ವಿನಯ್ ಕುಲಕರ್ಣಿ ಜಾಮೀನಿಗೆ ಸುಪ್ರೀಂನಲ್ಲಿ ಸಿಬಿಐ ಆಕ್ಷೇಪ
ಧಾರವಾಡ, ಜುಲೈ 26; ಬಿಜೆಪಿ ನಾಯಕ, ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದೆ. ಸುಪ್ರೀಂಕೋರ್ಟ್ನಲ್ಲಿ ಸಹ ಸಿಬಿಐ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಆಕ್ಷೇಪ ವ್ಯಕ್ತಪಡಿಸಿದೆ.
ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದೆ. ಆದ್ದರಿಂದ ಅವರು ಜಾಮೀನು ಪಡೆಯಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ನೀಡಬಾರದು ಎಂದು ಸಿಬಿಐ ವಾದ ಮಂಡಿಸಿದೆ.
ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರು ಜಾಮೀನಿನ ಮೇಲೆ ಬಿಡುಗಡೆಯಾದರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಕೊಲೆಯಾದ ಯೋಗೇಶ್ ಗೌಡ ಪತ್ನಿಗೆ ಈಗಾಗಲೇ ಅವರು ಬೆದರಿಕೆ ಹಾಕಿದ್ದಾರೆ ಎಂದು ಸಿಬಿಐ ಆಕ್ಷೇಪಣೆಯಲ್ಲಿ ಹೇಳಿದೆ.

ಆರೋಪಿಗೆ ಜಾಮೀನು ನೀಡಿ ಬಿಡುಗಡೆ ಮಾಡಲು ಯಾವುದೇ ಕಾರಣಗಳಿಲ್ಲ ಎಂದು ಸಿಬಿಐ ವಾದ ಮಂಡಿಸಿದೆ. ನ್ಯಾಯಮೂರ್ತಿ ಯು. ಯು. ಲಲಿತ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರ ಸಹ ಮುಂದುವರೆಸಲಿದ್ದಾರೆ.
2016ರಲ್ಲಿ ನಡೆದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದೆ. ಸದ್ಯ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.
ಯೋಗೇಶ್ ಗೌಡರನ್ನು ಜಿಮ್ನಲ್ಲಿ ಜೂನ್ 15, 2016ರಂದು ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು.
2019ರ ಸೆಪ್ಟೆಂಬರ್ನಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಹತ್ಯೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು.












Click it and Unblock the Notifications