ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ: ವಿವರ ಇಲ್ಲಿದೆ
ಧಾರವಾಡ, ಸೆಪ್ಟೆಂಬರ್ 05: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಂಘ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ, ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಕೂಡಲೇ ಅರ್ಜಿ ಸಲ್ಲಿಸಿ ಎಂದು ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ 25,000 ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಅಲ್ಲದೇ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ ತಲಾ 1,00,000 ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಮಕ್ಕಳ ದಿನಾಚರಣೆಯೆಂದು ಪ್ರದಾನ ಮಾಡಿ ಗೌರವಿಸಲಾಗುತ್ತದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳು ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ವಿವರ
6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ತಲಾ 10,000 ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಲಾಗುತ್ತದೆ.
ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆ ಮಾಡಿದ ಘಟನೆಗಳು ಅಕ್ಟೋಬರ್ 1, 2023 ರಿಂದ ಜುಲೈ 31, 2024 ರೊಳಗೆ ನಡೆದಿರಬೇಕು. ಅಲ್ಲದೇ ಆಗಸ್ಟ್ 1, 2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಅರ್ಹರು ಅರ್ಜಿ ನಮೂನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪನಿರ್ದೇಶಕರ ಕಛೇರಿಗೆ ಸಪ್ಟೆಂಬರ್ 20, 2024 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications