ಪ್ರಹ್ಲಾದ್ ಜೋಶಿ ಭೇಟಿಯಾದ ಬಸವರಾಜ ಬೊಮ್ಮಾಯಿ!
ಧಾರವಾಡ, ಜುಲೈ 25; ಕರ್ನಾಟಕದ ರಾಜಕೀಯದಲ್ಲಿ ಹಲವು ಬೆಳವಣಿಗೆ ನಡೆಯುತ್ತಿವೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾಗಿ ಮಾತುಕತೆ ನಡೆಸಿದರು.
ಶನಿವಾರ ರಾತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ನಿವಾಸದಲ್ಲಿ ಪ್ರಹ್ಲಾದ್ ಜೋಶಿ ಭೇಟಿ ಮಾಡಿದರು. ಇಬ್ಬರು ನಾಯಕರು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿಗಳ ಬದಲಾವಣೆ ಸಮಯದಲ್ಲಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿಗಳು ಬದಲಾವಣೆಯಾದರೆ ಆ ಸ್ಥಾನಕ್ಕೆ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ ಹೆಸರುಗಳು ಕೇಳಿ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಉಭಯ ನಾಯಕರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, "ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಮಳೆಯ ಬಳಿಕ ನನ್ನ ಶಿಗ್ಗಾವಿ ಕ್ಷೇತ್ರದಲ್ಲಿನ ಪ್ರವಾಹ ಪರಿಸ್ಥಿತಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಚರ್ಚಿಸಲಾಗಿದೆ. ಯಾವುದೇ ರಾಜಕೀಯದ ವಿಚಾರ ಚರ್ಚಿಸಿಲ್ಲ" ಎಂದರು.
ಭಾನುವಾರ ಮತ್ತು ಸೋಮವಾರ ಕರ್ನಾಟಕದಲ್ಲಿ ಹಲವು ರಾಜಕೀಯ ಬೆಳವಣಿಗೆ ನಡೆಯುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಸೋಮವಾರಕ್ಕೆ 2 ವರ್ಷ ಆಗಲಿದೆ. ಈ ನಡುವೆ ಮುಖ್ಯಮಂತ್ರಿಗಳ ಬದಲಾವಣೆ ಸುದ್ದಿ ದಟ್ಟವಾಗಿ ಹಬ್ಬಿದೆ.
ಶನಿವಾರ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಹ್ಲಾದ್ ಜೋಶಿ ಪಾಲ್ಗೊಂಡಿದ್ದರು. ಸಂಸತ್ ಅಧಿವೇಶನ ಎರಡು ದಿನಗಳ ಕಾಲ ಇಲ್ಲದ ಕಾರಣ ಅವರು ಕ್ಷೇತ್ರಕ್ಕೆ ಆಗಮಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ್ದ ಜೋಶಿ, "ಮುಖ್ಯಮಂತ್ರಿ ಹುದ್ದೆಗೆ ನಾನು ಫ್ರಂಟ್ ರನ್ನರೂ ಅಲ್ಲ, ಬ್ಯಾಕ್ ರನ್ನರೂ ಅಲ್ಲ. ಈ ಕುರಿತು ಪಕ್ಷದ ವರಿಷ್ಠರು ಸಹ ನನ್ನ ಜೊತೆ ಯಾವುದೇ ಚರ್ಚೆ ಮಾಡಿಲ್ಲ" ಎಂದು ಹೇಳಿದ್ದರು.
"ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ. ಎಸ್. ಯಡಿಯೂರಪ್ಪ ಅವರಿಗೆ ಪಕ್ಷದ ವರಿಷ್ಠರು ಹೇಳಿದ್ದಾರೋ ಬಿಟ್ಟಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆ ಮತ್ತು ಮುಂದಿನ ಸಿಎಂ ಯಾರಾಗಬೇಕು ಎಂಬ ತೀರ್ಮಾನವನ್ನು ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಾರೆ" ಎಂದು ಸ್ಪಷ್ಟಪಡಿಸಿದ್ದರು.
ಕುತೂಹಲ ಮೂಡಿಸಿದ ಭೇಟಿ; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗುರುವಾರ ನಾಯಕತ್ವ ಬದಲಾವಣೆ ಬಗ್ಗೆ ಮೊದಲ ಬಾರಿ ಮಾತನಾಡಿದರು. "ಇದೇ 26ಕ್ಕೆ ಸರ್ಕಾರ ಎರಡು ವರ್ಷವನ್ನು ಪೂರೈಸುತ್ತದೆ. ಆ ದಿನ ಪಕ್ಷದ ವರಿಷ್ಠರು ಯಾವ ಸಂದೇಶ ಕಳುಹಿಸುತ್ತಾರೋ ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ" ಎಂದು ಹೇಳಿದ್ದರು.
ಯಡಿಯೂರಪ್ಪ ಹೇಳಿಕೆ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುದ್ದಿಗಳಿಗೆ ಇನ್ನಷ್ಟು ಮಹತ್ವ ಬಂದಿದೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಹ್ಲಾದ್ ಜೋಶಿ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications