ಕೋವಿಡ್ ಸೋಂಕಿತರ ಸಂಖ್ಯೆ 306; ಎಸ್ಡಿಎಂನಲ್ಲಿ ನಿಯಂತ್ರಣಕ್ಕೆ ಕ್ರಮ
ಧಾರವಾಡ, ನವೆಂಬರ್ 28; ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆಯಾಗಿದೆ. ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ.
ಜಿಲ್ಲಾಧಿಕಾರಿ ನಿತೇಶ್. ಕೆ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ, "ಎಸ್ಡಿಎಂ ಆಸ್ಪತ್ರೆಯಲ್ಲಿ ಹರಡಿರುವ ಕೋವಿಡ್ ಸೋಂಕನ್ನು ಆ ವಲಯದಲ್ಲಿಯೇ ನಿಯಂತ್ರಿಸಲು ಕಂಟೇನ್ಮೆಂಟ್ ವಲಯದಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ" ಎಂದು ಹೇಳಿದ್ದಾರೆ.
ಧಾರವಾಡ; ಕೋವಿಡ್ ಪತ್ತೆ, ಎಸ್ಡಿಎಂ ಹೊರರೋಗಿ ವಿಭಾಗ ಬಂದ್
ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, "ಮುಖ್ಯಮಂತ್ರಿಗಳು ಧಾರವಾಡ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು ಮತ್ತಿತರ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಹಾಗೂ ಲಸಿಕಾಕರಣ ಹೆಚ್ಚಳಕ್ಕೆ ಹಲವು ಸೂಚನೆಗಳನ್ನು ನೀಡಿದ್ದಾರೆ" ಎಂದರು.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋವಿಡ್ ರೂಪಾಂತರ ತಳಿ 'ಒಮಿಕ್ರೋನ್' ಬಗ್ಗೆ ಏನು ಹೇಳಿದ್ದಾರೆ
"ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಹರಡಿರುವ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿ ಕೋವಿಡ್ ತಪಾಸಣೆ ಹೆಚ್ಚಿಸಲಾಗುವುದು. ಆಸ್ಪತ್ರೆಯ ಹೊರರೋಗಿಗಳ ವಿಭಾಗದ ಸೇವೆಗಳ ಸ್ಥಗಿತ, ಸಾರ್ವಜನಿಕರ ಪ್ರವೇಶ ನಿರ್ಬಂಧ ಮುಂದುವರೆಸಲಾಗುವುದು" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಕೋವಿಡ್ ಭೀತಿ: ಷೇರುಪೇಟೆಯಲ್ಲಿ 6.5 ಲಕ್ಷ ಕೋಟಿ ಹೂಡಿಕೆ ರು ನಷ್ಟ
"ಜಿಲ್ಲೆಯಲ್ಲಿ ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಕೈಬಿಡಲು ಸಾರ್ವಜನಿಕರಿಗೆ ಸಲಹೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸುವ ಹೊಸ ಮಾರ್ಗಸೂಚಿ, ನಿರ್ದೇಶನಗಳನ್ನು ಜಾರಿಗೊಳಿಸಲಾಗುವುದು. ಎರಡನೇ ಡೋಸ್ ಲಸಿಕೆ ಬಾಕಿ ಇರುವವರಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಿ, ಲಸಿಕೆ ಪಡೆಯಲು ಸೂಚಿಸಲಾಗುತ್ತಿದೆ" ಎಂದು ವಿವರಣೆ ನೀಡಿದರು.
306 ಜನರಿಗೆ ಸೋಂಕು; ಎಸ್ಡಿಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಶನಿವಾರ ಮತ್ತೆ 77 ಜನರಲ್ಲಿ ದೃಢಪಟ್ಟಿದೆ. ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಶನಿವಾರದ 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಭಾನುವಾರ ಮತ್ತೆ 25 ಪ್ರಕರಣ ದೃಢಪಟ್ಟಿದೆ, ಒಟ್ಟು ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆಯಾಗಿದೆ.
ಕೋವಿಡ್ ಪರೀಕ್ಷೆಗೆ ಮಾದರಿ ಸಂಗ್ರಹ ಮಾಡಿರುವ ಇನ್ನೂ 1,822 ಜನರ ತಪಾಸಣಾ ವರದಿ ಬರಬೇಕಾಗಿದೆ. ವರದಿಯಾಗಿರುವ 281 ಪ್ರಕರಣಗಳಲ್ಲಿ, ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಜನರಲ್ಲಿ ರೋಗದ ಲಕ್ಷಣಗಳು ಇಲ್ಲ.
ಶುಕ್ರವಾರ ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಓ ಡಾ. ಬಿ. ಸುಶೀಲಾ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಯಶವಂತ ಮದೀನಕರ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಆಸ್ಪತ್ರೆ ಆವರಣಕ್ಕೆ ಭೇಟಿ ನೀಡಿದ್ದರು. ಆಸ್ಪತ್ರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರವಿಕುಮಾರ ಸುರಪುರ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಎಸ್ಡಿಎಂ ಆಡಳಿತ ಮಂಡಳಿಯೂ ಕೂಡಲೇ ಸ್ಪಷ್ಠ ಕ್ರಿಯಾಯೋಜನೆ ರೂಪಿಸಿಕೊಂಡು ಆಸ್ಪತ್ರೆ ಆವರಣಕ್ಕೆ ಆಯ್ದ ಕೆಲವೇ ವೈದ್ಯರು ಮತ್ತು ಸಿಬ್ಬಂದಿಗೆ ಮಾತ್ರ ಪ್ರವೇಶ ಸೀಮಿತಗೊಳಿಸಬೇಕು ಎಂದು ಹೇಳಿದ್ದರು.
Recommended Video
ಸೋಂಕು ಸದ್ಯ ಆಸ್ಪತ್ರೆ ಆವರಣದಲ್ಲಿ ಮಾತ್ರ ಇರುವುದರಿಂದ ಬಹಳ ಎಚ್ಚರಿಕೆ ವಹಿಸಿ. ನಿಯಂತ್ರಣಕ್ಕೆ ಕ್ರಿಯಾಯೋಜನೆ ರೂಪಿಸಿ, ಜಾರಿಗೊಳಿಸಿಬೇಕು. ಜಿಲ್ಲಾಡಳಿತ, ಪೊಲೀಸ್ ಈಗಾಗಲೇ ಮುನ್ನೆಚ್ಚರಿಕೆ ವಹಿಸಿ ತೆಗೆದುಕೊಂಡಿರುವ ಕ್ರಮಗಳು ಉತ್ತಮವಾಗಿವೆ. ಎಸ್ಡಿಎಂ ಆಡಳಿತ ಮಂಡಳಿಯೂ ಕೂಡಾ ಸಹಕಾರ ನೀಡಬೇಕು ಎಂದು ಹೇಳಿದ್ದರು.