ದೀಪಾವಳಿ; ದೀಪ ಸಂಜೀವಿನಿ ಮಾರಾಟ ಮೇಳ ಆರಂಭ
ಧಾರವಾಡ, ಅಕ್ಟೋಬರ್ 27; ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಮಾರಾಟ ಮೇಳಕ್ಕೆ ಚಾಲನೆ ನೀಡಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಈ ಮಾರಾಟ ಮೇಳ ಆಯೋಜಿಸಲಾಗಿದೆ.
ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಬುಧವಾರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ನ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಹಮ್ಮಿಕೊಂಡಿರುವ ಕರಕುಶಲ ವಸ್ತುಗಳು ಮತ್ತು ಮಣ್ಣಿನ ದೀಪಗಳ ಪ್ರದರ್ಶನ ಮತ್ತು ಮಾರಾಟ ಮೇಳ 'ದೀಪ ಸಂಜೀವಿನಿ' ಉದ್ಘಾಟಿಸಿದರು.
ದೀಪಾವಳಿ; ಹಸಿರು ಪಟಾಕಿ ಮಾತ್ರ ಮಾರಾಟಕ್ಕೆ ಅವಕಾಶ
ಬಳಿಕ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಸಾಂಕೇತಿಕ ಕಾರ್ಯಕ್ರಮದಲ್ಲಿ ಧಾಡವಾಡ ತಾಲೂಕಿನ ಉಪ್ಪಿನಬೆಟಗೇರಿಯ ಶ್ರೀ ಆದಿಶಕ್ತಿ ಮಹಿಳಾ ಸ್ವ-ಸಹಾಯ ಸಂಘ ಹಾಗೂ ಮುಗದ ಗ್ರಾಮದ ಶ್ರೀ ಮಹಾಲಕ್ಷ್ಮೀ ಸ್ವ-ಸಹಾಯ ಸಂಘದ ಸದಸ್ಯರು ಉತ್ಪಾದಿಸಿದ ಹಣತೆ, ದೀಪಗಳು ಮತ್ತಿತರ ದೀಪಾವಳಿ ಹಬ್ಬದ ಅಲಂಕಾರಿಕ ವಸ್ತುಗಳ ಪ್ರದರ್ಶನವನ್ನು ವೀಕ್ಷಿಸಿದರು.
ಬೆಲೆ ಏರಿಕೆ ಸ್ವಾಮಿ: ಭಾರತದಲ್ಲಿ ಮಧ್ಯಮ ವರ್ಗದ ಮಂದಿಗೆ ದುಬಾರಿ
ಧಾರವಾಡ ಜಿಲ್ಲೆಯ ಎಲ್ಲಾ 144 ಗ್ರಾಮ ಪಂಚಾಯತಿಗಳಲ್ಲಿ ಮಹಿಳಾ ಒಕ್ಕೂಟ ರಚಿಸಿ ಪ್ರೋತ್ಸಾಹಿಸಲಾಗುತ್ತಿದೆ. ಮಹಿಳೆಯರು ಉತ್ಪಾದಿಸಿದ ಹಣತೆ, ದೀಪಗಳಿಗೆ ಜಿಲ್ಲೆಯಾದ್ಯಂತ ಮಾರಾಟಕ್ಕೆ ಉಚಿತ ಸ್ಥಳಾವಕಾಶ ಒದಗಿಸಲಾಗುವುದು. ಸ್ವ-ಸಹಾಯ ಸಂಘಗಳು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.
