ದಾವಣಗೆರೆ ಚಿಗಟೇರಿ ಆಸ್ಪತ್ರೆ ಕಟ್ಟಡ ನವೀಕರಣಕ್ಕೆ ಪ್ರಸ್ತಾವನೆ
ದಾವಣಗೆರೆ, ನವೆಂಬರ್ 25: ದಾವಣಗೆರೆ ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಯ ನವೀಕರಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಿಂದೆ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗ, ಆಸ್ಪತ್ರೆಯ ಕಟ್ಟಡದ ಸ್ಥಿತಿಯನ್ನು ಗಮನಿಸಿದ್ದೇನೆ. ಈ ಕಟ್ಟಡವನ್ನು ಹೊಸದಾಗಿ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿಯೇ ಡಿಪಿಆರ್ ಸಹ ಸಿದ್ಧಗೊಳ್ಳಲಿದೆ ಎಂದರು.
ಕೋವಿಡ್ ಲಾಕ್ಡೌನ್ ಮತ್ತು ಮಳೆಯ ಕಾರಣಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ವಿಳಂಬವಾಗಿತ್ತು. ಇನ್ಮುಂದೆ ಕಾಮಗಾರಿಗಳು ಚುರುಕು ಪಡೆಯಲಿದೆ ಎಂದು ತಿಳಿಸಿದರು.

ಗೋ ಹತ್ಯೆ ನಿಷೇಧ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಅಲ್ಲದೆ, ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಶಾಸಕರು ರಾಜಕೀಯ ಚರ್ಚೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಲ್ಲ. ಅವರ ಕ್ಷೇತ್ರಗಳ ಅಭಿವೃದ್ಧಿ ವಿಚಾರದ ಹಿನ್ನೆಲೆಯಲ್ಲಿ ಭೇಟಿಯಾಗಿದ್ದಾರೆ. ನನ್ನ ಕಚೇರಿಗೂ ಕೆಲ ಸಚಿವರು ಬಂದಿದ್ದರು ಎಂದು ಹೇಳಿದ ಅವರು, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸ್ವತಃ ನಾನೇ ದಾವಣಗೆರೆ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮರಾಠಾ ಅಭಿವೃದ್ಧಿ ಪ್ರಾಧಿಕಾರ ಆ ಭಾಷೆಯ ಅಭಿವೃದ್ಧಿಗಾಗಿ ಮಾಡಿಲ್ಲ. ಕರ್ನಾಟಕದಲ್ಲಿ ನೆಲೆಸಿರುವ ಮರಾಠಾ ಸಮುದಾಯದ ಜನರ ಅಭಿವೃದ್ಧಿಗೆ ಮಾತ್ರ ಪ್ರಾಧಿಕಾರ ರಚಿಸಲಾಗಿದೆ. ಇದನ್ನು ಕನ್ನಡಪರ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕೆಂದು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮೇಯರ್ ಬಿ.ಜಿ.ಅಜಯಕುಮಾರ್ ಹಾಜರಿದ್ದರು.












Click it and Unblock the Notifications