ಅನಂತ್ ಕುಮಾರ್ ಹೆಗಡೆ ವಿರುದ್ಧದ ಎಫ್ಐಆರ್ಗೆ ಕೋರ್ಟ್ ತಡೆ
ಧಾರವಾಡ, ಸೆಪ್ಟೆಂಬರ್ 21 : ಕೇಂದ್ರ ಸಚಿವ, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಶಿರಸಿಯ ಟಿಎಸ್ಎಸ್ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ.
ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ ಅವರು ಎಫ್ಐಆರ್ಗೆ ಮಧ್ಯಂತರ ತಡೆ ನೀಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 6, 2017ಕ್ಕೆ ಮುಂದೂಡಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅನಂತ್ ಕುಮಾರ್ ಹೆಗಡೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಂಸದರ ಪರವಾಗಿ ವಕೀಲ ಶಿವಕುಮಾರ ಬಾದವಾಡಗಿ ಮತ್ತು ವೈಶಾಲಿ ಕಲಾದಗಿ ವಾದ ಮಂಡನೆ ಮಾಡಿದ್ದರು.
2017ರ ಜನವರಿಯಲ್ಲಿ ಅನಂತ್ ಕುಮಾರ್ ಹೆಗಡೆ ತಮ್ಮ ತಾಯಿಯನ್ನು ಶಿರಸಿಯ ಟಿಎಸ್ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಸರಿಯಾಗಿ ಸ್ಪಂದಿಸಿಲ್ಲ ಎಂದು ಕೋಪಗೊಂಡು ಅವರ ಮೇಲೆ ಹಲ್ಲೆ ಮಾಡಿದ್ದರು.
ವೈದ್ಯರಾದ ಮಧುಕೇಶ್ವರ್, ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ಶಿರಸಿಯ ಮಾರ್ಕೆಟ್ ಠಾಣೆ ಪೊಲೀಸರು ಸಂಸದರ ವಿರುದ್ಧ ಸ್ವಯಂ ಪ್ರೇರಿತು ದೂರು ದಾಖಲಿಸಿಕೊಂಡು, ಎಫ್ಐಆರ್ ದಾಖಲಿಸಿದ್ದರು.
ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಂಸದರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ, ಅನಂತ್ ಕುಮಾರ್ ಹೆಗಡೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಖಾತೆಯ ರಾಜ್ಯ ಸಚಿವರಾಗಿದ್ದಾರೆ.












Click it and Unblock the Notifications