ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುವುದು ನಮ್ಮಿಂದ ಆಗದು; ಶಾಮನೂರು ಶಿವಶಂಕರಪ್ಪ
ದಾವಣಗೆರೆ, ಜುಲೈ 8: ಹದಿನಾರು ತಿಂಗಳ ಶಿಷ್ಯ ವೇತನಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ 10ನೇ ದಿನಕ್ಕೆ ಮುಂದುವರೆದಿದೆ. ಇಂದು ವಿದ್ಯಾರ್ಥಿಗಳು ಮಳೆಯಲ್ಲಿಯೇ ಜಯದೇವ ವೃತ್ತದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ವೈದ್ಯಕೀಯ ವಿದ್ಯಾರ್ಥಿಗಳು, 16 ತಿಂಗಳಿಂದ ಬಾಕಿ ಇರುವ ಶಿಷ್ಯವೇತನ ನೀಡುವಂತೆ ಒತ್ತಾಯಿಸಿ ಸರ್ಕಾರ ಹಾಗೂ ಆಡಳಿತ ಮಂಡಳಿಗೆ ಮನವಿ ಮಾಡುತ್ತಿದ್ದೇವೆ. ವಾರ ಕಳೆದರೂ ನಮ್ಮ ಮನವಿಗೆ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಸರ್ಕಾರಿ ಕೋಟಾದಡಿ ಕಾಲೇಜಿಗೆ ಪ್ರವೇಶ ಪಡೆದಿರುವ ನಾವು ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಜಿಲ್ಲಾಸ್ಪತ್ರೆಯು ಶೇ.90ರಷ್ಟು ನಮ್ಮ ಸೇವೆಯನ್ನೇ ಅವಲಂಬಿಸಿದೆ. ಕೊರೊನಾ ಸೋಂಕಿತರ ಚಿಕಿತ್ಸೆಯಲ್ಲೂ ಮುಂಚೂಣಿಯಲ್ಲಿದ್ದುಕೊಂಡು ರೋಗ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದೇವೆ. ಆದರೂ ನಮಗೆ 16 ತಿಂಗಳಿನಿಂದ ಶಿಷ್ಯವೇತನವನ್ನೇ ನೀಡಿಲ್ಲ ಎಂದು ದೂರಿದರು.
ಕಾಲೇಜು ಆರಂಭವಾದಂದಿನಿಂದ ಸರ್ಕಾರವೇ ಸ್ಟೈಪೆಂಡ್ ನೀಡುತ್ತಿತ್ತು. ಇದೀಗ ಕಾಲೇಜಿನ ಆಡಳಿತ ಮಂಡಳಿ ನೀಡಬೇಕೆಂದು ಸರ್ಕಾರ ಹೇಳುತ್ತಿದೆ. ಆದರೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸರ್ಕಾರಕ್ಕೆ ತಿಳಿಸಿದ್ದೇನೆ ಎನ್ನುತ್ತಿದ್ದಾರೆ. ಸರ್ಕಾರ ಹಾಗೂ ಆಡಳಿತ ಮಂಡಳಿ ಹಗ್ಗ-ಜಗ್ಗಾಟದಲ್ಲಿ ಬಡ, ಮಧ್ಯಮ ವರ್ಗ ಕುಟುಂಬದ ನಾವು ಸಂಕಷ್ಟ ಅನುಭವಿಸುವಂತಾಗಿದೆ. ಈ ವಿಷಯವಾಗಿ ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡಿದ್ದಾರೆ.

"ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುವುದು ನಮ್ಮಿಂದ ಆಗದು" ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ. ತಮ್ಮ ನಿವಾಸಕ್ಕೆ ಭೇಟಿ ನೀಡಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಪಷ್ಟಪಡಿಸಿದ ಅವರು, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಪ್ರತಿಭಟನೆ ಮುಂದುವರೆಸಿ ಪರಿಹಾರ ಸಿಗುವ ತನಕ ಹೋರಾಡಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಭೆ ನಡೆದಿತ್ತು. ಅಲ್ಲಿಯೂ ಇದನ್ನೇ ಹೇಳಿದ್ದೇನೆ. ಸರ್ಕಾರವೇ ಮೊದಲಿನಿಂದ ಶಿಷ್ಯವೇತನ ಭರಿಸುತ್ತಿದೆ. ಅದನ್ನು ಮುಂದುವರೆಸಬೇಕು. ಅದನ್ನು ಬಿಟ್ಟು ಆಡಳಿತ ಮಂಡಳಿ ನೀಡುತ್ತದೆ ಎಂದು ಹೇಳುವುದು ಸರಿಯಲ್ಲ ಎಂದರು.












Click it and Unblock the Notifications