ಧಾರವಾಡದಲ್ಲೂ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ
ಧಾರವಾಡ, ಆಗಸ್ಟ್ 07: ಧಾರವಾಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
Recommended Video
ನಿರಂತರ ಮಳೆಯಿಂದಾಗಿ ಕಲಘಟಗಿಯ ಗಂಜಿಗಟ್ಟಿ ಕೆರೆ ಕೋಡಿ ಬಿದ್ದಿದ್ದು, ಬಾಲಕಿ ತನ್ನ ತಾಯಿಯ ಜೊತೆ ಹೊಲಕ್ಕೆ ತೆರಳುತ್ತಿದ್ದ ಸಂದರ್ಭ ಕಾಲು ಜಾರಿ ಬಿದ್ದಿದ್ದಾಳೆ. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸಕ್ಕೆ ಬಾಲಕಿ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ. ಆಕೆಯನ್ನು ಮೇಲೆತ್ತಲು ಸ್ಥಳೀಯರು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.
ಕಲಘಟಗಿ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿಯ ಜೊತೆಗೆ ಎನ್ಡಿಆರ್ ಎಫ್ ತಂಡ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತು ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರು ಬಾಲಕಿ ಶ್ರೀದೇವಿ ಮನೆಗೆ ಭೇಟಿ ನೀಡಿ ತಂದೆ- ತಾಯಿಗೆ ಸಾಂತ್ವನ ಹೇಳಿದ್ದಾರೆ.

ಧಾರವಾಡದಲ್ಲಿ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಹುಬ್ಬಳ್ಳಿಯ ಉಣಕಲ್ಲ ಕೆರೆಯೂ ಕೋಡಿ ಬಿದ್ದಿದ್ದು, ಮಳೆಯಿಂದಾಗಿ ಪ್ರವಾಹದ ಭೀತಿ ಎದುರಾಗಿದೆ. ಹಳೇ ಹುಬ್ಬಳ್ಳಿ ಭಾಗದ ಮನೆಗಳು ಮುಳುಗಡೆ ಭೀತಿಯಲ್ಲಿವೆ. ಪ್ರವಾಹದ ರಭಸಕ್ಕೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯೂ ನಾಶವಾಗಿವೆ.












Click it and Unblock the Notifications