ಫೆ.25, 26 ರಂದು ಹುಬ್ಬಳ್ಳಿ-ಧಾರವಾಡದ 51 ಕೇಂದ್ರಗಳಲ್ಲಿ ಕೆಪಿಎಸ್ಸಿ ಪರೀಕ್ಷೆ
ಫೆಬ್ರವರಿ 25 ಹಾಗೂ 26 ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ಪರೀಕ್ಷೆ ನಡೆಯಲಿದೆ.
ಧಾರವಾಡ, ಫೆಬ್ರವರಿ 24: ಫೆಬ್ರವರಿ 25 ಹಾಗೂ 26 ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಗ್ರೇಡ್-1 ಹಾಗೂ ವಿವಿಧ ಗ್ರೂಪ್ ಎ, ಬಿ, ಹಾಗೂ ಸಿ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ.
ಕೆಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲೆಯ ಒಟ್ಟು 13,082 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು. ಪರೀಕ್ಷೆಯನ್ನು ಸುಗಮವಾಗಿ ಯಾವುದೇ ಲೋಪವಾಗದಂತೆ ಜರುಗಿಸಲು 17 ವೀಕ್ಷಕರನ್ನು 17 ಮಾರ್ಗಾಧಿಕಾರಿಗಳನ್ನು 51 ಲೋಕಲ್ ತಪಾಸಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನೇಮಕ ಮಾಡಲಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಅಧಿಕಾರಿಗಳು ತಮ್ಮ ವರದಿಯನ್ನು ಸಲ್ಲಿಸತಕ್ಕದೆಂದು ಸಭೆಯಲ್ಲಿ ತಿಳಿಸಲಾಗಿದೆ.
ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳಿಗೆ ಪರೀಕ್ಷೆ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಪ್ರತಿ ಹಂತದಲ್ಲಿ ವೀಡಿಯೋ ದೃಶ್ಯ ಮಾಡಲು 3 ಶಿಫ್ಟ್ನಲ್ಲಿ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪೊಲೀಸ್ ಆಯುಕ್ತರಿಂದ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಗಿದೆ.
ಪರೀಕ್ಷಾ ಕೇಂದ್ರದ ಸಮೀಪದ ಝೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರಗಳ ಒಳಗೆ, ಹೊರಗೆ ಸೂಕ್ತ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದೆಂದು ಅಧಿಕಾರಿಗಳ ಸಭೆಯಲ್ಲಿ ತಿಳಿಸಲಾಯಿತು. ಅಲ್ಲದೇ ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸರಬರಾಜಿಗೆ ಹೆಸ್ಕಾಂಗೆ ಕ್ರಮ ವಹಿಸಲು ಸೂಚಿಸಲಾಯಿತು. ಸಭೆಯಲ್ಲಿ ಉಪವಿಭಾಗಾಧಿಕಾರಿ ಅಶೋಕ್ ತೇಲಿ, ಹುಡಾ ಆಯುಕ್ತರಾದ ಸಂತೋಷ ಬಿರಾದಾರ, ಡಿಡಿಪಿಐ ಎನ್.ಎನ್. ಕೆಳದಿಮಠ, ಡಿಡಿಪಿಯು ಕೃಷ್ಣ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.












Click it and Unblock the Notifications