ರೇಣುಕಾಚಾರ್ಯಗೆ ಲೋಕಸಭೆ ಟಿಕೆಟ್ ಸಿಕ್ಕರೆ ಬಹುಮತದಿಂದ ಗೆಲ್ಲುತ್ತಾರೆ-ದಾವಣಗೆರೆ ಬಿಜೆಪಿ ಕಾರ್ಯಕರ್ತರ ಭರವಸೆ
ದಾವಣಗೆರೆ, ಅಕ್ಟೋಬರ್ 23: 2024ರ ಲೋಕಸಭೆ ಚುನಾವಣೆಗೆ ದಾವಣಗೆರೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರಿಗೆ ಟಿಕೆಟ್ ಸಿಗಲಿದೆ. ಅವರೇ ಗೆಲ್ಲುತ್ತಾರೆ. ಖಚಿತ ಎಂದು ಬಿಜೆಪಿ ಹಿರಿಯ ಮುಖಂಡ ಕೆ. ಪಿ. ಕಲ್ಲಿಂಗಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿಯ ಎಂ.ಪಿ.ರೇಣುಕಾಚಾರ್ಯ ಉತ್ತಮ ಹೆಸರು ಮಾಡಿದ್ದು, ಮುಂಬರುವ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ದೊರೆಯಲಿದೆ ಎಂದರು.

ಪ್ರಚಂಡ ಬಹುಮತದಿಂದ ರೇಣುಕಾಚಾರ್ಯ ಗೆದ್ದು ಬರಲಿದ್ದಾರೆ. ರಾಜ್ಯ ರಾಜಕೀಯದಲ್ಲಿ 1989ರಿಂದ ಇದ್ದು ಶಾಸಕರಾಗಿ, ಸಚಿವರಾಗಿ, ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಮುಂಬರುವ ಎಂಪಿ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಜಿಲ್ಲೆಯಲ್ಲಿ ಕೆಲವು ವ್ಯಕ್ತಿಗಳು ರೇಣುಕಾಚಾರ್ಯರ ವಿರುದ್ಧ ಸುಳ್ಳು ಹೇಳಿಕೆಯನ್ನು ನೀಡುತ್ತಿದ್ದು, ನಿಷ್ಠಾವಂತ ಕಾರ್ಯಕರ್ತರಿಗೆ ನೋವುಂಟಾಗಿದೆ. ಕಾರ್ಯಕರ್ತರ ಮಾತಿಗೆ ಬೆಲೆ ಸಿಗುತ್ತಿಲ್ಲ. ಕಾರಣ ಈ ಕೂಡಲೇ ಪಕ್ಷದ ನಾಯಕರು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕೆಂದು ಒತ್ತಾಯಿಸಿದರು.

ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ಸರ್ವಾಧಿಕಾರಿ ಧೋರಣೆಯಿಂದಾಗಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷಕ್ಕೆ ತೀವ್ರ ಹಿನ್ನೆಡೆಯಾಗುತ್ತಿದೆ. ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ಅವರು ಮಧ್ಯ ಪ್ರವೇಶಿಸಿ ಕಾರ್ಯಕರ್ತರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಬೇಕು. ಪಕ್ಷ ಬಲವರ್ಧನೆಗೆ ಸಲಹೆ, ಸಹಕಾರ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಕೆ. ಪಿ. ಕಲ್ಲಿಂಗಪ್ಪ ಮನವಿ ಮಾಡಿದರು.
ಮಾಜಿ ಶಾಸಕ ಟಿ. ಜಿ. ಗುರುಸಿದ್ದನಗೌಡ, ಮಾಡಾಳು ವಿರೂಪಾಕ್ಷಪ್ಪ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರನ್ನು ಪಕ್ಷದಿಂದ ಹೊರ ಹಾಕುವ ಹುನ್ನಾರ ನಡೆಯುತ್ತಿದೆ. ಇದಕ್ಕೆ ಬ್ರೇಕ್ ಹಾಕಬೇಕು. ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ಪಡೆಯಬೇಕು. ವಿನಾಕಾರಣ ಆರೋಪ ಹೊರಿಸುವುದನ್ನು ಬಿಡಬೇಕು. ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಮುಖಂಡರು, ಕಾರ್ಯಕರ್ತರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದರೆ ಪಕ್ಷದ ಗತಿ ಏನು. ಕಾರಣ ರಾಜ್ಯ ವರಿಷ್ಠರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ದೊಡ್ಡ ನಷ್ಟ ಉಂಟಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಯುವ ಮುಖಂಡರಾದ ಪ್ರವೀಣ್ ಜಾಧವ್, ದಂದೂರು ಜಯಪ್ರಕಾಶ್, ಪಿ.ಎಸ್.ರಾಜು, ಅಗ್ನಿ ಸುರೇಶ್, ಸಂದೀಪ್, ಚೇತನ ಕುಮಾರ್, ಅಜಯ್ ಕುಮಾರ್, ಮಾರುತಿ, ಸಿದ್ದೇಶ್ ಭಾಗಿಯಾಗಿದ್ದರು.












Click it and Unblock the Notifications