ಧಾರವಾಡ ಕಟ್ಟಡ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಧಾರವಾಡ, ಮಾರ್ಚ್ 21: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಸತತ 38 ಗಂಟೆಗಳ ಕಾಲ ಅವಶೇಷಗಳಡಿ ಇದ್ದ ಓರ್ವರನ್ನು ರಕ್ಷಣೆ ಮಾಡಲಾಗಿದೆ ಅದೇ ಸಂದರ್ಭದಲ್ಲಿ ಇನ್ನೊಂದು ಮೃತದೇಹ ಪತ್ತೆಯಾಗಿದೆ. ಇದುವರೆಗೂ 61 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ಅದರಲ್ಲಿ ಉತ್ತರ ಕರ್ನಾಟಕ ಭಾಗದ 12ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿನಿಯರು ಕೂಡ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ಕೂಗು ಕೇಳಿರುವುದಾಗಿ ತಿಳಿಸಿದ್ದಾರೆ. ಅಲ್ಲಿಯೇ ಹೆಣ್ಣುಮಕ್ಕಳ ಪಿಜಿಯೂ ಕೂಡ ಇತ್ತು ಎನ್ನಲಾಗುತ್ತಿದೆ.
ಕುಸಿದ ಕಟ್ಟಡದಲ್ಲಿ ಒಂದು ಕಂಪ್ಯೂಟರ್ ಸೆಂಟರ್ ಇತ್ತು. ಇಲ್ಲಿ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಅವಷೇಶದಡಿ ಸಿಲುಕಿದವರಿಗೆ ನಿರಂತರವಾಗಿ ಪೈಪ್ ಮುಖಾಂತರ ನೀರು ಮತ್ತು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.
ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ 3.40ರ ವೇಳೆಗೆ ಜನ ನೋಡುತ್ತಿದ್ದಂತೆ ಕುಸಿದು ಬಿದ್ದಿತ್ತು. ಈ ಕಟ್ಟಡ ಕಾಮಗಾರಿಯಲ್ಲಿ 100ಕ್ಕೂ ಹೆಚ್ಚು ಮಂದಿ ಇದ್ದರು ಅಂತ ಹೇಳಲಾಗಿತ್ತು. ಈ ಪೈಕಿ 61ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 27 ಮಂದಿಯನ್ನು ಜಿಲ್ಲಾಸ್ಪತ್ರೆ, 13 ಮಂದಿಗೆ ಕಿಮ್ಸ್, 6 ಮಂದಿಗೆ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.