ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ : ಮಾಜಿ ಸಚಿವರ ಸ್ಪರ್ಧೆ
ದಾವಣಗೆರೆ, ಮಾರ್ಚ್ 18 : 'ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರೇ ಸ್ಪರ್ಧಿಸಲಿದ್ದಾರೆ' ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಘೋಷಣೆ ಮಾಡಿದರು.
ಕಳೆದ ಕೆಲವು ದಿನಗಳಿಂದ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬ ಚರ್ಚೆ ಆರಂಭವಾಗಿತ್ತು. ಎಸ್.ಎಸ್.ಮಲ್ಲಿಕಾರ್ಜುನ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲು ಉತ್ಸಾಹ ತೋರಿಸಿರಲಿಲ್ಲ. ಆದ್ದರಿಂದ, ಹಲವು ಹೊಸ ಹೆಸರುಗಳು ಕೇಳಿಬರುತ್ತಿದ್ದವು.
ಶಾಮನೂರು ಕುಟುಂಬಕ್ಕಿಲ್ಲ ದಾವಣಗೆರೆ ಟಿಕೆಟ್, 'ಕೈ' ಅಭ್ಯರ್ಥಿ ಯಾರು?
ದಾವಣಗೆರೆಯಲ್ಲಿ ಮಾತನಾಡಿರುವ ಶಾಮನೂರು ಶಿವಶಂಕರಪ್ಪ ಅವರು, 'ಚುನಾವಣೆಗೆ ನಿಲ್ಲುವುದಾಗಿ ಮಲ್ಲಿಕಾರ್ಜುನ ಹೇಳಿದ್ದಾರೆ. ಪಕ್ಷದ ಟಿಕೆಟ್ ಅವರಿಗೆ ಕೊಡುತ್ತಾರೆ. ಅವರೇ ಗೆಲುವು ಸಾಧಿಸಲಿದ್ದಾರೆ' ಎಂದು ಹೇಳಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಪರಿಚಯ
ಬಿಜೆಪಿಯಿಂದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಅಭ್ಯರ್ಥಿಯಾಗಲಿದ್ದಾರೆ. ಮೂರು ಚುನಾವಣೆಗಳಲ್ಲಿ ಜಯಗಳಿಸಿ ಹ್ಯಾಟ್ರಿಕ್ ಬಾರಿಸಿರುವ ಸಿದ್ದೇಶ್ವರ ಅವರು ನಾಲ್ಕನೇ ಚುನಾವಣೆಯಲ್ಲಿಯೂ ಜಯಗಳಿಸುವ ಉತ್ಸಾಹದಲ್ಲಿದ್ದಾರೆ. ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ..
20 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಸತತ ಸೋಲು ಕಂಡಿದ್ದಾರೆ
ಎಸ್.ಎಸ್.ಮಲ್ಲಿಕಾರ್ಜುನ ಅವರು 2004, 2009 ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಜಿ.ಎಂ.ಸಿದ್ದೇಶ್ವರ ವಿರುದ್ಧ ಸೋತಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಸೋತಿದ್ದಾರೆ. ಈ ಬಾರಿ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಲೋಕಸಭಾ ಚುನಾವಣಾ ಕಣಕ್ಕಿಳಿಯಲಿದ್ದಾರೆ.
ಜಿಲ್ಲಾ ಘಟಕ ಹೆಸರು ಶಿಫಾರಸು ಮಾಡಿತ್ತು
ಏಪ್ರಿಲ್ 23ರಂದು ದಾವಣಗೆರೆಯಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಎಸ್.ಎಸ್.ಮಲ್ಲಿಕಾರ್ಜುನ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದ್ದರಿಂದ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರ ಹೆಸರು ಕೇಳಿಬಂದಿತ್ತು. ಆದರೆ, ಜಿಲ್ಲಾಡಳಿತ ಎಸ್.ಎಸ್.ಮಲ್ಲಿಕಾರ್ಜುನ ಅವರ ಹೆಸರನ್ನು ಚುನಾವಣಾ ಸಮಿತಿಗೆ ಶಿಫಾರಸು ಮಾಡಿತ್ತು.
ಶಾಮನೂರು ಕುಟುಂಬಕ್ಕೆ ಟಿಕೆಟ್
ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಟಿಕೆಟ್ ಕೈ ತಪ್ಪುವುದು ಬೇಡ ಎಂದು ಕಾರ್ಯಕರ್ತರು ಬಯಸಿದ್ದರು. ಎಸ್.ಎಸ್.ಮಲ್ಲಿಕಾರ್ಜುನ ಅವರು ಕಣಕ್ಕಿಳಿಯದಿದ್ದರೆ ಸೊಸೆ ಪ್ರಭಾ ಮಲ್ಲಿಕಾರ್ಜುನ ಅವರಿಗಾದರೂ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದರು. ಅಂತಿಮವಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಣಕ್ಕಿಳಿಯುತ್ತಿದ್ದಾರೆ.
ಶಾಮನೂರು, ಸಿದ್ದೇಶ್ವರ ಕುಟುಂಬದ ಪೈಪೋಟಿ
ದಾವಣಗೆರೆ ಕ್ಷೇತ್ರದ ಚುನಾವಣೆ ಎಂದರೆ ಅದು ಶಾಮನೂರು ಶಿವಶಂಕರಪ್ಪ ಮತ್ತು ಜಿ.ಎಂ.ಸಿದ್ದೇಶ್ವರ ಕುಟುಂಬದ ನಡುವಿನ ಪೈಪೋಟಿ. ಈ ಬಾರಿಯೂ ಇದೇ ಮುಂದುವರೆಯಲಿದೆ. ಈ ಬಾರಿ ಯಾವ ಕುಟುಂಬಕ್ಕೆ ಜಯಸಿಗಲಿದೆ ಎಂದು ಕಾದು ನೋಡಬೇಕು.