಾಡಲು ಸರ್ಕಾರಿ ಸಂಸ್ಥೆಗಳ 105 ಕೋಲ್ಡ್ ಸ್ಟೋರೇಜ್ ಗಳನ್ನು ಸಿದ್ಧವಾಗಿರಿಸಲಾಗಿದೆ' ಎಂದು ತಿಳಿಸಿದರು. ಜಿಲ್ಲೆಯಲ್ಲಿ ಈ ವರ್ಷ ಅಕ್ಟೋಬರ್ ತಿಂಗಳ ಅಂತ್ಯದವರೆಗೆ 1,18,312 ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗಿದೆ. 232 ಅಪೌಷ್ಟಿಕ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮೂರು ಲಸಿಕೆ ಉತ್ಪಾದನಾ ಕೇಂದ್ರಗಳಿಗೆ ಶನಿವಾರ ನರೇಂದ್ರ ಮೋದಿ ಭೇಟಿ
ಅಪೌಷ್ಟಿಕ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲು ಸೂಚನೆ
‘ಅಪೌಷ್ಟಿಕ ಮಕ್ಕಳನ್ನು ಕೂಡಲೇ ಸಂಬಂಧಪಟ್ಟ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸುವ ಜವಾಬ್ದಾರಿ ಆಯಾ ಅಂಗನವಾಡಿ ಕಾರ್ಯಕರ್ತರು ಹಾಗೂ ಮೇಲ್ವಿಚಾರಕರ ಜವಾಬ್ದಾರಿಯಾಗಿದೆ' ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ಇದೇ ಸಂದರ್ಭ, ಜಿಲ್ಲೆಯಲ್ಲಿ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಈ ವರ್ಷ ಒಟ್ಟು 1,500 ಹೊಸ ಕ್ಷಯ ರೋಗಿಗಳನ್ನು ಪತ್ತೆ ಮಾಡಲಾಗಿದೆ ಎಂದು ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಗಂಗಾಧರ್ ಮಾಹಿತಿ ನೀಡಿದರು.
Recommended Video