84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಧಾರವಾಡ, ನವೆಂಬರ್ 16 : 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಗಿದೆ. 2019ರ ಜನವರಿಯಲ್ಲಿ ಧಾರವಾಡದಲ್ಲಿ ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಧಾರವಾಡದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದರು. 2019ರ ಜನವರಿ 4, 5 ಮತ್ತು 6 ರಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
'ಬಜೆಟ್ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕಳುಹಿಸಲಾಗಿದೆ. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ. ಸಮ್ಮೇಳನ ಸ್ಥಳದ ಬಗ್ಗೆ ಕೆಲವು ಗೊಂದಲಗಳಿರುವುದು ತಿಳಿದಿದೆ. ಸೂಕ್ತವಾದ ಸ್ಥಳವನ್ನು ಅಂತಿಮಗೊಳಿಸಲಾಗುವುದು' ಎಂದು ಆರ್.ವಿ.ದೇಶಪಾಂಡೆ ಹೇಳಿದರು.

ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರೂಪಿಸಲಾಗಿರುವ ಲಾಂಛನ ಹಾಗೂ ವೆಬ್ಸೈಟ್ನ್ನು ಸಚಿವರು ಅನಾವರಣಗೊಳಿಸಿದರು. ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಧ್ವಜ, ಭುವನೇಶ್ವರಿ ಭಾವಚಿತ್ರ, ಕನ್ನಡ ಸಾಹಿತ್ಯ ಪರಿಷತ್ ಲಾಂಛನ, ಕರ್ನಾಟಕ ಕಾಲೇಜು, ಕರ್ನಾಟಕ ವಿ.ವಿ., ಕರ್ನಾಟಕ ವಿದ್ಯಾವರ್ಧಕ ಸಂಘ, ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ಪ್ರತಿಮೆಗಳನ್ನು ಲಾಂಛನ ಒಳಗೊಂಡಿದೆ.
ಸ್ಥಳೀಯ ಕಲಾವಿದ ಮಹೇಶ್ ಪತ್ತಾರ ರಚಿಸಿದ ಈ ಲಾಂಛನವನ್ನು ತಜ್ಞರ ಸಮಿತಿ ಅಂತಿಮಗೊಳಿಸಿದೆ. ಸಮ್ಮೇಳನದ ಚಟುವಟಿಕೆಗಳ ಎಲ್ಲ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸಲು ವೆಬ್ಸೈಟ್ ಆರಂಭಿಸಲಾಗಿದೆ.











Click it and Unblock the Notifications