ದಾವಣಗೆರೆ : ಟಿಕೆಟ್ ಬೇಡ ಅಂದ್ರು ಶಾಮನೂರು, ಕಾಂಗ್ರೆಸ್ ಕಂಗಾಲು!
ದಾವಣಗೆರೆ, ಮಾರ್ಚ್ 27 : ದಾವಣಗೆರೆ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಆಸಕ್ತಿ ಇಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಎಐಸಿಸಿ ಶಾಮನೂರು ಶಿವಶಂಕರಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ದಾವಣಗೆರೆ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಿತ್ತು. ಏಪ್ರಿಲ್ 23ರಂದು ದಾವಣಗೆರೆಯಲ್ಲಿ ಚುನಾವಣೆ ನಡೆಯಲಿದೆ.
88 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿಲ್ಲ. ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಿ, ಅವರು ಚುನಾವಣಾ ಕಣಕ್ಕಿಳಿಯಲಿ ಎಂದು ಹೇಳುತ್ತಿದ್ದಾರೆ. ಈಗ ಪಕ್ಷ ಏನು ಮಾಡಲಿದೆ? ಎಂದು ಕಾದು ನೋಡಬೇಕು.
ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ ಅವರು ಗೆಲುವು ಸಾಧಿಸಿದ್ದಾರೆ. ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಜಿ.ಎಂ.ಸಿದ್ದೇಶ್ವರ ಅವರು 4ನೇ ಬಾರಿಯೂ ಕ್ಷೇತ್ರದಿಂದ ಅಭ್ಯರ್ಥಿ. ಆದರೆ, ಕಾಂಗ್ರೆಸ್ಗೆ ಮಾತ್ರ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬುದು ಚಿಂತೆಯಾಗಿದೆ...

ನನಗೆ ಅಚ್ಚರಿಯಾಗಿದೆ
ಕಾಂಗ್ರೆಸ್ ಟಿಕೆಟ್ ಘೋಷಣೆಯಾದಾಗ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ ಅವರು, 'ನನಗೆ ಟಿಕೆಟ್ ಘೋಷಣೆ ಮಾಡಿರುವುದು ಅಚ್ಚರಿ ತಂದಿದೆ. ಕೆಪಿಸಿಸಿ ಅಧ್ಯಕ್ಷರು ಮತ್ತು ವರಿಷ್ಠರ ಜೊತೆ ಚರ್ಚಿಸಿ ಅಂತಿಮ ತೀರ್ಮಾನವನ್ನು ಕೈಗೊಳ್ಳುತ್ತೇನೆ' ಎಂದು ಹೇಳಿದ್ದರು.

ಚುನಾವಣೆಯಲ್ಲಿ ಆಸಕ್ತಿ ಇಲ್ಲ
'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇಲ್ಲ. ನನ್ನ ಬದಲು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ಕೊಡಿ' ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ

ಟಿಕೆಟ್ ಬೇಡ ಎಂದು ಹೇಳಿದ್ದರು
2004, 2009 ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಸೋತಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿಯೂ ಅವರು ದಾವಣಗೆರೆ ಉತ್ತರದಲ್ಲಿ ಸೋಲು ಅನುಭವಿಸಿದ್ದಾರೆ. ಆದ್ದರಿಂದ, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದ್ದರಿಂದ, ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಲಾಗಿತ್ತು.

ಹೈಕಮಾಂಡ್ ಸೂಚನೆ
ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಸಿಗಬೇಕು. ಕುಟುಂಬದವರೇ ಕಣಕ್ಕಿಳಿಯಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು. ಆದ್ದರಿಂದ, ಶಾಮನೂರು ಶಿವಶಂಕರಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು.

ಯಾರಿಗೆ ಸಿಗಬಹುದು ಟಿಕೆಟ್?
ಕಾಂಗ್ರೆಸ್ ನಾಯಕರು ಶಾಮನೂರು ಶಿವಶಂಕರಪ್ಪ ಅವರ ಮನವೊಲಿಸುವ ಸಾಧ್ಯತೆ ಇದೆ. ಅವರು ಒಪ್ಪಿಗೆ ನೀಡದಿದ್ದರೆ ಎಸ್.ಎಸ್.ಮಲ್ಲಿಕಾರ್ಜುನ, ಎಸ್.ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ, ದಾವಣಗೆರೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಇವರಲ್ಲಿ ಯಾರಾದರೂ ಒಬ್ಬರು ಅಭ್ಯರ್ಥಿಯಾಗಬಹುದಾಗಿದೆ.












Click it and Unblock the Notifications