ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಸಿಗದ ಅನುಮತಿ; ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ರದ್ದು
ದಾವಣಗೆರೆ, ಸೆಪ್ಟೆಂಬರ್ 29: ಜಾತಿವಾರು ಸಮೀಕ್ಷೆ ಬಿಡುಗಡೆಗೆ ಆಗ್ರಹಿಸಿ ಹಾಗೂ ಬೆಲೆ ಏರಿಕೆ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು (ಸೆ.29) ದಾವಣಗೆರೆಗೆ ಆಗಮಿಸಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ರವಾಸ ರದ್ದಾಗಿದೆ.
ದಾವಣಗೆರೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಅನುಮತಿ ಸಿಗದ ಕಾರಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ.
ದಾವಣಗೆರೆಯಲ್ಲಿ ಬೆಳಗ್ಗಿಯಿಂದಲೇ ಮಳೆ, ದಟ್ಟ ಮೋಡ ಕವಿದ ವಾತಾವರಣ ಇದ್ದಿದ್ದರಿಂದ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಅವಕಾಶ ಸಿಗಲಿಲ್ಲ. ಮಳೆ-ಮೋಡದಿಂದಾಗಿ ಸಿದ್ದರಾಮಯ್ಯನವರ ಇಂದಿನ ದಾವಣಗೆರೆ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಜಕ್ಕೂರು ಏರ್ಡ್ರೋಂನಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಬೇಕಿತ್ತು. ಆದರೆ ತೀವ್ರ ಮೋಡ ಕವಿದ ವಾತಾವರಣ ಹಾಗೂ ಮಳೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅನುಮತಿ ಸಿಕ್ಕಿಲ್ಲ. ಹೀಗಾಗಿ ದಾವಣೆಗೆರೆಯಲ್ಲಿ ನಡೆಯಲಿರುವ ಜಾತಿ ಗಣತಿ ಅನುಷ್ಠಾನದ ಹೋರಾಟ ಹಾಗೂ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಗೈರಾಗುತ್ತಿದ್ದಾರೆ.
ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜಾತಿವಾರು ಸಮೀಕ್ಷೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಲೆ ಏರಿಕೆ ವಿರೋಧಿಸಿ ಕಿಸಾನ್ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಸಿದ್ದರಾಮಯ್ಯನವರು ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ಹಾಗೂ ದೇವರಾಜ್ ಅರಸ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಇಲ್ಲವೇ, ಬೈಕ್ನಲ್ಲಿ ತೆರಳಿ ಮನವಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದರು.
ದಾವಣಗೆರೆ ಜಿಲ್ಲಾ ಕುರುಬರ ಸಂಘದ ವತಿಯಿಂದ ಮಧ್ಯಾಹ್ನ 1.30ಕ್ಕೆ ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಕುರುಬ ಸಮಾಜದ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು. ಜಿಲ್ಲೆಯಲ್ಲಿ ಕುರುಬರ ಸಂಖ್ಯೆಯೂ ಹೆಚ್ಚಿದ್ದು, ರಾಜಕೀಯವಾಗಿ ಮತ ಸೆಳೆಯುವ ಪ್ರಯತ್ನವನ್ನು ಮಾಡಲಿದ್ದರು.
ದಾವಣಗೆರೆ ನಗರದಾದ್ಯಂತ ಎಲ್ಲೆಂದರಲ್ಲಿ ಸಿದ್ದರಾಮಯ್ಯ ಆಗಮನದ ಬಂಟಿಂಗ್ಸ್, ಬ್ಯಾನರ್, ಕಟೌಟ್ಗಳು ರಾರಾಜಿಸುತ್ತಿವೆ. ಚುನಾವಣೆಗೆ ಇನ್ನು ಸಾಕಷ್ಟು ಸಮಯ ಇದ್ದರೂ ಈಗಿನಿಂದಲೇ ಸಿದ್ದರಾಮಯ್ಯ ಚುನಾವಣಾ ಪ್ರಚಾರ ಆರಂಭಿಸಿದರಾ ಎಂಬ ಪ್ರಶ್ನೆಯೂ ಕಾಡಲಾರಂಭಿಸಿದೆ. ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆ ಆಗಿರುವ ಕಾರಣ ಇಲ್ಲಿಂದಲೇ ಆರಂಭಿಸಿದರೆ ಯಶಸ್ಸು ಗಳಿಸಬಹುದು ಎಂಬ ಲೆಕ್ಕಾಚಾರವೂ ಇದರ ಹಿಂದೆ ಅಡಗಿರಬಹುದು
ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಇನ್ನು ಧರಣಿಯಲ್ಲಿ ಎಚ್.ಎಂ. ರೇವಣ್ಣ, ವಿ.ಆರ್. ಸುದರ್ಶನ್, ಕೆ. ರಮೇಶ್ ಕುಮಾರ್, ವಿ.ಎಸ್. ಉಗ್ರಪ್ಪ, ಲಕ್ಷ್ಮಿ ನಾರಾಯಣ್, ಸಿ.ಎಸ್. ದ್ವಾರಕನಾಥ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸುತ್ತಿದ್ದು, ಪ್ರತಿಭಟನೆಯಲ್ಲಿ 10 ಸಾವಿರ ಮಂದಿ ಭಾಗಿಯಾಗುವ ಸಾಧ್ಯತೆ ಇದೆ.
ಇಡೀ ದಿನ ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು. ಆದರೆ ಇದೀಗ ಪ್ರವಾಸವನ್ನೇ ಸಿದ್ದರಾಮಯ್ಯ ರದ್ದು ಮಾಡಿದ್ದಾರೆ.












Click it and Unblock the Notifications