ದೀಪಾವಳಿ 2021: ಆಚರಣೆ, ಮಹತ್ವ, ಪ್ರೀತಿ ಪಾತ್ರರಿಗೆ ಶುಭ ಸಂದೇಶಗಳು
ಜಿಲ್ಲೆಯ ಮಹಿಳಾ ಸ್ವ-ಸಹಾಯ ಸಂಘಗಳು ಉತ್ಪಾದಿಸಿದ ವಸ್ತುಗಳು ಅಮೇಜಾನ್ ಹಾಗೂ ಇತರ ಇ-ಕಾಮರ್ಸ್ ಮಾರುಕಟ್ಟೆಯಲ್ಲಿಯೂ ಮಾರಾಟವಾಗುತ್ತಿವೆ. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ, ಯೋಜನಾ ನಿರ್ದೇಶಕ ಬಿ.ಎಸ್. ಮೂಗನೂರಮಠ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗದಲ್ಲೂ ಚಾಲನೆ; ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ನಿಸರ್ಗಸ್ನೇಹಿ ಮಣ್ಣಿನ ದೀಪಗಳನ್ನು ಮಾರಾಟ ಮಾಡಲು ಜಿಲ್ಲಾ ಪಂಚಾಯತಿ ಆವರಣದಲ್ಲಿ ಅವಕಾಶ ನೀಡಲಾಗಿದೆ. ಶಿವಮೊಗ್ಗದಲ್ಲಿ ಮಾರಾಟ ಮಳಿಗೆಯನ್ನು ಜಿಲ್ಲಾ ಪಂಚಾಯಿತಿ ಸಿಇಓ ಎಂ. ಎಲ್. ವೈಶಾಲಿ ಉದ್ಘಾಟಿಸಿದರು.
ನಂತರ ಮಾತನಾಡಿದ ಎಂ. ಎಲ್ ವೈಶಾಲಿ, "ಸೃಜನಶೀಲತೆ ಮತ್ತು ಪರಿಶ್ರಮದಿಂದ ಮಹಿಳೆಯರು ತಯಾರಿಸಿದ ಮಣ್ಣಿನ ದೀಪಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಖರೀದಿಸುವ ಮೂಲಕ ಸ್ವಸಹಾಯ ಮಹಿಳಾ ಗುಂಪುಗಳನ್ನು ಪ್ರೋತ್ಸಾಹಿಸಬೇಕು" ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಆವರಣದಲ್ಲಿ ಈ ದೀಪಗಳ ಮಳಿಗೆಗಳು ನವೆಂಬರ್ 3ರವರೆಗೆ ಇರಲಿವೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು, ಸಹಾಯಕ ಯೋಜನಾ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಗುಂಪಿನ ಸದಸ್ಯರು ಪಾಲ್ಗೊಂಡಿದ್ದರು.
ಹಸಿರು ಪಟಾಕಿ ಮಾತ್ರ ಮಾರಾಟ; ದೀಪಾವಳಿ ಹಬ್ಬದ ಆಚರಣೆ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಹಾಗೂ ಸುಪ್ರಿಂಕೋರ್ಟ್ ಆದೇಶಗಳನ್ನು ಪಾಲಿಸುವ ಮೂಲಕ ಜನರು ದೀಪಾವಳಿಯನ್ನು ಆಚರಣೆ ಮಾಡಬೇಕಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಬಳಸುವಂತಿಲ್ಲ. ಪಟಾಕಿಗಳ ಮಾರಾಟ ಹಾಗೂ ಬಳಕೆ ಕುರಿತಂತೆ ಕೇಂದ್ರ ಸರ್ಕಾರದ ಸ್ಫೋಟಕ ವಸ್ತುಗಳ ಉಪ ಮುಖ್ಯ ನಿಯಂತ್ರಕರು ಈ ಬಗ್ಗೆ ಅ. 12 ರಂದು ಮಾರ್ಗಸೂಚಿಯನ್ನು ಹೊರಡಿಸಿದ್ದು, ಅದರನ್ವಯ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಸಿರು ಪಟಾಕಿಯನ್ನು ಹೊರತುಪಡಿಸಿ ಬೇರೆ ಯಾವುದೇ ಪಟಾಕಿಯನ್ನು ಮಾರಾಟ ಮಾಡುವಂತಿಲ್ಲ.
ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತ ಅನುಮತಿ ನೀಡುವ ಪ್ರದೇಶ ಹೊರತುಪಡಿಸಿ ಬೇರೆ ಸ್ಥಳದಲ್ಲಿ ಅಂಗಡಿಯನ್ನು ತೆರೆಯಬಾರದು. ಹಸಿರು ಪಟಾಕಿ ಹೊರತುಪಡಿಸಿ ಇನ್ಯಾವುದೇ ಬಗೆಯ ಪಟಾಕಿ ಮತ್ತು ಅನಧಿಕೃತವಾಗಿ ಪಟಾಕಿ ಮಾರಾಟ ಕಂಡುಬಂದಲ್ಲಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.