ಜೆಡಿಎಸ್ ನಾಯಕತ್ವ, ಹುಬ್ಬಳ್ಳಿಯಲ್ಲೂ ಅಪಸ್ವರ
ಹುಬ್ಬಳ್ಳಿ, ನ.10 : ಪಕ್ಷ ಸಂಘಟನೆಯಲ್ಲಿ ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೇಗೌಡರಿಗೆ ಆಸಕ್ತಿ ಇಲ್ಲದಿದ್ದರೆ ನೇರವಾಗಿ ತಿಳಿಸಲಿ, ನಮ್ಮ ದಾರಿಯನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಉತ್ತರ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು ಸಂದೇಶ ರವಾನಿಸಿದ್ದಾರೆ.
ಹುಬ್ಬಳ್ಳಿಯ ಹೊರಟ್ಟಿ ಫಾರ್ಮ್ನಲ್ಲಿ ಭಾನುವಾರ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಕುಮಾರಸ್ವಾಮಿ ಮತ್ತು ದೇವೇಗೌಡರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ನಾಯಕರು ಆರೋಪಿಸಿದರು.

ಕುಮಾರಸ್ವಾಮಿ ಅವರಿಗೆ ಪಕ್ಷದ ಬಗ್ಗೆ ಕಾಳಜಿ ಇಲ್ಲ, ದೇವೇಗೌಡರು ಇಂದಿನ ರಾಜಕೀಯ ಸ್ಥಿತಿಗೆ ಹೊಂದಿಕೊಳ್ಳುತ್ತಿಲ್ಲ. ಆದ್ದರಿಂದ ಜೆಡಿಎಸ್ ಪಕ್ಷಕ್ಕೆ ಇಂತಹ ಸ್ಥಿತಿ ಬಂದಿದೆ ಎಂದು ಪಕ್ಷದ ಹಿರಿಯ ನಾಯಕ ಬಸವರಾಜ ಹೊರಟ್ಟಿ ದೂರಿದರು. [ಪಕ್ಷದ ಮೇಲೆ ನಿಷ್ಠೆ, ಲೀಡರ್ ಬಗ್ಗೆ ಅಷ್ಟಕಷ್ಟೆ!]
ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಸ್ಥಳೀಯ ನಾಯಕರ ಮಾತಿಗೆ ಮನ್ನಣೆ ನೀಡಿಲ್ಲ. ಈಗ ಜೆಡಿಎಸ್ ಪಕ್ಷದಿಂದ ಅನೇಕರು ಹೊರಹೋಗುತ್ತಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡದಿದ್ದರೆ ಪಕ್ಷ ಉಳಿಯುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. [ಜೆಡಿಎಸ್ ದೇವೇಗೌಡ ಕುಟುಂಬದ ಸ್ವಂತ ಬಸ್ ಇದ್ದಂತೆ]
ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಯಲ್ಲಿ ಮನೆ ಮಾಡಿ ಈ ಭಾಗದಲ್ಲಿ ಫಕ್ಷ ಸಂಘಟನೆ ಮಾಡುವುದಾಗಿ ಎರಡು ಬಾರಿ ಘೋಷಿಸಿದ್ದರು. ಮನೆ ಮಾಡುವುದರಿಂದ ಪಕ್ಷ ಸಂಘಟನೆಯಾಗುವುದಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ತಿಂಗಳಲ್ಲಿ ಒಮ್ಮೆಯಾದರೂ ಸಂಚರಿಸಿ ಕಾರ್ಯಕರ್ತರಲ್ಲಿ ಶಕ್ತಿ ತುಂಬಲಿ ಎಂದು ಹೊರಟ್ಟಿ ಹೇಳಿದರು.
ಎಚ್ಡಿಕೆ ಅಧ್ಯಕ್ಷರಾಗಲಿ : ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಬೇಕು ಎಂದು ಸೊರಬ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಲು ಕುಮಾರಸ್ವಾಮಿ ಅವರೇ ಸರಿಯಾದ ನಾಯಕರು ಅವರೇ ರಾಜ್ಯಾಧ್ಯಕ್ಷರಾಗಲಿ ಎಂದು ತಿಳಿಸಿದ್ದಾರೆ. ಅಂದಹಾಗೆ ನ.15ರೊಳಗೆ ಜೆಡಿಎಸ್ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಎಚ್.ಡಿ.ದೇವೇಗೌಡರು ಹೇಳಿದ್ದಾರೆ.












Click it and Unblock the Notifications