ಕತ್ತಿಗೆ ಹಾಸಿಗೆ ಇದ್ದಷ್ಟು ಕಾಲು ಚಾಚಬೇಕೆಂದ ರೇಣುಕಾಚಾರ್ಯ
ದಾವಣಗೆರೆ, ಫೆಬ್ರವರಿ 14: "ಶಾಸಕ ಉಮೇಶ್ ಕತ್ತಿ ಸಿಎಂ ಆಗುವ ಕನಸು ಕಾಣುವುದರಲ್ಲಿ ತಪ್ಪೇನಿಲ್ಲ, ಆದರೆ ಈಡೇರಬೇಕಲ್ವಾ? ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು. ಈ ವಿಚಾರವಾಗಿ ನಾನು ಕತ್ತಿಗೆ ಟಾಂಗ್ ನೀಡಲು ಹೋಗುವುದಿಲ್ಲ. ನಾನು ಏನೇ ಮಾತನಾಡಿದರು ವಿವಾದ ಆಗುತ್ತದೆ" ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಗುರುವಾರ ಮಾತನಾಡಿದ ಅವರು, "ನಾನು ಹಾಗೂ ಲಕ್ಷ್ಮಣ ಸವದಿ ಆತ್ಮೀಯ ಸ್ನೇಹಿತರು. ಒಂದು ಗಂಟೆಗಳ ಕಾಲ ಬೆಂಗಳೂರಿನಲ್ಲಿ ಚರ್ಚೆ ನಡೆಸಿದ್ದೇವೆ. ಅಭ್ಯರ್ಥಿ ಸೋಲಿಸುವ ಕೀಳು ರಾಜಕೀಯ ಮಾಡಲು ಹೋಗುವುದಿಲ್ಲ. ಪಕ್ಷದ ಅಭ್ಯರ್ಥಿಯನ್ನು ಸೋಲಿಸಿದರೆ ತಾಯಿಗೆ ಮೋಸ ಮಾಡಿದಂತೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವೆ, ನಮ್ಮ ಅಭ್ಯರ್ಥಿ ಸೋಲನ್ನು ಯಾವತ್ತು ಬಯಸುವುದಿಲ್ಲ" ಎಂದರು.
"ಅಲ್ಲದೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗಳಾಗುತ್ತಿವೆ. ಯಾವುದೇ ರಾಜಕೀಯ ಉದ್ದೇಶದಿಂದ ಅವರನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ಚರ್ಚೆ ಕೂಡ ಮಾಡಿಲ್ಲ. ಆದರೆ ಮಾಧ್ಯಮಗಳಲ್ಲಿ ಏನೇನೋ ಸುದ್ದಿ ಬಂದಿದೆ. ಇದು ಸತ್ಯಕ್ಕೆ ದೂರವಾದದ್ದು. ಹೊನ್ನಾಳಿಯಲ್ಲಿ ಮುಂದಿನ ತಿಂಗಳು ಮೂರು ದಿನಗಳ ಕಾಲ ನಡೆಯುವ ಕೃಷಿ ಮೇಳಕ್ಕೆ ಬರುವಂತೆ ಮನವಿ ಮಾಡಿದ್ದೇನೆ.

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿದ್ದೇನೆ ಅಷ್ಟೇ. ಡಿ ಕೆ.ಶಿವಕುಮಾರ್ ಭೇಟಿ ಮಾಡಿದ್ದರಿಂದ ಸಿಎಂ ಯಡಿಯೂರಪ್ಪ ಟೆನ್ಶನ್ ಆಗಿಲ್ಲ. ನಾಲ್ಕು ಬಾರಿ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ರಾಜಕೀಯದಲ್ಲಿ ಅಪಾರ ಅನುಭವವಿದೆ. ಎಲ್ಲವನ್ನೂ ನಿಭಾಯಿಸುವ ಶಕ್ತಿ ಅವರಲ್ಲಿದೆ. ತಾಳ್ಮೆಯಿಂದ ಎಲ್ಲವನ್ನೂ ಯಡಿಯೂರಪ್ಪ ಬಗೆಹರಿಸುತ್ತಾರೆ. ನಾನು ಇನ್ನೂ ರಾಜಕೀಯದಲ್ಲಿ ಚಿಕ್ಕವನು" ಎಂದು ಪ್ರತಿಕ್ರಿಯೆ ನೀಡಿದರು.











Click it and Unblock the Notifications