ಬಿಜೆಪಿ ಅಧಿಕಾರಕ್ಕಾಗಿ ಕರ್ನಾಟಕವನ್ನೇ ಮಾರುತ್ತದೆ: ಶಾಮನೂರು ಶಿವಶಂಕರಪ್ಪ ಆಕ್ರೋಶ
ದಾವಣಗೆರೆ ಮಾರ್ಚ್ 27: ಚುನಾವಣೆ ಸಮೀಪಿಸುತ್ತಿದ್ದಂತೆ ಯಾರು ಏನೇ ಕೇಳಿದರೂ ರಾಜ್ಯ ಸರ್ಕಾರ ಕೊಟ್ಟುಬಿಡುತ್ತದೆ. ಕರ್ನಾಟಕವನ್ನೇ ಬೇಕಾದರೆ ಮಾರಿಬಿಡುತ್ತದೆ ಎಂದು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಶಾಮನೂರಿನಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 4ರಷ್ಟು ಮುಸ್ಲಿಮರ ಮೀಸಲಾತಿ ರದ್ದು ಮಾಡಿದ್ದು ದೊಡ್ಡ ತಪ್ಪು. ಮುಸ್ಲಿಮರ ಮೀಸಲಾತಿ ಕಿತ್ತುಕೊಳ್ಳುವ ಅವಶ್ಯಕತೆ ಇರಲಿಲ್ಲ. ಇಲ್ಲಿ ತೆಗೆದು ಬೇರೆಯವರಿಗೆ ಕೊಡುವುದು ಸರಿಯಲ್ಲ ಎಂದು ಹೇಳಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಮಹಾಸಂಗಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದಾಗ 2 ಲಕ್ಷ ಜನರು ಬಂದಿರಲಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಹತ್ತು ಲಕ್ಷ ಜನರು ಬಂದಿದ್ದರು. ಮಹಾಸಂಗಮದಲ್ಲಿ ಸಿದ್ದರಾಮೋತ್ಸವಕ್ಕೆ ಸೇರಿದ್ದಷ್ಟು ಜನರಿರಲಿಲ್ಲ ಎಂಬುದು ಎಲ್ಲರಿಗೂ ಗೊತ್ತು ಎಂದು ತಿಳಿಸಿದರು.
ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಮನ್ನಣೆ ನೀಡುವುದು ಖಾತ್ರಿಯಾಗಿದೆ. ಕಾಂಗ್ರೆಸ್ 2 ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಇನ್ನು 25 ಮಂದಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಮೊದಲ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದ 32 ಮಂದಿಗೆ ಟಿಕೆಟ್ ನೀಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಒಟ್ಟು 55ರಿಂದ 60 ಮಂದಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಶಾಮನೂರು ಶಿವಶಂಕರಪ್ಪ ಮಾಹಿತಿ ನೀಡಿದರು.
ದಾವಣಗೆರೆ ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಗ ಪ್ರಚಾರ ಆರಂಭಿಸಬೇಕಿಲ್ಲ, ಮೊದಲಿನಿಂದಲೂ ಪ್ರಚಾರ ನಡೆಸಲಾಗುತ್ತಿದೆ. ಮುಸ್ಲಿಮರಿಗೆ ಟಿಕೆಟ್ ನೀಡಿಕೆ ವಿಚಾರ ಮುಗಿದ ಅಧ್ಯಾಯ. ನನಗೆ ಟಿಕೆಟ್ ಘೋಷಣೆಯಾದ ಬಳಿಕ ಬೇರೆ ಯಾರಿಗೆ ಕೊಡಲು ಬರುತ್ತದೆ. ಹಾಗಿದ್ದ ಮೇಲೆ ಮುಗಿದ ಹಾಗೆ ಅಲ್ಲವೇ ಎಂದರು.

ತಾಂಡ, ಕ್ಯಾಂಪ್ಗಳ ಜನರಿಗೆ ಹಕ್ಕುಪತ್ರ ವಿತರಣೆ: ಶಾಮನೂರು ಅಸಮಾಧಾನ
ಹಟ್ಟಿ, ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ನಾವೇ ಒಪ್ಪಿಗೆ ನೀಡಿದ್ದರೂ ಸಹ ಅಧಿಕಾರಿಗಳು ನಮ್ಮ ಗಮನಕ್ಕೆ ತಾರದೇ ಏಕಪಕ್ಷೀಯ ನಿರ್ಧಾರ ಕೈಗೊಂಡು ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಅಧಿಕಾರಗಳ ವಿರುದ್ಧ ಡಾ. ಶಾಮನೂರು ಶಿವಶಂಕರಪ್ಪನವರು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹಟ್ಟಿ, ತಾಂಡ, ಕ್ಯಾಂಪ್ಗಳಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಜನರಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಕಾಗೋಡು ತಿಮ್ಮಪ್ಪನವರು ಕಂದಾಯ ಸಚಿವರಾಗಿದ್ದಾಗ ಸರ್ಕಾರಿ ಮತ್ತು ಖಾಸಗಿ ನಿವೇಶನಗಳಲ್ಲಿ ವಾಸಿಸುವವರಿಗೆ ಇರುವವನೇ ಭೂಮಿ ಒಡೆಯ ಎಂಬ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಯಡಿ ಅರ್ಹರನ್ನು ಗುರುತಿಸಿ ನಿವೇಶನದ ಹಕ್ಕು ನೀಡಲಾಗುತ್ತಿದೆ. ನಮ್ಮ ಕ್ಷೇತ್ರದಲ್ಲೇ ಸಾವಿರಾರು ಬಡವರು ನಿವೇಶನ ಇಲ್ಲದೇ ಮನವಿ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ಸೂರು ಇಲ್ಲದವರಿಗೆ ಸೂರು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಅಧಿಕಾರಿಗಳು ಸೂರು ಇಲ್ಲದವರನ್ನು ಗುರುತಿಸಬೇಕು. ಜನಪ್ರತಿನಿಧಿಗಳ ಗಮನಕ್ಕೆ ತಂದು ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದು ಸೂಚ್ಯವಾಗಿ ತಿಳಿಸಿದರು.
ಶಾಸಕ ಎಸ್.ಎ.ರವೀಂದ್ರನಾಥ್, ಸಂಸದ ಜಿ.ಎಂ.ಸಿದ್ದೇಶ್ವರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಡಿಡಿಎಲ್ ಆರ್ ಭಾವನಾ ಅವರು ಮಾತನಾಡಿ ಹಕ್ಕುಪತ್ರ ತೆಗೆದುಕೊಂಡವರು ಯಾರಿಗೂ ಸಹ ಪರಭಾರೆ ಮಾಡದೇ ಸರ್ಕಾರದ ಯೋಜನೆಯನ್ನುಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಲೋಕೇಶ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೊಟೂರು ಬಸವನಗೌಡ, ಎಡಿಎಲ್ಆರ್ ನಾಗಭೂಷಣ್ ಮತ್ತಿತರು ಭಾಗಿಯಾಗಿದ್ದರು.












Click it and Unblock the Notifications