ಕಾವೇರಿ ಹೋರಾಟಕ್ಕೆ ಉತ್ತರ ಕರ್ನಾಟಕ ರೈತರ ಬೆಂಬಲ
ಧಾರವಾಡ, ಸೆಪ್ಟೆಂಬರ್ 22: ಕಾವೇರಿ ನೀರಿಗಾಗಿ ರಾಜ್ಯದೆಲ್ಲೆಡೆ ಇದೀಗ ಪ್ರತಿಭಟನೆಗಳು ನಡೆಯುತ್ತಿವೆ. ಈ ಹೋರಾಟಕ್ಕೆ ಅನೇಕ ಸಂಘಟನೆಗಳು ಸಹ ಬೆಂಬಲ ನೀಡಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂದು ಧಾರವಾಡದ ಮಹದಾಯಿ ಹೋರಾಟಗಾರರು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.
ಮಹದಾಯಿ ನೀರಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ಉತ್ತರ ಕರ್ನಾಟಕ ಭಾಗದ ರೈತರು ಇದೀಗ ಕಾವೇರಿ ನೀರಿಗಾಗಿಯೂ ಅಲ್ಲಿನ ರೈತರಿಗೆ ಬೆಂಬಲ ಸೂಚಿಸುವುದರೊಂದಿಗೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಮಹದಾಯಿ ಮತ್ತು ಕಾವೇರಿ ವಿಚಾರದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ತಮ್ಮ ರಾಜಕೀಯ ಲೆಕ್ಕಾಚಾರದ ಪ್ರಕಾರ ಕೆಲವೊಂದಿಷ್ಟು ತಪ್ಪು ಮಾಹಿತಿಗಳನ್ನು ಕೊಟ್ಟಿದ್ದಾರೆ. ಕಾವೇರಿ ಪ್ರಾಧಿಕಾರಕ್ಕೆ ತಪ್ಪು ಮಾಹಿತಿ ಕೊಟ್ಟು ಸುಪ್ರೀಂ ಎದುರು ಕೈಕಟ್ಟಿಸಿಕೊಳ್ಳುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದರಿಂದ ಕಾವೇರಿ ಅಚ್ಚುಕಟ್ಟಿನ ರೈತರಿಗೆ ಅನ್ಯಾಯ ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ಮಹದಾಯಿ ಹೋರಾಟಗಾರ ವೀರೇಶ ಸೊಬರದಮಠ ಕಿಡಿಕಾರಿದ್ದಾರೆ.
ಕಾವೇರಿ ನೀರು ಪಡೆದು ತಮಿಳುನಾಡಿನ ರೈತರು ಫಸಲು ಪಡೆಯುತ್ತಿದ್ದಾರೆ. ಸದ್ಯಕ್ಕೆ ಅವರಿಗೆ ನೀರಿನ ಅವಶ್ಯಕತೆ ಇಲ್ಲ. ಅಲ್ಲಿನ ನೀರಿನ ಹಾಹಾಕಾರ ಎದ್ದಿಲ್ಲ. ನಾವು ಕೂಡ ಮಂಡ್ಯಕ್ಕೆ ಹೋಗಿ ರೈತರಿಗೆ ಬೆಂಬಲ ಕೊಡುತ್ತೇವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ಧಾರವಾಡದ ರೈತರು ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು: ಧಾರವಾಡದಲ್ಲಿ ಕರವೇ ಪ್ರತಿಭಟನೆ
ಧಾರವಾಡ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಧಾರವಾಡದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ಕೊಟ್ಟಿದೆ. ಆದರೆ, ರಾಜ್ಯದಲ್ಲಿರುವ ನೀರಿನ ಬರದ ಕುರಿತು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು. ಕಾನೂನು ಹೋರಾಟದಲ್ಲಿ ನಮ್ಮ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಮ್ಮ ರಾಜ್ಯದಲ್ಲೇ ಬರಗಾಲ ಎದುರಾಗಿ ನೀರಿಗಾಗಿ ಪರಿತಪಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದು ಖಂಡನೀಯ.
ಕೂಡಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ನಮ್ಮ ರಾಜ್ಯದಲ್ಲಿರುವ ಬರಗಾಲದ ಕುರಿತು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು.












Click it and Unblock the Notifications