ಶಾಮನೂರು ಪುತ್ರನ ಒಡೆತನದ ಕಾರ್ಖಾನೆಯಿಂದ ಜನರಿಗೆ ಸಂಕಷ್ಟ: ಜ.19ಕ್ಕೆ ರಸ್ತೆ ತಡೆ
ದಾವಣಗೆರೆ, ಜನವರಿ 16: ಕುಕ್ಕುವಾಡ ಗ್ರಾಮದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪರ ಪುತ್ರ ಎಸ್. ಎಸ್. ಗಣೇಶರ ಒಡೆತನದ ದಾವಣಗೆರೆ ಸಕ್ಕರೆ ಕಂಪನಿ ಪ್ರತಿ ದಿನ ಹೊರ ಸೂಸುವ ಹೊಗೆಯಿಂದ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಜನರು ಬದುಕುವುದು ದುಸ್ತರವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯ ನಿರ್ಲಕ್ಷ್ಯ ವಿರೋಧಿಸಿ ಜನವರಿ 19ರ ಗುರುವಾರ ಬೆಳಗ್ಗೆ 11 ಗಂಟೆಗೆ ಕುಕ್ಕುವಾಡ ಗ್ರಾಮದಲ್ಲಿನ ಚನ್ನಗಿರಿ ರಸ್ತೆ ತಡೆ ಮಾಡಲಾಗುವುದು ಎಂದು ರೈತ ಒಕ್ಕೂಟದ ಮುಖಂಡ ಬಿ.ಎಂ. ಸತೀಶ್ ಆರೋಪಿಸಿದರು.
ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ನಿತ್ಯ ಸಕ್ಕರೆ ಕಾರ್ಖಾನೆಯ ಚಿಮಣಿಯಿಂದ ಬೂದಿ ಹೊರಬರುತ್ತಿದೆ. ಹಂಚಿನ ಮನೆಗಳ ಮೇಲೆ ಈ ಬೂದಿ ಬಿದ್ದು ಶೇಖರವಾಗಿ ಗಾಳಿಯಲ್ಲಿ ಎಲ್ಲಾ ಕಡೆ ಪಸರಿಸುತ್ತದೆ. ಊಟ ಮಾಡುವಾಗ ತಟ್ಟೆಯಲ್ಲಿ ಬೀಳುವುದರಿಂದ ಇದನ್ನೇ ಊಟ ಮಾಡಿದ ಜನರು ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಒಣ ಹಾಕಿದ ಬಟ್ಟೆಗಳ ಮೇಲೆ ಈ ಬೂದಿ ಬೀಳುವುದರಿಂದ ಬೂದು ಬಣ್ಣಕ್ಕೆ ತಿರುಗುತ್ತಿವೆ ಎಂದು ಹೇಳಿದರು.
ಹುಲ್ಲು, ಗಿಡಗಂಟಿಗಳ ಮೇಲೆ ಬೂದಿ ಬೀಳುವುದರಿಂದ ಈ ಹುಲ್ಲನ್ನೇ ಜಾನುವಾರುಗಳು, ಕುರಿ, ಮೇಕೆಗಳು ಮೇಯುವುದರಿಂದ ಇವುಗಳು ಸಹ ಸರಿಯಾದ ಬೆಳವಣಿಗೆ ಇಲ್ಲದೆ ರೋಗಗ್ರಸ್ತವಾಗಿವೆ. ಇದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಮಾಡುತ್ತಿರುವ ರೈತರು ನಷ್ಟದ ಸಂಕಷ್ಟಕ್ಕೀಡಾಗಿದ್ದಾರೆ ಎಂದರು.

ನಿತ್ಯ ಜನರು ಸೇರಿದಂತೆ ಪಶುಗಳು ಹೊಗೆಯಿಂದ ಬರುವ ಬೂದಿ ತಿಂದು ಬದುಕಬೇಕಾಗಿದೆ. ಒಂದು ದಿನವೂ ಬಿಳಿ ಅಥವಾ ಸ್ವಚ್ಛ ಬಟ್ಟೆ ಧರಿಸುವಂತಿಲ್ಲ. ಈ ಭಾಗದ ರೈತರು ಬೆಳೆದಿರುವ ಭತ್ತ ಕಪ್ಪಾಗುತ್ತಿದೆ. ಇದರಿಂದ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಕಡಿಮೆಯಾಗುತ್ತಿದೆ ಎಂದು ರೈತರ ಸ್ಥಿತಿಯ ಬಗ್ಗೆ ತಿಳಿಸಿದರು.
ಈ ಸಕ್ಕರೆ ಕಾರ್ಖಾನೆಯಿಂದ ಹೊರಸೂಸುವ ವಿಷಯುಕ್ತ ತ್ಯಾಜ್ಯ ನೀರನ್ನು ಹಳ್ಳಕ್ಕೆ ಬಿಡಲಾಗುತ್ತಿದೆ. ಈ ನೀರಿನಲ್ಲಿ ಆಸಿಡ್ ಇದ್ದು, ಹಳ್ಳದಲ್ಲಿರುವ ಮೀನು ಮತ್ತು ಇತರೆ ಜಲಚರ ಜೀವಿಗಳು ಸತ್ತಿವೆ. ಸುತ್ತಮುತ್ತಲ ಗ್ರಾಮಗಳ ರೈತರು ಇದೇ ನೀರನ್ನು ಪಂಪ್ ಸೆಟ್ಗಳ ಮೂಲಕ ಜಮೀನುಗಳಿಗೆ ಪೂರೈಕೆ ಮಾಡುತ್ತಿದ್ದಾರೆ. ಇದರಿಂದ ಎಲ್ಲಾ ರೈತರ ಜಮೀನು ವಿಷಯುಕ್ತವಾಗಿವೆ ಎಂದು ಆರೋಪಿಸಿದರು.
ಮಣ್ಣಿನಲ್ಲಿರುವ ಜೀವಾಣುಗಳು ನಾಶವಾಗಿದ್ದು, ಯಾರ ಜಮೀನಿನಲ್ಲಿಯೂ ಎರೆ ಹುಳು ಕಾಣಿಸುವುದಿಲ್ಲ. ಈ ಜಮೀನಿನಲ್ಲಿ ಬೆಳೆ ಇಳುವರಿ ಬಹಳ ಕಡಿಮೆ ಆಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಳ್ಳಿಗಳ ಜನರ ಬದುಕು ಬೂದಿಮಯವಾಗಿ ಬರ್ಬಾದಾಗಿದೆ. ವಿಷಯುಕ್ತ ಬೂದಿ ಮಿಶ್ರಿತ ಗಾಳಿ ಮತ್ತು ವಿಷ ಮಿಶ್ರಿತ ನೀರಿನಿಂದ ಜನರ ಪಶುಗಳ ಉಸಿರಾಟ ಕಷ್ಟಕರವಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ಬಿ. ಹಾಲಪ್ಪ, ಬಲ್ಲೂರು ಬಸವರಾಜಪ್ಪ,ನಾಗರಾಜ್ ಆಮಟಿ, ಕನಗೊಂಡನಹಳ್ಳಿ ವೈ.ಎನ್. ತಿಪ್ಪೇಸ್ವಾಮಿ, ಬಲ್ಲೂರು ಬಕ್ಕೇಶಯ್ಯ, ಎಂ.ಬಿ. ಗುತ್ಯಪ್ಪ, ಚನ್ನಪ್ಪ, ಅಂಜಲಿ ಜ್ಯೋತಿಕಾರ್ ಹಾಗೂ ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications