Dharwad: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ನಿರ್ಧಾರ
ಧಾರವಾಡ ಜನತೆಯ ದಶಕಗಳ ಕನಸು ನನಸಾಗಿದೆ. ಹಲವು ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದ್ದು ಹುಬ್ಬಳ್ಳಿ ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟ ಒಪ್ಪಿಗೆ ನೀಡಿದೆ. ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ಮಾಡಲಾಗಿದೆ.
ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆ ಎಂದು ಘೋಷಿಸುತ್ತಿದ್ದಂತೆ ನಗರದ ಜನತೆಗೆ ಸಂಭ್ರಮ ಮುಗಿಲು ಮುಟ್ಟಿತ್ತು. ಧಾರವಾಡ ಪ್ರತ್ಯೇಕ ಧಾರವಾಡ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಧಾರವಾಡ ಮಹನಾಗರ ಪಾಲಿಕೆ ಕಚೇರಿ ಎದುರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ.

2014ರಿಂದಲೇ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಧಾರವಾಡ ನಗರದ ಜನಸಂಖ್ಯೆ 6.5 ಲಕ್ಷ ದಾಟಿದ್ದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡ ಜನರು ಒತ್ತಾಯಿಸಿದ್ದರು. ಮಹಾನಗರ ಪಾಲಿಕೆ ರಚನೆ ಮಾಡಲು ನಗರದ ಜನಸಂಖ್ಯೆ 3.5 ಲಕ್ಷದ ಮೇಲಿರಬೇಕು. ಇದೀಗ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಘೋಷಿಸಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಧಾರವಾಡ ಮಹಾನಗರ ಪಾಲಿಕೆ ರಚಿಸುವ ಬಗ್ಗೆ ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, "ಮೂರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಊರಾಗಿರುವ ಧಾರವಾಡ, ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ. ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ನಾಡಿಗೆ ಅಪಾರ ಕೊಡುಗೆ ನೀಡಿರುವ ಧಾರವಾಡವನ್ನು ಮಹಾನಗರ ಪಾಲಿಕೆಯಾಗಿಸಿ, ಆ ಮೂಲಕ ನಗರದ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ." ಎಂದು ತಿಳಿಸಿದೆ.
ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಜಾತಿಗಣತಿ ವರದಿ ಕುರಿತು ಕೂಡ ಚರ್ಚೆಯಾಗಿದ್ದು ಮುಂದಿನ ಸಂಪುಟ ಸಭೆಯಲ್ಲಿ ವರದಿ ಮಂಡನೆಗೆ ತೀರ್ಮಾನ ಮಾಡಲಾಗಿದೆ.
ಮೈಸೂರಿನ ಬನ್ನಿಮಂಟಪದಲ್ಲಿ ಸಾರಿಗೆ ಇಲಾಖೆ ವತಿಯಿಂದ ₹120 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದೆ.
ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣ ಮಾಡಲು 84.57 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲು ಒಪ್ಪಿಗೆ ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವಡಗನಹಳ್ಳಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಘಟಕ ಕಾಲೇಜಿನ ಕಾಮಗಾರಿಯನ್ನು 149.75 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.












Click it and Unblock the Notifications