ವನ್ಯಜೀವಿಗಳ ಮೂಳೆಗಳು ಪತ್ತೆ ಪ್ರಕರಣ; ಎಸ್.ಎಸ್. ಮಲ್ಲಿಕಾರ್ಜುನ್ ಬಂಧನ ಆಗಬೇಕು: ಸಂಸದ ಜಿ.ಎಂ. ಸಿದ್ದೇಶ್ವರ್
ದಾವಣಗೆರೆ, ಡಿಸೆಂಬರ್, 25: ದಾವಣಗೆರೆ ಕಲ್ಲೇಶ್ವರ ರೈಸ್ ಮಿಲ್ನಲ್ಲಿ ವನ್ಯಜೀವಿಗಳ ಮೂಳೆಗಳು ಪತ್ತೆಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಫ್ಒ ಸೂಕ್ತ ಕ್ರಮ ಕೊಳ್ಳದೆ ಯಾರದ್ದೋ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ. ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಂಡಿಲ್ಲ, ತನಿಖೆಯನ್ನೂ ಮಾಡಿಲ್ಲ. ಅದು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಒಡೆತನದ ಮಿಲ್ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಕೂಡಲೇ ಮಲ್ಲಿಕಾರ್ಜುನ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತನಾಡಿದ್ದೇನೆ. ಹಾಗೆಯೇ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಶಾಸಕರು ಈ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂದು ಜಿ.ಎಂ. ಸಿದ್ದೇಶ್ವರ್ ದಾವಣಗೆರೆಯಲ್ಲಿ ಹೇಳಿದರು.
ಜಿಎಂಐಟಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಡಿಎಫ್ಒ ನನ್ನ ಕೈಗೂ ಸಿಕ್ಕಿಲ್ಲ. ಮಾಧ್ಯಮವರ ಕೈಗೂ ಸಿಗದೇ ತಲೆಮರೆಸಿಕೊಂಡಿರಬಹುದು. ಇಲ್ಲವೇ ಯಾರೋ ಕಿಡ್ನಾಪ್ ಮಾಡಿರಬೇಕು. ಇಲ್ಲದಿದ್ದರೆ ಎಲ್ಲೋ ಹೋಗಿರಬೇಕು ಎಂದು ಅನುಮಾನ ವ್ಯಕ್ತಪಡಿಸಿದರು.
ಇಂತಹ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಿ, ದಕ್ಷ ಅಧಿಕಾರಿಯನ್ನು ನೇಮಿಸುವಂತೆ ಮನವಿ ಮಾಡುತ್ತೇನೆ. ಸೋಮವಾರ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗಬೇಕು. ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯ ವರದಿ ಕೇಳಿದೆ. ಅವರು ಏನು ನೀಡುತ್ತಾರೆ ಎಂಬುದನ್ನು ನೋಡಿಕೊಂಡು ಮುಂದಿನ ಕ್ರಮದ ಬಗ್ಗೆ ಸಂಬಂಧಪಟ್ಟವರ ಜೊತೆ ಚರ್ಚಿಸುತ್ತೇನೆ. ಡಿಎಫ್ಒ ತಪ್ಪು ಮಾಡಿದ್ದರೆ ಅಮಾನತು ಮಾಡಬೇಕು. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂಬುದಾಗಿ ಕೇಂದ್ರ ಪರಿಸರ ಮತ್ತು ವನ್ಯಜೀವಿ ವಿಭಾಗದವರ ಜೊತೆಯೂ ಮಾತನಾಡುತ್ತೇನೆ ಎಂದು ತಿಳಿಸಿದರು.

