ಧಾರವಾಡ; ಅಕ್ಟೋಬರ್ 7ರಂದು ಕೇಂದ್ರ ತಂಡದಿಂದ ಬರ ಅಧ್ಯಯನ
ಧಾರವಾಡ, ಅಕ್ಟೋಬರ್ 05; ಕರ್ನಾಟಕ ಸರ್ಕಾರ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 161 ತಾಲೂಕುಗಳು ತೀವ್ರ ಬರಪೀಡಿತ, 34 ತಾಲೂಕುಗಳು ಸಾಧಾರಣ ಬರಪೀಡಿತ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರದ 3 ತಂಡಗಳು ರಾಜ್ಯಕ್ಕೆ ಆಗಮಿಸುತ್ತಿವೆ. ಅಕ್ಟೋಬರ್ 5 ರಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ. ಈ ತಂಡವು 10 ಜನ ಸದಸ್ಯರನ್ನೊಳಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ. ಸದಸ್ಯರು ಬೆಂಗಳೂರಿಗೆ ಆಗಮಿಸಿದ್ದು, ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 5 ರಂದು ಮೂರೂ ತಂಡಗಳಾಗಿ ಬೆಳಗ್ಗೆ 9.30 ರಿಂದ 10.30ರ ಗಂಟೆಯವರೆಗೆ ಕರ್ನಾಟಕ ರಾಜ್ಯ ಪೃಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಿವೆ. ಮಧ್ಯಾಹ್ನ 12 ಗಂಟೆಗೆ ವಿಧಾನಸೌಧ ಕೊಠಡಿಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಜಿಲ್ಲೆಗಳಿಗೆ ತೆರಳಲಿದ್ದಾರೆ.
ಧಾರವಾಡ ಜಿಲ್ಲಾ ಪ್ರವಾಸ; ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಅಜಿತ್ ಕುಮಾರ್ ಸಾಹು ನೇತೃತ್ವದ ತಂಡ ಧಾರವಾಡ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಯಲಿದೆ.
ತಂಡವು, ಎಣ್ಣೆ ಬೀಜಗಳ ಅಭಿವೃದ್ದಿ ಇಲಾಖೆಯ ನಿರ್ದೇಶಕ ಡಾ. ಜೆ. ಪೊನ್ನುಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯ, ನೀತಿ ಆಯೋಗದ ಸಂಶೋಧನಾಧಿಕಾರಿ ಶಿವಚರಣ್ ಮೀನಾ, ರಾಜ್ಯ ಕೃಷಿ ಆಯುಕ್ತ, ಐಎಎಸ್ ಅಧಿಕಾರಿ ಎಸ್. ಪಾಟೀಲ್ ಅವರನ್ನು ಒಳಗೊಂಡಿದೆ.
ಈ ತಂಡವು ಅಕ್ಟೋಬರ್ 5ರಂದು ಸಂಜೆ ಬೆಳಗಾವಿಗೆ ಆಗಮಿಸಲಿದೆ. ಅಕ್ಟೋಬರ್ 6ರಂದು ಬೆಳಗಾವಿ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಬರ ಪರಿಶೀಲನೆ ಮಾಡಲಿದೆ. ಅಕ್ಟೋಬರ್ 7 ರಂದು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ತಂಡ ಪ್ರವಾಸ ಮಾಡಲಿದೆ. ಅಕ್ಟೋಬರ್ 8ರಂದು ಬೆಂಗಳೂರಿಗೆ ವಾಪಸ್ ಆಗಲಿದೆ. ತಂಡದ ಸದಸ್ಯರು ಅಕ್ಟೋಬರ್ 8 ಮತ್ತು 9ರಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ಸ್ಥಳೀಯ ಅಧಿಕಾರಿಗಳಿಂದ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ತೆರಳಲಿದ್ದಾರೆ.
ಕೇಂದ್ರ ತಂಡ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ, ಕೃಷಿ , ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು ಎಂದು ಕೃಷಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹಲವು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದ್ದು, ಕೆಲವೆಡೆ ಬೆಳೆ ಇದ್ದರೂ ಉಂಟಾಗಲಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಪರಿಣಾಮಕಾರಿಯಾಗಿ ವಿವರಿಸಿ ಅರ್ಥ ಮಾಡಿಕೊಡಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಬರಪೀಡಿತ ತಾಲೂಕುಗಳ ಘೋಷಣೆ. ಧಾರವಾಡ ಜಿಲ್ಲೆಯಲ್ಲಿ ಧಾರವಾಡ, ಹುಬ್ಬಳ್ಳಿ, ಕುಂದಗೋಳ, ನವಲಗುಂದ, ಹುಬ್ಬಳ್ಳಿ ನಗರ ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಶೇ 73ರಷ್ಟು ಮಳೆ ಕೊರತೆ ಉಂಟಾಗಿದೆ. ನೈಋತ್ಯ ಮುಂಗಾರು ರಾಜ್ಯಕ್ಕೆ ದಿನಾಂಕ 8/6/2023ರಂದು ಪ್ರವೇಶಿಸಿತು. ರಾಜ್ಯದ ಎಲ್ಲೆಡೆ 14 ದಿನಗಳಲ್ಲಿ ವ್ಯಾಪಿಸಿತು. ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿತ್ತು.
ಜೂನ್ನಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ. 56 ಮಳೆ ಕೊರತೆ ಉಂಟಾಯಿತು. ಜುಲೈನಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29 ಹೆಚ್ಚು ಮಳೆ ಸುರಿಯಿತು. ಆದರೆ ಈ ಮಳೆಯು ಕೇವಲ ಒಂದು ವಾರ ಮಾತ್ರ ಸೀಮಿತ ವಾಯಿತು. ಆಗಸ್ಟ್ನಲ್ಲಿ ವಾಡಿಕೆಗಿಂತ ಶೇ.73 ಮಳೆ ಕೊರತೆ ಉಂಟಾಗಿದೆ ಎಂದು ಸರ್ಕಾರ ಹೇಳಿದೆ.












Click it and Unblock the Notifications