ಮಕ್ಕಳ ಸಹಾಯವಾಣಿಗೆ ಕರೆ, ತಪ್ಪಿತು ಬಾಲ್ಯ ವಿವಾಹ
ಧಾರವಾಡ, ಅಕ್ಟೋಬರ್ 21 : ಬೆಂಗಳೂರಿನ ಸಹಾಯವಾಣಿಗೆ ಬಂದ ಕರೆ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು ಅಕ್ಟೋಬರ್ 20ರಂದು ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಡೆದಿದ್ದಾರೆ.
ಬೆಂಗಳೂರಿನ ಮಕ್ಕಳ ಸಹಾಯವಾಣಿ 1098ಕ್ಕೆ ಅಕ್ಟೋಬರ್ 19ರ ಸಂಜೆ ಕರೆ ಬಂದಿತ್ತು. ಮಾಹಿತಿ ಆಧರಿಸಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಶಿವಳ್ಳಿ ಗ್ರಾಮದ ಪ್ಲಾಟ್ ಪ್ರದೇಶದ ಬಾಲಕಿಯೊಬ್ಬಳನ್ನು ಬೆಳಗಾವಿ ಜಿಲ್ಲೆಯ ಕಿತ್ತೂರಿನ ಸಂಬಂಧಿಕ ಯುವಕನೊಂದಿಗೆ ಮದುವೆ ಮಾಡಲು ನಿರ್ಧರಿಸುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಇಂದು ಬಾಲಕಿಯ ಮನೆಗೆ ಭೇಟಿ ನೀಡಿದ್ದರು.

ಬಾಲಕಿಯ ಪಾಲಕರು ತಮ್ಮ ಮಗಳಿಗೆ18 ವರ್ಷ ತುಂಬುವವರೆಗೂ ಮದುವೆ ಮಾಡುವುದಿಲ್ಲ, ಕಾನೂನು ಉಲ್ಲಂಘಿಸುವದಿಲ್ಲ ಎಂದು ಒಪ್ಪಿ, ಲಿಖಿತವಾಗಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಗಳು ಸೇರಿದಂತೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುವಂತಹ ಯಾವುದೇ ಪ್ರಕರಣಗಳು ಕಂಡು ಬಂದರೆ ಸಾರ್ವಜನಿಕರು ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಮಕ್ಕಳ ಸಹಾಯವಾಣಿಗೆ ಮಾಹಿತಿ ಒದಗಿಸಿದವರ ಹೆಸರನ್ನು ಗುಪ್ತವಾಗಿ ಇಡಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸತೀಶ ಬಿ.ಸಿ. ತಿಳಿಸಿದ್ದಾರೆ.












Click it and Unblock the Notifications