ರೈಸ್ ಮಿಲ್ನಲ್ಲೇ ಪಾರ್ಟಿ ಮಾಡಿದ್ದಾರೆ
ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗುತ್ತಾರೆ ಎಂಬ ಮಾಹಿತಿ ಇದೆ. ಅಲ್ಲಿ ಅವರು ಸಿಕ್ಕರೆ ಈ ಬಗ್ಗೆ ಮಾತನಾಡುತ್ತೇನೆ. ಮಲ್ಲಿಕಾರ್ಜುನ್ ಅವರ ಒಡೆತನದ ರೈಸ್ ಮಿಲ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಅಲ್ಲೇ ಊಟ, ಕೆಲಸ ಹಾಗೂ ಪಾರ್ಟಿ ಮಾಡುತ್ತಾರೆ. ಅವರು ಅಲ್ಲೇ ಹೆಚ್ಚು ಹೊತ್ತು ಇರುತ್ತಾರೆ ಎಂಬುದು ಬಹಿರಂಗವಾಗಿದೆ. ಆದರೂ ಎಫ್ಐಆರ್ ಹಾಗೂ ಕೋರ್ಟ್ಗೆ ಸಲ್ಲಿಸಿರುವ ವರದಿಯಲ್ಲಿ ಕಲ್ಲೇಶ್ವರ ರೈಸ್ ಮಿಲ್ ಆವರಣದ ಸ್ಥಳದ ಮಾಲೀಕರು ನಾಲ್ಕನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ. ಆದರೆ ಅಲ್ಲಿ ಎಸ್. ಎಸ್. ಮಲ್ಲಿಕಾರ್ಜುನ್ ಹೆಸರು ಯಾಕೆ ಉಲ್ಲೇಖಿಸಿಲ್ಲ? ಯಾವ ಒತ್ತಡಕ್ಕೆ ಮಣಿದು ಈ ರೀತಿ ಮಾಡಲಾಗಿದೆ ಎಂಬುದು ತಿಳಿಯುತ್ತಿಲ್ಲ. ಈ ಪ್ರಕರಣ ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ಮಲ್ಲಿಕಾರ್ಜುನ್ ಬಂಧನ ಆಗಲೇಬೇಕು ಎಂದು ಒತ್ತಾಯಿಸಿದರು.

ಮಲ್ಲಿಕಾರ್ಜುನ್ ವಿರುದ್ಧ ಸಿದ್ದೇಶ್ವರ್ ವಾಗ್ದಾಳಿ
ಕಲ್ಲೇಶ್ವರ ರೈಸ್ ಮಿಲ್ ಹಾಗೂ ಗೋಡೌನ್ ಸೀಜ್ ಮಾಡಲೇಬೇಕು. ಹಣವಿದ್ದಾಕ್ಷಣ ಕಾನೂನಿಂದ ಪಾರಾಗಲು ಸಾಧ್ಯವಿಲ್ಲ. ಎಷ್ಟೇ ಬಲಾಢ್ಯರಾದರೂ ಬಿಡಲ್ಲ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ. ಸಿಸಿಬಿ ಪೊಲೀಸರು ಸಿಂಧೆಲ್ ಎಂಬಾತನನ್ನು ಬಂಧಿಸಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿಲ್ಲ ಎನ್ನುತ್ತಿದ್ದಾರೆ. ಇದರಲ್ಲಿ ದ್ವಂದ್ವ ಇದೆ. ಸಂಪನ್ನ ಮುತಾಲಿಕ್ ಪ್ರಕರಣದ ಮೊದಲ ಆರೋಪಿಯನ್ನಾಗಿ ಮಾಡಿದ್ದಾರೆ. ಇನ್ನು ಜಿ.ಎಂ. ಕರಿಬಸವಯ್ಯನನ್ನು ಎರಡನೇ ಆರೋಪಿ, ನಾಲ್ಕನೇ ಆರೋಪಿಯನ್ನು ಯಾಕೆ ಬಂಧಿಸಿಲ್ಲ? ಈ ಬಗ್ಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಈ ಪ್ರಕರಣ ಸಿಸಿಬಿ ಹಾಗೂ ಅರಣ್ಯ ಇಲಾಖೆಯವರ ವ್ಯಾಪ್ತಿಗೆ ಬರುತ್ತದೆ. ನಮ ವ್ಯಾಪ್ತಿಗೆ ಬರುವುದಿಲ್ಲ ಎಂದಿದ್ದಾರೆ ಅಂತಾ ಹೇಳಿದರು.

ನಾಲ್ಕನೇ ಆರೋಪಿಯನ್ನ ಬಂಧಿಸಿಲ್ಲ ಯಾಕೆ?
