ಸಿದ್ದರಾಮಯ್ಯ ಅಭಿಮಾನಿಗಳಿಂದ ಧಾರವಾಡದ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಹೋಳಿಗೆ ಊಟ ವಿತರಣೆ
ಧಾರವಾಡ, ಮೇ, 20: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಅಸ್ತಿತ್ವ ಕಳೆದುಕೊಂಡಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ಕಾರ್ಯಾರಂಭ ಮಾಡುವ ಹಂತ ತಲುಪಿವೆ. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆ ಧಾರವಾಡದ ಪಾಲಿಕೆ ಸದಸ್ಯ ಡಾ.ಮಯೂರ್ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಹೋಳಿಗೆ ಊಟ ಬಡಿಸುವ ಮೂಲಕ ಸಂತೋಷ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸಿಎಂ ಇದ್ದ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ತೆರೆದು ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಆಹಾರ ವಿತರಿಸಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಈ ಯೋಜನೆಗೆ ಬ್ರೇಕ್ ನೀಡಲಾಗಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅವರು ಸಿಎಂ ಆಗಿರುವುದರಿಂದ ಇಂದಿರಾ ಕ್ಯಾಂಟೀನ್ ಮತ್ತೆ ಕಾರ್ಯಾರಂಭ ಮಾಡಲು ಸಿದ್ಧವಾಗಿವೆ. ಆದ್ದರಿಂದ ಧಾರವಾಡದ ಪಾಲಿಕೆ ಸದಸ್ಯ ಡಾ.ಮಯೂರ್ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಹೋಳಿಗೆ ಊಟ ಬಡಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿರುವುದರಿಂದ ಇಂದಿರಾ ಕ್ಯಾಂಟೀನ್ಗಳು ಮತ್ತೆ ಕಾರ್ಯಾರಂಭ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಹೀಗಾಗಿ ಇದೇ ಖುಷಿಯಲ್ಲಿ ಹುಬ್ಬಳ್ಳಿ, ಧಾರವಾಡ, ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿದಂತೆ ಒಟ್ಟು 17 ಇಂದಿರಾ ಕ್ಯಾಂಟೀನ್ಗಳಲ್ಲಿ 9 ಸಾವಿರ ಹೋಳಿಗೆಗಳನ್ನು ವಿತರಣೆ ಮಾಡಲಾಗಿದೆ. ಹಾಗೆಯೆ ಧಾರವಾಡದ ಮಿನಿ ವಿಧಾನಸೌಧದ ಎದುರಿಗೆ ಇರುವ ಇಂದಿರಾ ಕ್ಯಾಂಟೀನ್ನಲ್ಲಿ ಹೋಳಿಗೆ ಊಟ ಹಾಕಲಾಗಿದ್ದು, ಸಾರ್ವಜನಿಕರು ಖುಷಿಯಿಂದಲೇ ಹೋಳಿಗೆ ಊಟ ಸವಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ
ಮತ್ತೊಂದೆಡೆ ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕುರುಬ ಸಮಾಜ ಹಾಗೂ ಅಭಿಮಾನಿಗಳಿಂದ ಕೇಕ್ ಕತ್ತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಅಲ್ಲದೆ ಸಿದ್ದರಾಮಯ್ಯ ಅಭಿಮಾನಿಗಳು ಡೊಳ್ಳು ಬಾರಿಸುತ್ತಾ ಹೆಜ್ಜೆ ಹಾಕಿದರು. ಇದೇ ವೇಳೆ ಸಿದ್ದರಾಮಯ್ಯ ಸರ್ಕಾರ ಐದು ವರ್ಷಗಳ ಪೂರ್ಣಾವಧಿ ಪೂರೈಸಿ, ಬಡವರ ಕಣ್ಣೀರು ಒರೆಸಲಿ ಎಂದು ಹಾರೈಸಿದರು.
ರಾಹುಲ್ ಗಾಂಧಿ ಹೇಳಿದ್ದೇನು?
ಇನ್ನು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದ್ದು, ಇದೆ ವೇಳೆ ರಾಹುಲ್ ಗಾಂಧಿ ಅವರು ಮಾತನಾಡಿ ನಾವು ಬಿಜೆಪಿಯವರ ರೀತಿ ಸುಳ್ಳು ಭರವಸೆಗಳನ್ನು ಕೊಡುವುದಿಲ್ಲ. ಬಿಜೆಪಿ ತಾಕತ್ತನ್ನು ಕರ್ನಾಟಕ ಜನರು ಸೋಲಿಸಿದ್ದಾರೆ. ನಾವು ಈಗಾಗಲೇ ಕೊಟ್ಟಿರುವ 5 ಭರವಸೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಗೂ ಮುಂಚೆಯೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಕೊಟ್ಟಿರುವ 5 ಭರವಸೆಗಳನನ್ನು ಈಡೇರಿಸುವುದಾಗಿ ಹೇಳಿದ್ದರು. ಇದೀಗ ಸರ್ಕಾರ ರಚನೆ ಆಗಿದ್ದು, ಯಾವುದೇ ಕಾರಣಕ್ಕೂ ನಾವು ಕೊಟ್ಟಿರುವ ಭರವಸೆಗಳನ್ನು ಕೈಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಇಂದು ಒಮ್ಮತದಿಂದ ಪ್ರಮಾಣ ವಚನ ವೇದಿಕೆಯಲ್ಲೇ ಹೇಳಿದರು.
ಕಂಠೀರವ ಕ್ರೀಡಾಂಗಣದ ವೇದಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ನಾವು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಅನ್ನಭಾಗ್ಯದ ಯೋಜನೆ ಅಡಿಯಲ್ಲಿ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆ.ಜಿ. ಅಕ್ಕಿ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಪದವಿಧರರಿಗೆ 3,000 ರೂ., ಡಿಪ್ಲೋಮಾ ಪದವಿಧರರಿಗೆ 1,500 ರೂಪಾಯಿ, 200 ಯುನಿಟ್ ಉಚಿತ ವಿದ್ಯುತ್, ಗೃಹಣಿಯರಿಗೆ 2,000 ರೂ. ಸೌಲಭ್ಯಗಳನ್ನು ನಾವು ನೀಡಲಿದ್ದೇವೆ. ಇದರಲ್ಲಿ ಯಾವುದೇ ಸಂದೇಹ ಬೇಡ ಎಂದು ಹೇಳಿದರು.
ಇದೀಗ ರಾಜ್ಯದ ಮುಖ್ಯಮಂತ್ರಿ ಹಾಗೂ ಡಿಸಿಎಂ ಹಾಗೂ 8 ಜನ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬಳಿಕ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ನಾವು ಕೊಟ್ಟಿರುವ ಭರವಸೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಈ ಮೂಲಕ ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮೀ ಯೋಜನೆ, ಅನ್ನ ಭಾಗ್ಯ, ಯುವ ನಿಧಿ, ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಈ ಗ್ಯಾರಂಟಿಗಳನ್ನು ಜಾರಿಗೆ ತರಲಾಗುತ್ತದೆ ಎಂದರು.
ಹಾಗಾದರೆ ಇಡೀ ರಾಜ್ಯದ ಜನರು ಕಾಯುತ್ತಿದ್ದ ಈ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ನಾಯಕರು ಸಂಪುಟ ಸಭೆ ಬಳಿಕ ಘೋಷಣೆ ಮಾಡಲಿದ್ದು, ಇನ್ನು ಈ ಗ್ಯಾರೆಂಟಿಗಳನ್ನು ಯಾರೆಲ್ಲ ಪಡೆಯಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.












Click it and Unblock the Notifications