ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ; ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ
ಧಾರವಾಡ, ಮಾರ್ಚ್ 09: ಧಾರವಾಡದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ನೀಡಲಾಗಿತ್ತು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಸೂಚನೆಯಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಜಿಲ್ಲಾಧಿಕಾರಿಗಳಿಗೆ ನಿಗದಿ ಪಕ್ಕದ ಗ್ರಾಮವಾದ ಬೆನಕಟ್ಟಿ ಗ್ರಾಮದ ಎಸ್. ಸಿ. ಮತ್ತು ಎಸ್. ಟಿ. ಕಾಲೋನಿ ಹಾಗೂ ಇತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಹಿಳೆಯರು ಮನವಿ ಸಲ್ಲಿಸಿದ್ದರು, ನಿತ್ಯ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ವಿನಂತಿ ಮಾಡಿದ್ದರು.
ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಆರ್. ಪುರುಷೋತ್ತಮ ಅವರಿಗೆ ಕರೆ ಮಾಡಿ, ಈ ಕುರಿತು ಪರಿಶೀಲಿಸಿ ತಕ್ಷಣ ವರದಿ ನೀಡುವಂತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದ್ದರು.

ಮಂಗಳವಾರ ಬೆನಕಟ್ಟಿ ಗ್ರಾಮಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಆರ್. ಪುರುಷೋತ್ತಮ ಅವರ ನೇತೃತ್ವದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಭೇಟಿ ನೀಡಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ, ಗ್ರಾಮ ಲೆಕ್ಕಾಧಿಕಾರಿ ವಾಣಿಶ್ರೀ ಅರಳಿಮರದ ಅವರ ಜೊತೆ ಮಾತುಕತೆ ನಡೆಸಿದರು. ಗ್ರಾಮಸ್ಥರೊಂದಿಗೆ ಸಮಸ್ಯೆ ಬಗ್ಗೆ ಚರ್ಚಿಸಿದರು.
ನಂತರ ಮಾತನಾಡಿದ ಅಧಿಕಾರಿಗಳು, "ರಸ್ತೆ ರಿಪೇರಿ ಕಾರ್ಯದಿಂದ ಬೆನಕಟ್ಟಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಬಂದಾಗಿದೆ. ಹೊಸ ಪೈಪ್ಲೈನ್ ಹಾಕಲಾಗುತ್ತಿದೆ" ಎಂದರು.
"ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಘಟಕ ಕೇಳಿದ್ದಾರೆ. ಈ ಕುರಿತು ಕ್ರಮ ವಹಿಸಲಾಗಿದ್ದು, ಜಿಲ್ಲಾ ಪಂಚಾಯತಿಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ ಸುಮಾರು ರೂ. 70 ಲಕ್ಷ ವೆಚ್ಚದಲ್ಲಿ ಯೋಜನೆ ರೂಪಿಸಿ, ಅನುಮತಿ ಪಡೆಯಲಾಗಿದೆ. ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ" ಎಂದು ತಿಳಿಸಿದರು.
"ಕಾಮಗಾರಿ ಪೂರ್ಣಗೊಳ್ಳುವವರೆಗೆ ಬೇರೆ ಪೈಪ್ಲೈನ್ ಮಾರ್ಗದ ಮೂಲಕ ಅಥವಾ ಟ್ಯಾಂಕರ್ ಮೂಲಕ ಪ್ರತಿದಿನ ಬೆನಕಟ್ಟಿ ಗ್ರಾಮಸ್ಥರಿಗೆ ನೀರು ಸರಬರಾಜು ಮಾಡುವಂತೆ ಪಿಡಿಓ ಅವರಿಗೆ ಸೂಚನೆ ನೀಡಿದರು. ಶುದ್ದ ಕುಡಿಯುವ ನೀರು ನೀಡುವುದು ಪಂಚಾಯತಿ ಕರ್ತವ್ಯವಾಗಿದ್ದು, ಇದನ್ನು ಉಲ್ಲಂಘಿಸಿದ ಕುರಿತು ಮತ್ತೇ ದೂರು ಬಂದಲ್ಲಿ ಸಂಬಂಧಿಸಿದ ಪಿಡಿಓ ಹಾಗೂ ಇತರ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ವರದಿ ನೀಡುವುದಾಗಿ" ಎಚ್ಚರಿಸಿದರು.












Click it and Unblock the Notifications