ಉಕ್ಕಡಗಾತ್ರಿ ದೇವಾಲಯಕ್ಕೆ ಈಗ ಜಲದಿಗ್ಬಂಧನದ ಭೀತಿ
ದಾವಣಗೆರೆ, ಆಗಸ್ಟ್ 7: ಮಲೆನಾಡು ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರೆ ಮೈತುಂಬಿ ಹರಿಯುತ್ತಿದ್ದಾಳೆ. ಹೀಗಾಗಿ ದಾವಣಗೆರೆಯ ಹರಿಹರ, ಹೊನ್ನಾಳಿ ಪಟ್ಟಣದ ಪಕ್ಕದಲ್ಲಿ ತುಂಗಭದ್ರ ನದಿ ಉಕ್ಕಿ ಹರಿಯುತ್ತಿದ್ದು, ನದಿ ತಟದಲ್ಲಿರುವ ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದೆ.
ಹರಿಹರದ ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಾಲಯದ ಮುಂಭಾಗಕ್ಕೆ ನದಿ ನೀರು ಹರಿದು ಬಂದಿದ್ದು, ಸ್ನಾನದ ಕಟ್ಟೆ ಸಂಪೂರ್ಣ ಮುಳುಗಡೆಯಾಗಿದೆ. ಕಳೆದ ಬಾರಿ ನದಿ ನೀರಿನ ಪ್ರಮಾಣ ಹೆಚ್ಚಾಗಿ ದೇವಾಲಯದ ಒಳಗೆ ಹರಿದು ಬಂದಿತ್ತು. ಈ ಬಾರಿಯೂ ಜಲದಿಗ್ಬಂಧನವಾಗುವ ಎಲ್ಲಾ ಸಾಧ್ಯತೆ ಇದೆ.

ಇತ್ತ ಹೊನ್ನಾಳಿ ಪಟ್ಟಣದ ಬಾಲರಾಜ್ಘಾಟ್ ನ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚಿಸಿದೆ. ನದಿ ಪಾತ್ರದಲ್ಲಿದ್ದ 6 ಕುಟುಂಬಗಳನ್ನು ಪಟ್ಟಣದ ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಲಾಗಿದೆ. ತುಂಗಭದ್ರಾ ನದಿ ಪಾತ್ರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಎಚ್ಚರಿಕೆ ಕೊಟ್ಟಿದೆ.












Click it and Unblock the Notifications