ಧಾರವಾಡ : ಜಿಲ್ಲಾ ಪಂಚಾಯಿತಿಯಲ್ಲಿ ಶಿವಾನಂದ ಕರಿಗಾರ ಹೀರೋ
ಧಾರವಾಡ, ಫೆಬ್ರವರಿ 23 : ಧಾರವಾಡ ಜಿಲ್ಲಾ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಧಿಕಾರ ಹಿಡಿಯಲು ಪಕ್ಷೇತರ ಅಭ್ಯರ್ಥಿ ಬೆಂಬಲ ಪಡೆಯುವುದು ಅನಿವಾರ್ಯವಾಗಿದೆ. ಪಂಚಾಯಿತಿಯಲ್ಲಿ ಅಧಿಕಾರದ ಗದ್ದುಗೆ ಏರಲು ಬೇಕಾದ ಮ್ಯಾಜಿಕ್ ಸಂಖ್ಯೆ 12.
ಮಂಗಳವಾರ ಧಾರವಾಡ ಜಿಲ್ಲಾ ಪಂಚಾಯಿತಿ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ತವರು ಜಿಲ್ಲೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ಸಂಖ್ಯೆ ತಲುಪಲು ವಿಫಲವಾಗಿದೆ. [ಜಿಲ್ಲಾ ಪಂಚಾಯತಿ ಫಲಿತಾಂಶ : ಕ್ಷಣ-ಕ್ಷಣದ ಮಾಹಿತಿ]
ಧಾರವಾಡ ಜಿಲ್ಲಾ ಪಂಚಾಯಿತಿಯ ಒಟ್ಟು ಸ್ಥಾನದ ಸಂಖ್ಯೆ 22. ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ಸಂಖ್ಯೆ 12. ಆದರೆ, ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಪಕ್ಷೇತರ ಅಭ್ಯರ್ಥಿಯ ಬೆಂಬಲ ಪಡೆದರೆ ಬಿಜೆಪಿ ಅಧಿಕಾರಹಿಡಿಯಬಹುದಾಗಿದೆ. [ತಾಲೂಕು ಪಂಚಾಯಿತಿಯಲ್ಲಿ ಯಾರು ಗೆದ್ರು?]
ಫಲಿತಾಂಶದ ಚಿತ್ರಣ : ಧಾರವಾಡ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ 10 ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಯಾವುದೇ ಸ್ಥಾನದಲ್ಲಿಯೂ ಜಯಗಳಿಸಿಲ್ಲ. ಆದರೆ, ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಜಯಗಳಿಸಿದ್ದು, ನಿರ್ಣಾಯಕರಾಗಿ ಹೊರಹೊಮ್ಮಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಾನಂದ ಕರಿಗಾರ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಶಿವಾನಂದ ಅವರ ಬೆಂಬಲ ಪಡೆದರೆ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಬಹುದಾಗಿದೆ.