ದಾವಣಗೆರೆ : 88 ವರ್ಷದ ಶಾಮನೂರು ಶಿವಶಂಕರಪ್ಪ ಮೈತ್ರಿ ಅಭ್ಯರ್ಥಿ!
ದಾವಣಗೆರೆ, ಮಾರ್ಚ್ 25 : 'ನನಗೆ ಟಿಕೆಟ್ ಘೋಷಣೆ ಮಾಡಿರುವುದು ಅಚ್ಚರಿ ತಂದಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತೇನೆ' ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
88 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ ಎಂಬ ಕಾರಣಕ್ಕೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಈಗ ಅದೇ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಶಾಮನೂರು ಕುಟುಂಬಕ್ಕಿಲ್ಲ ದಾವಣಗೆರೆ ಟಿಕೆಟ್, 'ಕೈ' ಅಭ್ಯರ್ಥಿ ಯಾರು?
ದಾವಣಗೆರೆ ಬಿಜೆಪಿ ಭದ್ರಕೋಟೆಯಾಗಿದೆ. ಸತತ ಮೂರು ಚುನಾವಣೆಗಳಲ್ಲಿ ಜಿ.ಎಂ.ಸಿದ್ದೇಶ್ವರ ಅವರು ಜಯಗಳಿಸಿದ್ದಾರೆ. ಈ ಬಾರಿ ಬಿಜೆಪಿಯ ಗೆಲುವಿನ ಓಟ ತಡೆಯಬೇಕು ಎಂಬ ಕಾರಣಕ್ಕೆ ವಯಸ್ಸನ್ನು ಬದಿಗೊತ್ತಿ ಶಾಮನೂರು ಶಿವಶಂಕರಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ.
ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ
ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ 2ನೇ ಬಾರಿಗೆ ಶಾಮನೂರು ಶಿವಶಂಕರಪ್ಪ ಆಯ್ಕೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ....
ಪ್ರಬಲ ಪೈಪೋಟಿ
ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ ಅವರಿಗೆ ಪ್ರಬಲ ಪೈಪೋಟಿ ನೀಡಲು ಶಾಮನೂರು ಶಿವಶಂಕರಪ್ಪ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಎಸ್.ಎಸ್.ಮಲ್ಲಿಕಾರ್ಜುನ ಅವರು ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯನ್ನು ತೋರಿಸಲಿಲ್ಲ. ಆದ್ದರಿಂದ, ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
ಸಂಸದರಾಗಿದ್ದರು
1998ರ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಮೊದಲ ಪ್ರಯತ್ನದಲ್ಲಿಯೇ ಗೆದ್ದು ಸಂಸದರಾಗಿದ್ದರು. 1999ರ ಚುನಾವಣೆಯಲ್ಲಿ ಸೋತ ಬಳಿಕ ಅವರು ರಾಜ್ಯ ರಾಜಕಾರಣಕ್ಕೆ ಬಂದಿದ್ದಾರೆ. ಕಳೆದ ಮೂರು ಚುನಾವಣೆಗಳಲ್ಲಿ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ ಅವರು ಜಯಗಳಿಸಿದ್ದಾರೆ.
ಶಿಫಾರಸು ಮಾಡಲಾಗಿತ್ತು
ದಾವಣಗೆರೆ ಜಿಲ್ಲಾ ಘಟಕ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಬೇಕು ಎಂದು ಶಿಫಾರಸು ಮಾಡಿತ್ತು. ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಪಕ್ಷದ ವಲಯದಲ್ಲಿ ಚರ್ಚೆ ನಡೆಯುತ್ತಿತ್ತು. ಶಾಮನೂರು ಶಿವಶಂಕರಪ್ಪ ಅವರು ಅದನ್ನೇ ಹೇಳಿದ್ದರು. ಆದರೆ, ಪಟ್ಟಿ ಬಿಡುಗಡೆಯಾದಾಗ ಅಚ್ಚರಿ ಎಂಬಂತೆ ಶಾಮನೂರು ಅವರು ಅಭ್ಯರ್ಥಿಯಾಗಿದ್ದಾರೆ.
ಗೆಲ್ಲಲು ವಯಸ್ಸಾದವರೇ ಬೇಕು
'ನನಗೆ ಟಿಕೆಟ್ ಘೋಷಣೆ ಮಾಡಿರುವುದು ಅಚ್ಚರಿ ತಂದಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಆಗ ವಯಸ್ಸಾಗಿದೆ ಎಂದು ನನ್ನನ್ನು ಕೈ ಬಿಟ್ಟಿದ್ದರು ಈಗ ಗೆಲ್ಲಲು ವಯಸ್ಸಾದವರೇ ಬೇಕು ಅನಿಸಿರಬೇಕು' ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಲಿಂಗಾಯತ ಮತಗಳ ಮೇಲೆ ಕಣ್ಣು
ಶಾಮನೂರು ಶಿವಶಂಕರಪ್ಪ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಲಿಂಗಾಯತ ಮತಗಳೇ ಅಧಿಕವಾಗಿದೆ. ಆದ್ದರಿಂದ, ಅವರಿಗೆ ಟಿಕೆಟ್ ನೀಡಲಾಗಿದೆ ಎಂಬುದು ಲೆಕ್ಕಾಚಾರವಾಗಿದೆ. ಏಪ್ರಿಲ್ 23ರಂದು ದಾವಣಗೆರೆಯಲ್ಲಿ ಮತದಾನ ನಡೆಯಲಿದೆ.