Breaking; ದಾವಣಗೆರೆಯಲ್ಲಿ ಭೀಕರ ಅಪಘಾತ, 4 ಸಾವು
ದಾವಣಗೆರೆ, ಡಿಸೆಂಬರ್ 17; ಕೆಎಸ್ಆರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಳಿಯ ಸೇತುವೆ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಡೇಹಳ್ಳಿ ಗ್ರಾಮದ ದಾಕ್ಷಾಯಿಣಿ, ಸುಮಾ, ಶಾರದಮ್ಮ, ಕಾರು ಚಾಲಕ ಸುನೀಲ್ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕೆಎಸ್ಆರ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮೊದಲು ಡಿಕ್ಕಿಯಾಗಿದೆ. ಆ ಬಳಿಕ ಲಾರಿಯು ಬಸ್ಗೆ ಗುದ್ದಿದ್ದು, ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟೆ ಸೇತುವೆ ಬಳಿ ಈ ಅವಘಡ ಸಂಭವಿಸಿದೆ. ಸ್ಥಳದಲ್ಲೇ ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿಯೇ ಸಾವು ಕಂಡಿದ್ದರೆ, ಕಾರು ಚಾಲಕ ಸುನೀಲ್ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾವನ್ನಪ್ಪಿದವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಡೇಡೇಹಳ್ಳಿ ಗ್ರಾಮದವರು ಎಂದು ಹೇಳಲಾಗಿದೆ. ಮೃತರು ಯಡೇಹಳ್ಳಿಯಿಂದ ನ್ಯಾಮತಿ ತಾಲ್ಲೂಕಿನ ಹಳೇಜೋಗ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದರು.
ಈ ವೇಳೆ ಸವಳಂಗ ಬಳಿ ಸಾರಿಗೆ ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಹೊನ್ನಾಳಿ ಸಿಪಿಐ ದೇವರಾಜ್ ಹಾಗೂ ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ ಮುಂಭಾಗಕ್ಕೂ ಹಾನಿಯಾಗಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications