ಪ್ರಹ್ಲಾದ್ ಜೋಶಿಯಿಂದ ಸರ್ಕಾರಿ ಶಾಲಾ ಕಾಲೇಜಿಗೆ ಬಣ್ಣದರ್ಪಣೆ ಅಭಿಯಾನ
ಧಾರವಾಡ, ಅಕ್ಟೋಬರ್ 05: ಸರ್ಕಾರಿ ಶಾಲಾ ಕಾಲೇಜುಗಳಿಗೆ ಹೊಸ ಕಳೆ ತರಲು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಾಗಿದ್ದಾರೆ. ತಮ್ಮ ಕ್ಷಮತಾ ಸೇವಾ ಸಂಸ್ಥೆ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ, 'ಬಣ್ಣದರ್ಪಣೆ ಅಭಿಯಾನ' ಆರಂಭಿಸಿದ್ದಾರೆ.
ಸರ್ಕಾರಿ ವಿದ್ಯಾಮಂದಿರಗಳು ಕಳೆಗುಂದಬಾರದು. ಆದರೆ ಬಹುತೇಕ ಸರ್ಕಾರಿ ಶಾಲಾ ಕಾಲೇಜುಗಳ ಗೋಡೆಗಳು ಕಳೆಗುಂದಿವೆ. ಈ ನಿಟ್ಟಿನಲ್ಲಿ ತಮ್ಮ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣ ವಿತರಿಸಲು ಪ್ರಹ್ಲಾದ್ ಜೋಶಿ ನಿರ್ಧರಿಸಿದ್ದಾರೆ. ಈ ಅಭಿಯಾನಕ್ಕೆ ಕೈ ಜೋಡಿಸುವಂತೆ, ಸ್ಥಳೀಯ ಸಂಘ ಸಂಸ್ಥೆಗಳಿಗೆ ಜೋಶಿ ಅವರು ಮನವಿ ಮಾಡಿದ್ದಾರೆ.
ಸುಮಾರು ಒಂದು ವರ್ಷದ ವರೆಗೆ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ, ಬಣ್ಣದರ್ಪಣೆ ಅಭಿಯಾನ ಹಮ್ಮಿಕೊಳ್ಳಲು ಯೋಜನೆ ರೂಪಿಸಿದ್ದೇವು. ಪ್ರತಿ ತಿಂಗಳು 100 ಶಾಲೆಗಳಿಗೆ ಬಣ್ಣ ಹಚ್ಚುವ ಗುರಿ ಹೊಂದಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1,130 ಸರ್ಕಾರಿ ಶಾಲಾ ಕಾಲೇಜುಗಳನ್ನು ಗುರುತಿಸಲಾಗಿದೆ. ಒಂದು ವರ್ಷದೊಳಗೆ ಎಲ್ಲಾ ಶಾಲಾ ಕಾಲೇಜುಗಳು ಹೊಸ ಬಣ್ಣದೊಂದಿಗೆ ಕಂಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ
ಬಣ್ಣವನ್ನೇನೋ ಜೋಶಿ ಅವರ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಕೊಡಲಾಗುತ್ತಿದೆ. ಆದರೆ ಶಾಲಾ ಕಾಲೇಜುಗಳಿಗೆ ಪೇಂಟಿಂಗ್ ಮಾಡಿಸುವ ಜವಾಬ್ದಾರಿಯನ್ನ ಸಂಘ ಸಂಸ್ಥೆಗಳು ತೆಗೆದುಕೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಕೋರಿದ್ದಾರೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಣ್ಣದರ್ಪಣೆ ಅಭಿಯಾನ ಆರಂಭಿಸಿದ್ದು, ಬಣ್ಣ ನಮ್ಮದು, ಶಾಲೆ ಮತ್ತು ಸಹಾಯ ನಿಮ್ಮದು, ಬನ್ನಿ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ. ನಟ ರಮೇಶ್ ಅರವಿಂದ ಕೂಡ ಜೋಶಿ ಅವರ ಬಣ್ಣದರ್ಪಣೆ ಅಭಿಯಾನವನ್ನು ಬೆಂಬಲಿಸಿದ್ದಾರೆ.

