ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ದಿನಗಣನೆ: 52 ಕಿ.ಮೀ.ವರೆಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ದಿನರಾರಾಜಿಸಲಿವೆ ಬ್ಯಾನರ್, ಕಟೌಟ್
ದಾವಣಗೆರೆ, ಸೆಪ್ಟೆಂಬರ್ 14: ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಸುಮಾರು 52 ಕಿಲೋಮೀಟರ್ವರೆಗೆ ಬಂಟಿಂಗ್ಸ್, ಬ್ಯಾನರ್, ನಾಯಕರ ಕಟೌಟ್ಗಳು ರಾರಾಜಿಸಲಿವೆ. ನಗರದ ಹೋಟೆಲ್ಗಳಲ್ಲಿ ಈಗಾಗಲೇ 400 ರೂಂ ಬುಕ್ ಮಾಡಲಾಗಿದೆ.
ಸೆಪ್ಟೆಂಬರ್ 18 ಮತ್ತು 19ರಂದು ಎರಡು ದಿನಗಳ ಕಾಲ ದಾವಣಗೆರೆಯಲ್ಲಿ ಕಮಲ ಪಡೆಯ ಘಟಾನುಘಟಿ ನಾಯಕರು ಚಿಂತನ- ಮಂಥನ, ರಾಜಕೀಯ, ಪಕ್ಷ ಸಂಘಟನೆ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಹಾಗೂ ಕಲಬುರಗಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ಲಾನ್, ಸಿಎಂ ಬಸವರಾಜ ಬೊಮ್ಮಾಯಿ ಕೈ ಬಲಪಡಿಸುವುದು, ಪ್ರಧಾನಿ ನರೇಂದ್ರ ಮೋದಿ ಜನಪ್ರಿಯ ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯುವುದು, ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಸೇರಿದಂತೆ ಗಂಭೀರ ವಿಚಾರಗಳ, ಪಕ್ಷದ ಆಂತರಿಕ ವಿಚಾರದ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ.
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್ನಲ್ಲಿ ನಡೆಯಲಿದೆ. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
"ಅಂದು ಬೆಳಿಗ್ಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪದಾಧಿಕಾರಿಗಳಿಗೆ ಮತ್ತಷ್ಟು ಪಕ್ಷ ಸಂಘಟನೆ, ಬಲಪಡಿಸುವ ಕುರಿತಂತೆ ಸಲಹೆ ನೀಡಲಿದ್ದಾರೆ. ನಂತರ ಸೆಪ್ಟಂಬರ್ 19ರಂದು ತ್ರಿಶೂಲ್ ಕಲಾಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು, ಎಂಎಲ್ಸಿಗಳು, ಸಂಸದರು, ಕೇಂದ್ರದ ನಾಲ್ವರು ಸಚಿವರಾದ ಶೋಭಾ ಕರಂದ್ಲಾಜೆ, ಎನ್. ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮವನ್ನು ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಿ ಆಯೋಜಿಸಲಾಗುವುದು," ಎಂದು ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಸೆ.19ರಂದು ಬೆಳಿಗ್ಗೆ 10.30ರಿಂದ 11 ಗಂಟೆಯೊಳಗೆ ಬಿಜೆಪಿ ಕಾರ್ಯಕಾರಿಣಿ ಸಭೆಯ ಉದ್ಘಾಟನೆ ನೆರವೇರಲಿದೆ. ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯಮಟ್ಟದ ಕಾರ್ಯಕಾರಿಣಿ ನಡೆಯುತ್ತಿರುವುದರಿಂದ ದಾವಣಗೆರೆಯನ್ನು ಅಲಂಕಾರಗೊಳಿಸಲಾಗುವುದು. ರಾತ್ರಿ ವೇಳೆ ವಿದ್ಯುದಲಂಕಾರ ಮಾಡಲಾಗುವುದು. ಜನರು ನಮ್ಮೊಟ್ಟಿಗೆ ಸಹಕರಿಸಬೇಕೆಂದು ಮನವಿ ಮಾಡುವುದಾಗಿ," ಹೇಳಿದರು.
"ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಾರ್ಯಕಾರಿಣಿ ಸಭೆ ಸಂಪೂರ್ಣವಾಗಿ ಮಾಡಲು ಆಗಿರಲಿಲ್ಲ. ಶಿವಮೊಗ್ಗ, ಮಂಗಳೂರಿನಲ್ಲಿ ನಡೆದಿದ್ದರೂ ಪೂರ್ಣ ಪ್ರಮಾಣದಲ್ಲಿ ಇರಲಿಲ್ಲ. ಹಲವು ವರ್ಷಗಳ ಬಳಿಕ ಇಲ್ಲಿ ನಡೆಯುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ," ಎಂದರು.
Recommended Video
ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ನಡೆಯುತ್ತಿರುವ ಈ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಸಾಕಷ್ಟು ಕುತೂಹಲ ಹಾಗೂ ಬಿಜೆಪಿ ಪಾಳೆಯಕ್ಕೆ ಪ್ರಮುಖವಾಗಿದೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ದೊಡ್ಡ ಮಟ್ಟದ ಪದಾಧಿಕಾರಿಗಳ ಸಭೆ, ಕೋರ್ ಕಮಿಟಿ ಮೀಟಿಂಗ್, ಕಾರ್ಯಕಾರಿಣಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿಗೂ ಇದೇ ಮೊದಲನೆ ಸಭೆ. ಹಾಗಾಗಿ ಯಾವೆಲ್ಲ ತಂತ್ರಗಾರಿಕೆ ರೂಪಿಸಲು ಚರ್ಚೆ ನಡೆಸಲಾಗುವುದು ಎಂಬ ಬಗ್ಗೆ ಎಲ್ಲರಲ್ಲೂ ನಿರೀಕ್ಷೆ ಗರಿಗೆದರುವಂತೆ ಮಾಡಿದೆ.