ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ
ಧಾರವಾಡ, ಸೆಪ್ಟೆಂಬರ್ 08 : ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. 2016ರ ಜೂನ್ 15ರಂದು ಲಾಂಗು, ಮಚ್ಚುಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು.
ಕರ್ನಾಟಕದ ಬಿಜೆಪಿ ಸರ್ಕಾರ ಶುಕ್ರವಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ. ಕೊಲೆ ನಡೆದ 48 ಗಂಟೆಗಳಲ್ಲಿಯೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ, ಇದು ರಾಜಕೀಯ ಪ್ರೇರಿತ ಕೊಲೆ ಎಂದು ಕುಟುಂಬದವರು ಆರೋಪ ಮಾಡುತ್ತಿದ್ದಾರೆ.
ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ ಕುಲಕರ್ಣಿ ವಿರುದ್ಧ ಯೋಗೇಶ್ ಗೌಡ ಕುಟುಂಬಸ್ಥರು ಆರೋಪ ಮಾಡಿದ್ದರು. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಅವರನ್ನು ಭೇಟಿ ಮಾಡಿದ್ದ ಕುಟುಂಬಸ್ಥರು ಸಿಬಿಐ ತನಿಖೆಗೆ ಮನವಿ ಸಲ್ಲಿಸಿದ್ದರು.
Recommended Video
ಕರ್ನಾಟಕದ ಬಿಜೆಪಿ ಸರ್ಕಾರ ಐಎಂಎ ಹಗರಣ, ಫೋನ್ ಟ್ಯಾಪಿಂಗ್ ಹಗರಣವನ್ನು ಈಗಾಗಲೇ ಸಿಬಿಐ ತನಿಖೆಗೆ ವಹಿಸಿದೆ. ಈಗ ಮತ್ತೊಂದು ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ನೀಡಲಾಗಿದೆ.

ಜಿಮ್ನಲ್ಲಿ ಯೋಗೇಶ್ ಗೌಡ ಹತ್ಯೆ
2016ರ ಜೂನ್ 15ರಂದು ಬೆಳಗ್ಗೆ ಯೋಗೇಶ್ ಗೌಡ ಜಿಮ್ನಲ್ಲಿದ್ದಾಗ ಲಾಂಗು, ಮಚ್ಚುಗಳಿಂದ ಹಲ್ಲೆ ಮಾಡಿ ಅವರನ್ನು ಹತ್ಯೆ ಮಾಡಲಾಗಿತ್ತು. ಇದು ರಾಜಕೀಯ ಪ್ರೇರಿತ ಹತ್ಯೆಯಾಗಿದೆ. ಕಾಂಗ್ರೆಸ್ನ ಪ್ರಭಾವಿ ನಾಯಕರು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬುದು ಕುಟುಂಬದವರು ಮಾಡುತ್ತಿರುವ ಆರೋಪವಾಗಿದೆ.

ವಿನಯ ಕುಲಕರ್ಣಿ
ಯೋಗೇಶ್ ಗೌಡ ಹತ್ಯೆ ನಡೆದಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವದಲ್ಲಿತ್ತು. ವಿನಯ್ ಕುಲಕರ್ಣಿ ಸಂಪುಟದಲ್ಲಿದ್ದರು. ಹತ್ಯೆ ನಡೆದಾಗ ಸಚಿವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿಯ ನಾಯಕರು ಒತ್ತಾಯಿಸಿದ್ದರು.

ಸದನದಲ್ಲಿ ಚರ್ಚೆ ನಡೆದಿತ್ತು
ಹತ್ಯೆ ನಡೆದಾಗ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿತ್ತು. ಅಲ್ಲಿಯೂ ವಿಚಾರವನ್ನು ಪ್ರತಿಪಕ್ಷ ಬಿಜೆಪಿ ಮಂಡನೆ ಮಾಡಿತ್ತು. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿದ್ದಾರೆ. ಕೊಲೆಯ ಹಿಂದೆ ಸಚಿವರ ಕೈವಾಡವಿದೆ ಎಂದು ಆರೋಪಿಸಿತ್ತು. ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿತ್ತು.

ಆರೋಪಿಗಳ ಬಂಧನ
ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ ಮುತ್ತಗಿ, ವಿಕ್ರಂ ಬಳ್ಳಾರಿ, ವಿನಾಯಕ ಕಟಗಿ, ಕೀರ್ತಿಕುಮಾರ ಕುರಹಟ್ಟಿ, ಸಂದೀಪ್ ಅಲಿಯಾಸ್ ಸ್ಯಾಂಡಿ ಸವದತ್ತಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.











Click it and Unblock the Notifications