ಯತ್ನಾಳ್ ಉಚ್ಛಾಟನೆ: ಲಿಂಗಾಯತ ಶಾಸಕರು ಬಿಜೆಪಿಯಿಂದ ಹೊರಬರುವಂತೆ ಮಠಾಧೀಶರ ಕರೆ
ಧಾರವಾಡ, ಮಾರ್ಚ್ 27: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಉಚ್ಛಾಟನೆ ಮಾಡಿದ ಬಿಜೆಪಿ ನಾಯಕರ ನಿರ್ಧಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅನೇಕ ಸಂಘಟನೆ ಹಾಗೂ ಸಮುದಾಯದ ಮುಖಂಡರು ಯತ್ನಾಳ್ ಬೆನ್ನಿಗೆ ನಿಂತಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಛಾಟನೆಯನ್ನು ಹಿಂಪಡೆಯುವಂತೆ ಬಿಜೆಪಿಗೆ ಒತ್ತಾಯಿಸುತ್ತಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷವು ಉಚ್ಛಾಟನೆ ಮಾಡಿದ್ದು, ಈ ಉಚ್ಛಾಟನೆ ಹಿಂಪಡೆಯದೇ ಹೋದರೆ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರ ಬನ್ನಿ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.

ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಬಿಜೆಪಿ ಪಕ್ಷದ ವರಿಷ್ಠರು ಯತ್ನಾಳ್ ಅವರ ಉಚ್ಛಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲಾ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ. ಇದರಿಂದ ಯಾರೂ ಧೃತಿಗೆಡಬಾರದು. ನಮ್ಮ ಸಮಾಜಕ್ಕೆ ನಾನು ಕರೆ ಕೊಡುತ್ತೇನೆ. ಬೆಳಗಾವಿಯಲ್ಲಿ ಇಂದು ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಇದು ಪ್ರಧಾನಿ ವಿರುದ್ಧದ ಹೋರಾಟ ಅಲ್ಲ. ಯಾರು ಅಟ್ಟಹಾಸ ಮೆರೆದಿದ್ದಾರೋ ಅವರ ವಿರುದ್ಧ ಹೋರಾಟ. ಬಿಜೆಪಿ ಹೈಕಮಾಂಡ್ ಕೂಡಲೇ ಈ ಆದೇಶ ವಾಪಸ್ ಪಡೆದು ಆದ ತಪ್ಪನ್ನು ಸರಿಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯ ಗಾಂಧಿ ಭವನದಲ್ಲಿ ಗುರುವಾರ ಎಲ್ಲಾ ಪದಾಧಿಕಾರಿಗಳ ಯುವ ಘಟಕ, ರೈತ ಘಟಕದ ಸಭೆ ಕರೆಯುತ್ತೇನೆ. ಯತ್ನಾಳ್ ಉಚ್ಛಾಟನೆ ಹಿಂದೆ ದುಷ್ಟ ಶಕ್ತಿಗಳ ಕೈವಾಡ ಇದೆ. ವೀರೇಂದ್ರ ಪಾಟೀಲ್, ಜೆ.ಎಚ್.ಪಟೇಲ್ರಂತೆ ಯತ್ನಾಳ್ ಅವರಿಗೂ ಮಾಡುತ್ತಿದ್ದಾರೆ. ಹೈಕಮಾಂಡ್ ನಮಗೆ ಕುಟುಂಬ ರಾಜಕಾರಣ ಬೇಕು ಎಂಬುದಾಗಿ ನೇರವಾಗಿ ಹೇಳಲಿ ಎಂದ ಸ್ವಾಮೀಜಿ, ಈ ಬಗ್ಗೆ ಎಲ್ಲವನ್ನೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದೂತ್ವದ ಬಗ್ಗೆಯೇ ಮಾತನಾಡಿದ್ದಾರೆ. ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದ್ದು, ಇದು ಪಕ್ಷಕ್ಕೆ ಹಿನ್ನಡೆ. ಈಗ ಬಿಜೆಪಿ 90 ಸ್ಥಾನ ಬಂದಿದ್ದು, ಮುಂದೆ 30 ಸ್ಥಾನ ಕೂಡ ಬರುವುದಿಲ್ಲ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದರು.












Click it and Unblock the Notifications