ಹಳೆಯ ವಿದ್ಯಾರ್ಥಿಗಳು ಮುಂದೆ ಬರಬೇಕು
ವಿಶೇಷವಾಗಿ ಶಾಲಾ ಕಾಲೇಜುಗಳ ಹಳೆಯ ವಿದ್ಯಾರ್ಥಿ ಸಂಘಗಳು ಮುಂದೆ ಬಂದು ಉಚಿತವಾಗಿ ಬಣ್ಣ ಪಡೆದು ತಮ್ಮ ಶಾಲೆ ಮತ್ತು ಕಾಲೇಜುಗಳಿಗೆ ಬಣ್ಣ ಬಳಿಸಬಹುದು. ನೀವು ಕಲಿತ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚಲು ಕೈ ಜೋಡಿಸಿ. ಎಲ್ಲರೂ ಬಣ್ಣದರ್ಪಣೆ ಅಭಿಯಾನಕ್ಕೆ ಸಹಯೋಗ ನೀಡುವಂತೆ ವಿದ್ಯಾರ್ಥಿ ಸಂಘಟನೆಗಳನ್ನು ಅವರು ಆಹ್ವಾನಿಸಿದ್ದಾರೆ.

ಗ್ರಾಪಂ, ಜಿಪಂ ಆಸಕ್ತಿ ವಹಿಸಬೇಕು
ಕೇವಲ ಹಳೇಯ ವಿದ್ಯಾರ್ಥಿಗಳು ಮಾತ್ರವಲ್ಲದೇ ಸ್ಥಳೀಯ ಸಂಘ ಸಂಸ್ಥೆಗಳು ಈ ಕಾರ್ಯಕ್ಕೆ ಕೈ ಜೋಡಿಸಬಹುದಾಗಿದೆ. ವಿಶೇಷವಾಗಿ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ ಸದಸ್ಯರು ಈ ನಿಟ್ಟಿನಲ್ಲಿ ಹೆಚ್ಚಿನ ಆಸಕ್ತಿವಹಿಸಿ ತಮ್ಮ ಸ್ಥಳೀಯ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳಿಗೆ ಬಣ್ಣ ಹೊಡೆಸುವ ಜವಾಬ್ದಾರಿ ಹೊರಬೇಕು. ಯಾರೇ ಮುಂದೆ ಬಂದರೂ, ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣ ನೀಡಲಾಗುವುದು ಎಂದು ಹೇಳಿದರು.

ಕ್ಷಮತಾ ಸೇವಾ ಸಂಸ್ಥೆಯಿಂದ ಅನೇಕ ಕಾರ್ಯ
ಕೋವಿಡ್ ಸಂದರ್ಭದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಿದ್ದ ಕ್ಷಮತಾ ಸೇವಾ ಸಂಸ್ಥೆ, ಲಕ್ಷಾಂತರ ಬಡವರಿಗೆ ದಿನಸಿ ಕಿಟ್ ಗಳನ್ನ ವಿತರಿಸಿ ನೆರವಾಗಿತ್ತು. ಆಕ್ಷಿಜನ್ ಕನ್ವರ್ಟರ್ಗಳ ವಿತರಣೆ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತವಾಗಿ ಮಾಸ್ಕ್, ಸ್ಯಾನಿಟೈಜರ್, ಪಲ್ಸ್ ಆಕ್ಷಿಮೀಟರ್ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿತ್ತು. ಅತಿವೃಷ್ಟಿಯಿಂದಾಗಿ ಸಮಸ್ಯೆಗಿಡಾದ ಬಡ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳ ವಿತರಣೆ ಸೇರಿ ಸಹಸ್ರಾರು ಜನರಿಗೆ ಎಂ.ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಕಣ್ಣಿನ ತಪಾಸಣೆ ನಡೆಸಿ, ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ರೀತಿಯ ಕಾರ್ಯಗಳನ್ನು ಮಾಡಲಾಗಿದೆ. ಇದೀಗ ಸರ್ಕಾರಿ ಶಾಲೆಗಳನ್ನು ಕಲರ್ ಫುಲ್ ಮಾಡಲು ಕ್ಷಮತಾ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ.












Click it and Unblock the Notifications