ಮೇ 18ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ..!
ಧಾರವಾಡ, ಮೇ.12: ಸಭಾಪತಿ ಸ್ಥಾನಕ್ಕೆ ಮೇ.18 ರಂದು ರಾಜೀನಾಮೆ ನೀಡುವುದಾಗಿ ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ವಿಧಾಪರಿಷತ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಾರವಡಲ್ಲಿ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದ ಮುಖಂಡ ಬಸವರಾಜ ಹೊರಟ್ಟಿ ಅವರನ್ನ ಅವಿರೋಧವಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳು ಆಯ್ಕೆ ಮಾಡಿದ್ದವು. ಸದ್ಯ ಜೂನ್ ತಿಂಗಳ ಅಂತ್ಯಕ್ಕೆ ವಿಧಾನ ಪರಿಷತ್ ಸ್ಥಾನ ಅಧಿಕಾರ ಕೊನೆಗೊಳ್ಳಲಿದ್ದು, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಣಿಯಾಗಿದ್ದಾರೆ.
ಮೋಹನ ಲಿಂಬಿಕಾಯಿ ಬಗ್ಗೆ ನನಗೆ ಗೊತ್ತಿಲ್ಲ..!
ಮುಂಬರುವ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಅವರೂ ತಾವೇ ಪರಿಷತ್ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ 'ನನಗೆ ಏನೂ ಗೊತ್ತಿಲ್ಲ. ಬಿಜೆಪಿ ಟಿಕೆಟ್ ವಿಚಾರವಾಗಿ ಮೇ 18 ರ ನಂತರವೇ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಜೂನ್ 13ಕ್ಕೆ ವಿಧಾನ ಪರಿಷತ್ ಚುನಾವಣೆ..!
ಇನ್ನೂ ಜೂನ್ 13ಕ್ಕೆ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ನಿಗಧಿಯಾಗಿದ್ದು, ವಿಧಾನ ಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.19 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆಗಲಿದೆ. ಮೇ.26 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಮೇ.27 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಜೂನ್.13 ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಜೂನ್.15 ರಂದು ಮತ ಎಣಿಕೆ. ಧಾರವಾಡ, ಉತ್ತರ ಕನ್ನಡ, ಗದಗ, ಹಾವೇರಿ ಜಿಲ್ಲೆಗಳನ್ನೊಳಗೊಂಡು ಈ ಚುನಾವಣೆ ನಡೆಯಲಿದೆ. ಧಾರವಾಡ ಜಿಲ್ಲೆಯಲ್ಲಿ 3162 ಪುರುಷ, 2727 ಮಹಿಳೆಯರ ಸೇರಿದಂತೆ 5889 ಮತದಾರರಿದ್ದಾರೆ. ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ತೆರೆಯಲಾಗುವುದು.
ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿರುವ ಕಾಮಗಾರಿ, ಯೋಜನೆಗಳಿಗೆ ಅನ್ವಯಿಸುವುದಿಲ್ಲ. ಹೊಸ ಕಾಮಗಾರಿಗಳಿಗೆ ಇದು ಅನ್ವಯವಾಗಲಿದೆ. ನಾಮಪತ್ರ ಸಲ್ಲಿಕೆ ಮತ್ತು ಮತ ಎಣಿಕೆಯನ್ನು ಬೆಳಗಾವಿಯ ಪ್ರಾದೇಶಿಕ ಆಯುಕ್ತರು ಶೀಘ್ರವೇ ನಿರ್ಧರಿಸಲಿದ್ದಾರೆ. ಮತದಾರ ಪಟ್ಟಿಯಲ್ಲಿ ಕಂಡು ಬಂದ ದೋಷಗಳನ್ನು ಈಗಾಗಲೇ ಸರಿಪಡಿಸಲಾಗಿದ್ದು, ವಯಸ್ಸಿನ ವ್ಯತ್ಯಾಸದಲ್ಲಿ ಕಂಡು ಬಂದ ಒಂದು ಪ್ರಕರಣವನ್ನು ಈಗಾಗಲೇ ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications