Dharwad Rains: ಮುಂಗಾರು ಪೂರ್ವ ಮಳೆಯ ಆರ್ಭಟ: ತುರ್ತು ಸ್ಪಂದನೆ ತಂಡಗಳ ರಚನೆಗೆ ಧಾರವಾಡ ಡಿಸಿ ಆದೇಶ
ಧಾರವಾಡ, ಮೇ 25: ಮುಂಗಾರು ಪೂರ್ವ ಮಳೆ ಆರಂಭವಾಗಿರುವುದರಿಂದ ಅತೀ ಮಳೆ ಆಗಿ ಅತಿವೃಷ್ಟಿ, ಪ್ರವಾಹ ಉಂಟಾದರೆ ಸಮರ್ಥವಾಗಿ ನಿರ್ವಹಿಸಿ, ಸಾರ್ವಜನಿಕರಿಗೆ ಯಾವುದೇ ಹಾನಿಯಾಗದಂತೆ ಮುಂಜಾಗ್ರತೆ ವಹಿಸಿ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ತಿಳಿಸಿದರು.
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಮುಂಜಾಗ್ರತೆ ಕ್ರಮ ಜರುಗಿಸಲು ಪ್ರತಿ ತಾಲೂಕಿಗೆ ಓರ್ವ ಹಿರಿಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ, ಅತಿವೃಷ್ಟಿ ನಿರ್ವಹಣೆಗೆ ಮತ್ತು ಸಮರ್ಪಕ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅತಿವೃಷ್ಟಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಕೃಷಿಕರು ಬಿತ್ತನೆಗೆ ಭೂಮಿ ಸಿದ್ಧಗೊಳಿಸುತ್ತಿದ್ದಾರೆ. ಅತೀ ಮಳೆಯಿಂದಾಗಿ ಹಾನಿ ಅಥವಾ ಪ್ರವಾಹ ಉಂಟಾದರೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಸಮರ್ಥವಾಗಿ ನಿರ್ವಹಿಸಲು ತಾಲೂಕು ಆಡಳಿತವು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಇನ್ನು ಸಮನ್ವಯ ಮತ್ತು ಸೂಕ್ತ ಮಾರ್ಗದರ್ಶನಕ್ಕಾಗಿ ಪ್ರತಿ ತಾಲೂಕಿಗೆ ಓರ್ವ ಹಿರಿಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಅದೇಶಿಸಲಾಗುತ್ತದೆ. ಕಳೆದ ಐದು ವರ್ಷಗಳಲ್ಲಿ ಅತೀ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿ, ತೊಂದರೆ ಆಗಿರುವ ಪ್ರದೇಶಗಳನ್ನು ಗುರುತಿಸಿ, ತಹಶೀಲ್ದಾರ್ ಮತ್ತು ಇಓಗಳು ಭೇಟಿ ನೀಡಿ, ಪರಿಶೀಲಿಸಬೇಕು. ಹಾನಿ ಮರುಕಳಿಸದಂತೆ ಈಗಾಗಲೇ ಅಗತ್ಯ ಕ್ರಮ ವಹಿಸಿ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು.

ನಗರ ಹಾಗೂ ಗ್ರಾಮ ವ್ಯಾಪ್ತಿಯ ಕೆರೆಗಳನ್ನು ಪರಿಶೀಲಿಸಿ, ಅವುಗಳ ಸುರಕ್ಷತೆ ಖಾತರಿ ಮಾಡಿಕೊಳ್ಳಬೇಕು. ಮಳೆ ನೀರು ಸಂಗ್ರಹ, ಹೆಚ್ಚುವರಿ ನೀರು ಹೊರ ಹಾಕಲು ಸೂಕ್ತ ಮಾರ್ಗ, ಕೆರೆ ಒಡೆಯದಂತೆ ಗಟ್ಟಿಮುಟ್ಟಾಗಿ ಇರುವ ಬಗ್ಗೆ ಆಯಾ ಕೆರೆ ನಿರ್ವಹಣೆ ಜವಾಬ್ದಾರಿ ಇರುವ ಗ್ರಾಮ ಪಂಚಾಯತ್, ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಜಿಲ್ಲಾಡಳಿತಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು. ಮುಂದಿನ ದಿನಗಳಲ್ಲಿ ಕೆರೆ ಹಾನಿ ಬಗ್ಗೆ ಯಾವುದೇ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರಿಗೊಳಿಸಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.












Click it and Unblock the Notifications