ಕಾಂಗ್ರೆಸ್ಗೆ ಕೆಟ್ಟ ಕಾಲ ಶುರು; ಆರ್. ಅಶೋಕ್ ಭವಿಷ್ಯ!
ದಾವಣಗೆರೆ, ಫೆಬ್ರವರಿ 28: "ಮಾಜಿ ಸಿಎಂ ಸಿದ್ದರಾಮಯ್ಯ ಪ್ರಭಾವಿನಾ? ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಭಾವಿನಾ? ಎಂಬ ಸ್ಪರ್ಧೆ ಕಾಂಗ್ರೆಸ್ನಲ್ಲಿ ನಡೆಯುತ್ತಿದೆ. ಮಾಧ್ಯಮದ ಜೊತೆಗೆ ಪ್ರಚಾರದಲ್ಲಿ ಈಗ ಡಿ.ಕೆ. ಶಿವಕುಮಾರ್ ಮಾತ್ರ ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಕಾಣೆಯಾಗಿದ್ದಾರೆ," ಎಂದು ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಆರ್. ಅಶೋಕ್, "ಕಾಂಗ್ರೆಸ್ಗೆ ಕೆಟ್ಟ ಕಾಲ ಶುರುವಾಗಿದೆ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ಸಿಗರಿಗೆ ಜನಹಿತ ಮುಖ್ಯವಲ್ಲ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ?," ಎಂದು ಕಂದಾಯ ಸಚಿವ ಆರ್. ಅಶೋಕ್ ಪ್ರಶ್ನಿಸಿದ್ದಾರೆ.
"ಈ ಹಿಂದೆ ಮೇಕೆದಾಟು ಪಾದಯಾತ್ರೆ ಆರಂಭ ಮಾಡಿ ಕೋವಿಡ್ ಹಿನ್ನೆಲೆ ಅರ್ಧಕ್ಕೆ ನಿಂತು ಹೊಯಿತು. ಈಗ ಉಕ್ರೇನ್ನಲ್ಲಿ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಇದ್ದಾರೆ. ಕಾಂಗ್ರೆಸ್ನವರು ಬಿರಿಯಾನಿ ತಿನ್ನುತ್ತಾ, ಡಾನ್ಸ್ ಮಾಡುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ," ಎಂದು ಕಿಡಿಕಾರಿದರು.

"ಮೇಕೆದಾಟು ವಿಚಾರ ಕೋರ್ಟ್ನಲ್ಲಿ ಇದೆ. ಈ ವಿಚಾರವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕು. ಕಾಂಗ್ರೆಸ್ ಪಾದಯಾತ್ರೆಯಿಂದ ತಮಿಳುನಾಡು ಕೈಗೆ ಅಸ್ತ್ರ ಕೊಟ್ಟಂತಾಗುತ್ತದೆ. ಈ ಹಿಂದೆ ಎಸ್.ಎಂ. ಕೃಷ್ಣ ಅವರು ಸಿಎಂ ಆಗಿದ್ದಾಗ ಕಾವೇರಿ ವಿಚಾರದಲ್ಲಿ ಪಾದಯಾತ್ರೆ ಮಾಡಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಆಗ ಕೋರ್ಟ್ ಛೀಮಾರಿ ಹಾಕಿತ್ತು. ಮೇಕೆದಾಟು ಅಂದರೆ ಕುಡಿಯುವ ನೀರು ಅಂತಾ. ಆದರೆ ಇವರು ನೀರಾವರಿಗೂ ಕೊಡುವುದಾಗಿ ಹೇಳುತ್ತಿದ್ದಾರೆ. ಇಷ್ಟಕ್ಕೂ ಇವರ ಮಾತು ಕೇಂದ್ರ, ರಾಜ್ಯ ಸರ್ಕಾರಗಳು ಕೇಳುತ್ತಿಲ್ಲ. ಯಾವ ಪುರುಷಾರ್ಥಕ್ಕೆ ಈ ಯಾತ್ರೆ?," ಎಂದು ಪ್ರಶ್ನಿಸಿದರು.
ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ
ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳು ಹಾಗೂ ಜನರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರವು ನಿರಂತರ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಉಕ್ರೇನ್ನಲ್ಲಿ ಸಂಕಷ್ಟಕ್ಕೆ ಸಿಲುಕಿರುವವರನ್ನು ರಾಜ್ಯಕ್ಕೆ ಕರೆ ತರಲು ಐಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯದ ಯಾವುದೇ ಮಕ್ಕಳು ಉಕ್ರೇನ್ನಲ್ಲಿ ಸಂಕಷ್ಟದಲ್ಲಿ ಇದ್ದರೆ, ಆ ಬಗ್ಗೆ ಮಾಹಿತಿ ಪಡೆದು ಮುಂದಿನ ಕಾರ್ಯ ನಡೆಸಲಾಗುವುದು ಎಂದರು.
ದೆಹಲಿಯಿಂದ ಬೆಂಗಳೂರಿಗೆ ಬರುವವರ ಎಲ್ಲಾ ಖರ್ಚು ರಾಜ್ಯ ಸರ್ಕಾರವೇ ಭರಿಸುತ್ತದೆ. ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸುರಕ್ಷಿತವಾಗಿ ಕನ್ನಡದ ಮಕ್ಕಳನ್ನು ಕರೆತರಲು ಬದ್ಧವಾಗಿದ್ದೇವೆ. ಪ್ರಧಾನಿ ಹಾಗೂ ರಾಜ್ಯ ಸರ್ಕಾರ ನಿಮ್ಮ ಪರವಾಗಿದೆ. ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.












Click it and Unblock the Notifications