ಯಾವ ಒತ್ತಡಕ್ಕೆ ಮಣಿದು ಅರಣ್ಯ ಇಲಾಖೆ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ನಾಲ್ಕನೇ ಆರೋಪಿ ಆಗಿರುವ ಸ್ಥಳದ ಮಾಲೀಕ ಎಸ್. ಎಸ್. ಮಲ್ಲಿಕಾರ್ಜುನ್ ಅವರನ್ನು ಮೊದಲ ಆರೋಪಿಯನ್ನಾಗಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಪೊಲೀಸರಾಗಿದ್ದರೆ ಇಷ್ಟೊತ್ತಿಗೆ ಮೂವರು ಆರೋಪಿಗಳನ್ನು ಬಂಧಿಸಿರುತ್ತಿದ್ದರು. ಡಿಎಫ್ಒ ಶಾಮೀಲಾಗಿರುವ ಸಾಧ್ಯತೆ ಇರುವ ಕಾರಣಕ್ಕೆ ಇನ್ನು ಬಂಧನ ಆಗಿಲ್ಲ ಎಂದು ತಿಳಿಸಿದರು. ಈ ವಿಚಾರದಲ್ಲಿ ಸಿಎಂ ಬಗ್ಗೆ ಸುಖಾಸುಮ್ಮನೆೇ ಆರೋಪ ಮಾಡಬಾರದು. ಡಿಎಫ್ಒ ತಪ್ಪು ಮಾಡಿದ್ದು ಸಾಬೀತಾಗಬೇಕು. ಈಗಲೇ ಎಲ್ಲವನ್ನೂ ನಾನು ಹೇಳಲು ಆಗುವುದಿಲ್ಲ. ನಾನು ದೆಹಲಿಯಲ್ಲಿ ಲೋಕಸಭೆ ಅಧಿವೇಶನದಲ್ಲಿ ಪಾಲ್ಗೊಂಡಿದ್ದೆ. ಅಲ್ಲಿ ಬಿಎಸ್ಎನ್ಎಲ್ ನೆಟ್ವರ್ಕ್ ಸಿಗುತ್ತಿರಲಿಲ್ಲ. ಹಾಗಾಗಿ ನಿನ್ನೆ ಈ ವಿಚಾರ ಗೊತ್ತಾಗಿದೆ. ದಾಖಲಾತಿ ಪಡೆದು ಎಲ್ಲವನ್ನೂ ಪರಿಶೀಲಿಸಿ ಈಗ ಮಾತನಾಡುತ್ತಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು. ಈ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಸಿದ್ದು, ಮಲ್ಲಿಕಾರ್ಜುನ್ ವಿರುದ್ಧ ಸಿದ್ದೇಶ್ವರ್ ಆಕ್ರೋಶ
ದಾವಣಗೆರೆಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75 ನೇ ಹುಟ್ಟುಹಬ್ಬದ ವೇಳೆ ಪಾರ್ಟಿ ಮಾಡಲಾಗಿತ್ತು ಎಂದು ಜನರು ಹೇಳುತ್ತಿದ್ದಾರೆ. ಒಂದು ವೇಳೆ ಅಂದು ಸಿದ್ದರಾಮಯ್ಯ ಜಿಂಕೆ, ಕಾಡು ಹಂದಿ ಮಾಂಸ ಸೇರಿದಂತೆ ಬಾಡೂಟ ಸೇವಿಸಿರಲೂಬಹುದು ಎಂದು ಹೇಳುತ್ತಿದ್ದಾರೆ. ಇದು ಆಗಿದ್ದರೆ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಪರಿಣಾಮ ಅನುಭವಿಸುತ್ತಾರೆ. ಯಾರೇ ಆಗಲಿ ಕಾನೂನು ಬಾಹಿರವಾಗಿ ವನ್ಯಜೀವಿ ಸಾಕುವ ಹಾಗೆ ಇಲ್ಲ. ಪ್ರಾಣಿ ಕೊಂಬು, ಚರ್ಮ ಸಿಕ್ಕರೆ ಪ್ರಾಣಿಗಳು ಎಲ್ಲಿ ಹೋದವು. ಜಿಂಕೆಯ ಕೊಂಬು, ಕೋರೆ ಹಲ್ಲು ಯಾಕೆ ಮಾರಾಟಕ್ಕೆ ಕಳುಹಿಸಿದರು ಎಂಬ ಬಗ್ಗೆಯೂ ತನಿಖೆ ಆಗಬೇಕು.
ಸತ್ಯಾಸತ್ಯತೆ ಹೊರಬರಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಈ ವಿಚಾರದ ಬಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರಕರಣದ ತಾರ್ಕಿಕ ಅಂತ್ಯ ಕಾಣಿಸದೇ ವಿರಮಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ದೂಡಾ ಅಧ್ಯಕ್ಷ ಎ. ವೈ. ಪ್ರಕಾಶ್, ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ. ಎಸ್. ಜಗದೀಶ್, ಜಿಲ್ಲಾ ವಕ್ತಾರ ಶಿವಶಂಕರ್, ಮಹಾನಗರ ಪಾಲಿಕೆ ಮಾಜಿ ಮೇಯರ್ ಎಸ್. ಟಿ. ವೀರೇಶ್, ಸದಸ್ಯರಾದ ಸೋಗಿ ಶಾಂತಕುಮಾರ್, ಸತೀಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications