'ಸಿದ್ದರಾಮಯ್ಯ ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಿ'
ಹುಬ್ಬಳ್ಳಿ, ನವೆಂಬರ್ 02: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳನ್ನು ಮಾಡುವವರು ಎಂದು ಟೀಕಿಸಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಅವರಿಗೆ ಪುಡಾರಿ ಅಂತ ಮಾತನಾಡುವುದು ಅವರ ಸಂಸ್ಕೃತಿ ತೋರಿಸುತ್ತಿದ್ದು, ಸಿದ್ದರಾಮಯ್ಯ ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇರುವ ಸಂಗತಿಗಳನ್ನು ಪ್ರಧಾನಿ ನರೇಂದ್ರ ಮೋದಿ ವಿಶ್ಲೇಷಣೆ ಮಾಡಿದ್ದಾರೆ. ಇದಕ್ಕೆ ಸೌಜನ್ಯತವಾಗಿ ಸಮರ್ಥನೆ ಕೊಡಿ. ಅದನ್ನು ಬಿಟ್ಟು ಪುಡಾರಿ ಇತ್ಯಾದಿಯಾಗಿ ಮಾತನಾಡೋದು ಸರಿಯಲ್ಲ ಎಂದರು.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ಬಗ್ಗೆ ಹೇಳಿದ್ದಾರೆ. ಗ್ಯಾರಂಟಿಯಿಂದ ಅಭಿವೃದ್ಧಿ ಆಗುತ್ತಿಲ್ಲ ಅಂತಾ ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ನಿಮ್ಮ ಶಾಸಕರೇ ನಿಮ್ಮ ವಿರುದ್ಧ ಮಾತನಾಡಿದ್ದಾರೆ. ಇದನ್ನು ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಬಿ.ಆರ್ ಪಾಟೀಲ್ ಮತ್ತಿತರರು ಹೇಳಿದ್ದಾರೆ. ನಿಮ್ಮ ಶಾಸಕರೇ ಹೇಳುತ್ತಿರುವಾಗ ಪ್ರಧಾನ ಮಂತ್ರಿಗಳು ಅದರ ಬಗ್ಗೆ ಮಾತನಾಡಿದ್ದಾರೆ. ಸೌಜನ್ಯಯುತವಾಗಿ ಉತ್ತರ ಕೊಡಿ ಎಂದರು.
ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ ಎನ್ನುವುದಕ್ಕೆ ಅವರ ಹತಾಶೆ ಮನಸ್ಥಿತಿಯೇ ಸಾಕ್ಷಿ ಆಗಿದೆ. ಮಿಸ್ಟರ್ ಸಿದ್ದರಾಮಯ್ಯ ಮೈಂಡ್ ಯುವರ್ ಲಾಂಗ್ವೇಜ್. ನಿಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡಿ. ಜನ ಇದಕ್ಕೆ ತಕ್ಕ ಉತ್ತರ ಸರಿಯಾಗಿ ಉತ್ತರ ಕೊಡುತ್ತಾರೆ ಎಂದರು.

ವಕ್ಫ್ ಆಸ್ತಿ ವಿವಾದದ ಬಗ್ಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ವಿವಾದದ ವಿರುದ್ಧ ಹೋರಾಟ ನಡೆಯುತ್ತಿದೆ. ವಕ್ಫ್ ಆಸ್ತಿ ಹೆಸರಲ್ಲಿ ಕಬಳಿಕೆ ಹುನ್ನಾರ ನಡೆದಿದ್ದು ಇದರ ವಿರುದ್ಧ ಬಿಜೆಪಿಯಿಂದ ಹೋರಾಟ ಮಾಡುತ್ತೇವೆ. ವಕ್ಫ್ ಆಸ್ತಿ ನಮೂದು ಮಾಡಿರುವ ಜಾಗದಲ್ಲಿ ಮನೆಗಳಿವೆ. ಅವುಗಳನ್ನು ವಿಭಾಗ ಮಾಡಿಕೊಳ್ಳುವುದು ಕಷ್ಟ ಆಗುತ್ತದೆ. ವಕ್ಫ್ ಅಂತ ನಮೂದಾದ ಆಸ್ತಿ ಮೇಲೆ ಸಾಲ ಪಡೆಯೋದು ಕಷ್ಟ .ಅದನ್ನು ಮಾರಾಟ ಮಾಡೋಕು ಆಗಲ್ಲ ಇಷ್ಟೆಲ್ಲ ಗೊಂದಲಗಳಿದ್ದರೂ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ನೋಟಿಸ್ ಮತ್ತು ಕಲಂ 11 ರಲ್ಲಿ ನಮೂದು ಆಗಿರುವುದು ಗಂಭೀರವಾದ ವಿಷಯ. ಜನ ತಮ್ಮ ಪಹಣಿ ಚೆಕ್ ಮಾಡಿಕೊಳ್ಳಲಿ ಆದರೆ ವಕ್ಫ್ ಕಾನೂನು ಹೆಸರಲ್ಲಿ ದುರ್ಬಳಕೆ ನಡೆದಿದೆ. ಹಾವೇರಿಯಲ್ಲಿ ರೈತರಿಗೆ ಕೊಟ್ಟ ನೋಟಿಸ್ ಕೊಡಲೇ ವಾಪಸ್ ಪಡೆಯಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.












Click it and Unblock the Notifications