ಬಸನಗೌಡ ಯತ್ನಾಳ್ ಹೇಳಿಕೆ ವಿರೋಧಿಸಿ ದಾವಣಗೆರೆಯಲ್ಲಿ ಪ್ರತಿಭಟನೆ
ದಾವಣಗೆರೆ, ಡಿಸೆಂಬರ್ 4: ಕನ್ನಡ ಪರ ಹೋರಾಟಗಾರರ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿರೋಧಿಸಿ ಶುಕ್ರವಾರ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮುಖೇನ ಜಯದೇವ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಕಳ್ಳರ ರಕ್ಷಣಾ ವೇದಿಕೆ ಎಂದು ಬಸನಗೌಡ ಯತ್ನಾಳ್ ಹೇಳಿಕೆ ನೀಡಿದ್ದರು.
ಈಗ ನಡೆಯಲಿರುವ ಬಸವ ಕಲ್ಯಾಣ ಮರು ಚುನಾವಣೆಯಲ್ಲಿ ಆ ಕ್ಷೇತ್ರದಲ್ಲಿರುವ ಸುಮಾರು ನಲವತ್ತು ಸಾವಿರ ಮರಾಠಿಗರ ಮತಗಳನ್ನು ಸೆಳೆಯುವ ಉದ್ದೇಶದಿಂದ ಹಾಗೂ ತಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಈಗ ರಾಜ್ಯದಲ್ಲಿರುವ ಎಲ್ಲ ಹಿಂದುಳಿದ ಜಾತಿಗಳ ಮುಖಂಡರು ತಮ್ಮ ಜಾತಿಗೆ ಒಂದು ಅಭಿವೃದ್ಧಿ ಪ್ರಾಧಿಕಾರ ಅಥವಾ ನಿಗಮಗಳನ್ನು ಸ್ಥಾಪಿಸಿ ಎಂದು ಒತ್ತಾಯಿಸಿ ಹೋರಾಟಗಳನ್ನು ಮಾಡುತ್ತಿದ್ದಾರೆ. ಹೀಗಿರುವಾಗ ರಾಜ್ಯ ಸರ್ಕಾರ ಯಾವ ಜಾತಿ ಮತ್ತು ಜನಾಂಗಗಳಿಗೆ ನ್ಯಾಯ ಒದಗಿಸಲು ಸಾಧ್ಯ. ಆದ್ದರಿಂದ ಈ ಕೂಡಲೇ ಮರಾಠ ಅಭಿವೃದ್ಧಿ ನಿಗಮವನ್ನು ರದ್ದುಪಡಿಸಬೇಕು. ಎಲ್ಲಾ ಜಾತಿಯ ಬಡವರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಕನ್ನಡಪರ ಹೋರಾಟಗಾರರು ವಸೂಲಿಗಾರರು ಎಂದು ಹೀಯಾಳಿಸಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು. ನಾಡಿನ ಎಲ್ಲಾ ರಾಜಕಾರಣಿಗಳು ನಮ್ಮ ಮಾತೃ ಭಾಷೆ ಕನ್ನಡವನ್ನು ಮತ್ತು ಕನ್ನಡಿಗರ ಹಿತ ಕಾಪಾಡಲು ಬದ್ಧರಾಗಿರಬೇಕೆಂದು ಒತ್ತಾಯಿಸಿದರು.
Recommended Video
ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ಕೆ.ಜಿ. ಯಲ್ಲಪ್ಪ, ಅಧ್ಯಕ್ಷ ಎನ್.ಎಚ್. ಹಾಲೇಶ್, ಕಾರ್ಯಾಧ್ಯಕ್ಷ ವಿ. ಅನಿನಾಶ್, ಎಸ್. ರಾಜು, ನಾಗರಾಜ, ಡಾ. ಬಿ. ವಾಸುದೇವ್, ಎಂ.ಎ. ಸಾಧಿಕ್, ಬೋಜರಾಜು, ಐಗೂರು ಸುರೇಶ್, ಡಿ. ಬಸವರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.












Click it and Unblock the Notifications