ನಾಯಕತ್ವ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟ ಡಿಸಿಎಂ
ದಾವಣಗೆರೆ, ಜನವರಿ 07: "ಈಗಂತೂ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಇನ್ನೂ ಎರಡೂವರೆ ವರ್ಷ ಬಿ. ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ" ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸ್ಪಷ್ಟಪಡಿಸಿದರು.
ಗುರುವಾರ ದಾವಣಗೆರೆ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ಸರ್ಕಾರ ಮುನ್ನಡೆಯಲಿದ್ದು, ಪಕ್ಷ ಸಂಘಟನೆಯೂ ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಸದ್ಯ ಅಂತೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ" ಎಂದು ಹೇಳಿದರು.
"ಯಡಿಯೂರಪ್ಪ ಅವರು ನಡೆಸಿದ ಸಭೆಯಲ್ಲಿ ಯಾವುದೇ ಅಸಮಾಧಾನ, ಅಪಸ್ವರವನ್ನು ಯಾವ ಶಾಸಕರು ಹೊರಹಾಕಿಲ್ಲ. ಸಭೆಯಲ್ಲಿ ಭಾಗವಹಿಸಿದ್ದ 180 ಜನ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಿದ್ದಾರೆ. ಹಣಕಾಸಿನ ಸ್ಥಿತಿ-ಗತಿ ನೋಡಿಕೊಂಡು ಅಭಿವೃದ್ಧಿ ಕಾಮಗಾರಿಗೆ ಹಣ ಬಿಡುಗಡೆ ಮಾಡಲಿದ್ದಾರೆ" ಎಂದರು.

"ಪ್ರವಾಹ, ಕೋವಿಡ್ ಸಂಕಷ್ಟದ ಕಾರಣಕ್ಕೆ ಶಾಸಕಿಯರಿಗೆ ನಿರೀಕ್ಷಿತ ಪ್ರಮಾಣದ ಅನುದಾನ ಒದಗಿಸಲಾಗಿಲ್ಲ. ಆದರೆ, ಈ ವರ್ಷ ಶಾಸಕರ ಸಮಸ್ಯೆ ಸರಿದೂಗಿಸುತ್ತೇವೆ" ಎಂದು ಉಪಮುಖ್ಯಮಂತ್ರಿಗಳು ಹೇಳಿದರು.
"ವಲಸಿಗರಿಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ. ಯಡಿಯೂರಪ್ಪನವರು ನ್ಯಾಯ ಕೊಡಿಸುವ ಕೆಲಸ ಮಾಡಲಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ಗೋವಿಂದ ಕಾರಜೋಳ ತಿಳಿಸಿದರು.
ವಯಸ್ಸಿನ ಕಾರಣದಿಂದಾಗಿ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿದೆ. ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.












Click it and Unblock the Notifications