ದಾವಣಗೆರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಅಂತಿಮ
ದಾವಣಗೆರೆ, ಮಾರ್ಚ್ 30 : ಹಲವಾರು ಸುತ್ತಿನ ಸಭೆ, ಮನವೊಲಿಕೆ ಬಳಿಕ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಅಂತಿಮವಾಗಿದೆ. ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಬಿಜೆಪಿಯಿಂದ ಜಿ.ಎಂ. ಸಿದ್ದೇಶ್ವರ ಅಭ್ಯರ್ಥಿ.
ಎಐಸಿಸಿ 88 ವರ್ಷದ ಶಾಮನೂರು ಶಿವಶಂಕರಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆದರೆ, ಅವರು ವಯಸ್ಸಿನ ಕಾರಣದಿಂದ ಸ್ಪರ್ಧಿಸಲು ನಿರಾಕರಿಸಿದ್ದರು. ಶಾಮನೂರು ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು.
ಇದರಿಂದಾಗಿ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಹೊಸ ತಲೆನೋವು ಉಂಟಾಗಿತ್ತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಲವು ಸುತ್ತಿನ ಸಭೆಯ ಬಳಿಕ ಮೈತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದಾರೆ. ಇದರಿಂದಾಗಿ ಹಲವಾರು ದಿನದ ಗೊಂದಲ ಬಗೆಹರಿದಿದೆ.
ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಏಪ್ರಿಲ್ 4ರ ತನಕ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ...

ದಿನೇಶ್ ಗುಂಡೂರಾವ್ ಮನವೊಲಿಕೆ
ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರು ಸಹ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹಠ ಹಿಡಿದಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಲ್ಲಿಕಾರ್ಜುನ ಅವರ ಮನವೊಲಿಸಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ಸತತ ಸೋಲು ಕಂಡಿದ್ದಾರೆ
ಎಸ್.ಎಸ್.ಮಲ್ಲಿಕಾರ್ಜುನ ಅವರು ಸತತ ಸೋಲುಗಳಿಂದಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ನಿರಾಕರಿಸಿದ್ದರು. ಸತತ ಮೂರು ಲೋಕಸಭಾ ಚುನಾವಣೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದಾರೆ.

ಅವರೇ ಎದುರಾಳಿಗಳು
ಸತತ ಮೂರು ಲೋಕಸಭಾ ಚುನಾವಣೆಗಳಿಂದ ಕಾಂಗ್ರೆಸ್ನ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ಬಿಜೆಪಿಯ ಜಿ.ಎಂ.ಸಿದ್ದೇಶ್ವರ ಅವರು ದಾವಣಗೆರೆ ಕ್ಷೇತ್ರದಲ್ಲಿ ಎದುರಾಳಿಗಳು. ಮೂರು ಚುನಾವಣೆಯಲ್ಲಿಯೂ ಜಿ.ಎಂ.ಸಿದ್ದೇಶ್ವರ ಗೆದ್ದು ಹ್ಯಾಟ್ರಿಕ್ ಬಾರಿಸಿದ್ದಾರೆ. 4ನೇ ಬಾರಿಗೆ ಕಣಕ್ಕಿಳಿಯುತ್ತಿದ್ದು, ಇದು ಕೊನೆಯ ಚುನಾವಣೆ ಎಂದು ಈಗಾಗಲೇ ಹೇಳಿದ್ದಾರೆ.

ಹಲವರ ಹೆಸರು ಕೇಳಿಬಂದಿತ್ತು
ಶಾಮನೂರು ಶಿವಶಂಕರಪ್ಪ ಕುಟುಂಬದವರೇ ಅಭ್ಯರ್ಥಿಯಾಗಬೇಕು ಎಂದು ಕಾಂಗ್ರೆಸ್ ಹೈ ಕಮಾಂಡ್ ಹೇಳಿತ್ತು. ಆದ್ದರಿಂದ, ಶಾಮನೂರು ಶಿವಶಂಕರಪ್ಪ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಅವರು ಸ್ಪರ್ಧೆಗೆ ನಿರಾಕರಿಸಿದ ಬಳಿಕ ಹಲವರ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಶಾಮನೂರು ಕುಟುಂಬಕ್ಕೆ ಟಿಕೆಟ್ ಸಿಕ್ಕಿದೆ.












Click it and Unblock the Notifications