ಕಾನೂನು ಹೋರಾಟದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಹಿನ್ನಡೆ
ಧಾರವಾಡ, ಜನವರಿ 12: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಬಿಜೆಪಿ ನಾಯಕ ಯೋಗೀಶ್ಗೌಡ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದೆ.
ಯೋಗೀಶ್ಗೌಡ ಗೌಡ ಹತ್ಯೆ ಪ್ರಕರಣದ ಆರೋಪಿ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾಗಿದೆ.

ಅವರ ವಿರುದ್ಧದ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗಳಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ ಅವರು ಇದೇ ಜನವರಿ 29ರಿಂದ ಆರಂಭವಾಗಲಿರುವ ವಿಚಾರಣೆಯನ್ನು ಎದುರಿಸಲೇಬೇಕಾಗಿದೆ.
ವಿನಯ ಕುಲಕರ್ಣಿ ತಮ್ಮ ವಿರುದ್ಧ ಹೊರಿಸಲಾಗಿರುವ ಆರೋಪ ಪಟ್ಟಿ ಮತ್ತು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ನ್ಯಾಯ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಶುಕ್ರವಾರ ವಿಚಾರಣೆ ನಡೆಸಿದರು.
ವಿನಯ ಕುಲಕರ್ಣಿ ಪರ ಹಿರಿಯ ವಕೀಲರು, ವಿಚಾರಣಾ ನ್ಯಾಯಾಲಯ ತನ್ನ ಪ್ರಕ್ರಿಯೆ ಆರಂಭಿಸಲು ಜನವರಿ 29ರ ದಿನಾಂಕ ನಿಗದಿಗೊಳಿಸಿದೆ. ಇದಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು. ಅದನ್ನು ಸ್ಪಷ್ಟವಾಗಿ ನಿರಾಕರಿಸಿದ ನ್ಯಾಯಪೀಠ, ಪ್ರತಿವಾದಿ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ ಜನವರಿ 19ಕ್ಕೆ ಮುಂದೂಡಿತು.
ಸಿಬಿಐ ಪರ ಹಾಜರಾಗಿದ್ದ ಪಿ. ಪ್ರಸನ್ನ ಕುಮಾರ್, ಈ ಮೊದಲಿನ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ. ನಾನೇ ಈ ಪ್ರಕರಣದಲ್ಲಿ ಮುಂದುವರಿಯುವಂತೆ ನನಗೆ ಬೆಂಗಳೂರು ವಿಭಾಗದ ಸಿಬಿಐ ಅಧಿಕಾರಿಗಳು ಮುಖ್ತಾರ್ ನಾಮೆ ನೀಡಿದ್ದಾರೆ. ಇದನ್ನು ಪರಿಗಣಿಸಿ ಹಾಜರಾಗಲು ಅನುಮತಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್ಗೌಡ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸಿಸಿಎಚ್-82ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ ಜನವರಿ 29ರಿಂದ ಫೆಬ್ರುವರಿ 1ರವರೆಗೆ ನಿಯಮಿತವಾಗಿ ವಿಚಾರಣೆ ನಡೆಸಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್ನಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ 9 ತಿಂಗಳ ಕಾಲ ಅವರು ನ್ಯಾಯಾಂಗ ಬಂಧನದಲ್ಲಿರು. ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.












Click it and Unblock the Notifications