ಹುಬ್ಬಳ್ಳಿ-ಧಾರವಾಡ ಬೈಪಾಸ್ 6 ಪಥದ ರಸ್ತೆ ನಿರ್ಮಾಣಕ್ಕೆ ಚಾಲನೆ
ಧಾರವಾಡ, ಫೆಬ್ರವರಿ 28; ಸಾವಿನ ರಸ್ತೆ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮವಾರ ಚಾಲನೆ ಸಿಗಲಿದೆ. 1014.79 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆ ನಿರ್ಮಾಣವಾಗಲಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಿದ್ದಾರೆ. ಸುಮಾರು 30.6 ಕಿ. ಮೀ. ರಸ್ತೆಯ ಅಗಲೀಕರಣ ಕಾಮಗಾರಿ 2 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ.
ಹುಬ್ಬಳ್ಳಿಯ ಗಬ್ಬೂರು ಎನ್. ಎಚ್. 4 ರಸ್ತೆಯ 402.6 ಕಿ. ಮೀ. ಇಂದ ಧಾರವಾಡದ ನರೇಂದ್ರ ಕ್ರಾಸ್ನ 433.2 ಕಿ. ಮೀ. ವರೆಗೆ 6 ಪಥದ ರಸ್ತೆ ನಿರ್ಮಾಣವಾಗಲಿದೆ. ರಸ್ತೆ ನಿರ್ಮಾಣಕ್ಕೆ 800 ಕೋಟಿ ಮತ್ತು ಭೂ ಸ್ವಾಧೀನ, ಡಿಪಿಆರ್ ತಯಾರಿಕೆ ಸೇರಿದಂತೆ ಇತರ ಕಾರ್ಯಗಳಿಗೆ 400 ಕೋಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಈ ರಸ್ತೆ ನಿರ್ಮಾಣಕ್ಕೆ ಇಪಿಸಿ ಮಾದರಿಯಲ್ಲಿ ಟೆಂಡರ್ ಕರೆಯಲಾಗಿದೆ. ರಸ್ತೆ ನಿರ್ಮಾಣವಾದ ಬಳಿಕ ನಂತರದ 5 ವರ್ಷದ ನಿರ್ವಹಣೆಯನ್ನೂ ಗುತ್ತಿಗೆದಾರರೇ ಮಾಡಲಿದ್ದಾರೆ. ಅಲ್ಲದೇ ಬೈಪಾಸ್ನಲ್ಲಿ ಸದ್ಯ ಇರುವ ಎಲ್ಲಾ ಟೋಲ್ ತೆಗೆದು ಕೇವಲ ಒಂದು ಟೋಲ್ ಪ್ಲಾಜಾ ಮಾತ್ರ ಇಟ್ಟುಕೊಳ್ಳಲಾಗುತ್ತದೆ.
ಕೆಲವು ದಿನಗಳ ಹಿಂದೆ ನವದೆಹಲಿಯಲ್ಲಿ ನಡೆದಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯನ್ನು ನಿರ್ಮಾಣಕ್ಕೆ ಇಪಿಸಿ ಮಾದರಿಯಲ್ಲಿ ಟೆಂಡರ್ ಕರೆಯಲು ಒಪ್ಪಿಗೆ ನೀಡಲಾಗಿತ್ತು.
ಟೋಲ್ನಿಂದ ವಿನಾಯಿತಿ; 6 ಪಥದ ರಸ್ತೆ ನಿರ್ಮಾಣದ ಬಳಿಕ ಟೋಲ್ ಅನ್ನು ಕೆಲಗೇರಿ ಮತ್ತು ನರೆಂದ್ರ ನಡುವೆ ಮಾಡಲಾಗುತ್ತದೆ. ಇದರಿಂದ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ವಾಹನ ಸವಾರರಿಗೆ ಟೋಲ್ನಿಂದ ವಿನಾಯಿತಿ ಸಿಗಲಿದೆ.
ಈ ಬೈಪಾಸ್ ರಸ್ತೆಯನ್ನು 6 ಪಥದ ರಸ್ತೆಯಾಗಿ ನಿರ್ಮಾಣ ಮಾಡುವುದರಿಂದ ನಗರದೊಳಗೆ ಸಂಚರಿಸುವ ವಾಹನಗಳ ಸಂಚಾರ ಕಡಿಮೆಯಾಗಲಿದೆ. ಇದರಿಂದಾಗಿ ನಗರದೊಳಗೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ರಸ್ತೆ ಬೈಪಾಸ್ ಅಗಲೀಕರಣಕ್ಕೆ ಬಹಳ ವರ್ಷಗಳಿಂದ ಬೇಡಿಕೆ ಇತ್ತು. ಬೆಂಗಳೂರು-ಪುಣೆ ನಡುವೆ 6 ಪಥದ ರಸ್ತೆಯಲ್ಲಿ ವೇಗವಾಗಿ ಬರುವ ವಾಹನಗಳು ಬೈಪಾಸ್ನಲ್ಲಿಯೂ ಅದೇ ವೇಗದಲ್ಲಿ ಬರುವುದರಿಂದ ಅಪಘಾತಗಳು ಸಂಭವಿಸುತ್ತಿದ್ದವು. ಈ ರಸ್ತೆ ಸಾವಿನ ರಸ್ತೆ ಎಂದೇ ಖ್ಯಾತಿ ಪಡೆದಿತ್ತು.
ಈ ಬೈಪಾಸ್ ರಸ್ತೆಯಲ್ಲಿ ಅಪಘಾತಗಳು ಸಾಮಾನ್ಯವಾಗಿದ್ದವು. 2021ರ ಜನವರಿ 15ರ ಶುಕ್ರವಾರ ಇದೇ ರಸ್ತೆಯ ಇಟಿಗಟ್ಟಿ ಬಳಿ ಟೆಂಪೋ ಟ್ರಾವೆಲರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. 11 ಮಹಿಳೆಯರು ಸೇರಿ 13 ಜನರು ಸಾವನ್ನಪ್ಪಿದ್ದರು.
ಈ ರಸ್ತೆ ಅಪಘಾತ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರು ದಾವಣಗೆರೆಯಿಂದ ಧಾರವಾಡಕ್ಕೆ ಬಂದು ಪ್ರತಿಭಟನೆ ನಡೆಸಿದ್ದರು. ಬೈಪಾಸ್ ವಿಸ್ತರಣೆ ಮಾಡಿ ಎಂದು ಆಗ್ರಹಿಸಿದ್ದರು.
2011ರಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ನಿರ್ಮಾಣವಾಗಿತ್ತು. ಆದರೆ ರಸ್ತೆ ಕಿರಿದಾದ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕೇವಲ 30 ಕಿ. ಮೀ. ಸಾಗಲು ಗಂಟೆಗಟ್ಟಲೇ ಬೇಕಾಗುತ್ತಿತ್ತು. ಈ ರಸ್ತೆಯಲ್ಲಿ ಅಪಘಾತಗಳು ಸಹ ಮಾಮೂಲಿಯಾಗಿದ್ದವು. 2018ರಿಂದ ಇಲ್ಲಿಯ ತನಕ 530ಕ್ಕೂ ಅಧಿಕ ಅಪಘಾತ ಸಂಭವಿಸಿದ್ದು, 92 ಜನರು ಮೃತಪಟ್ಟಿದ್ದಾರೆ.
ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಆಸಕ್ತಿ ತೋರಿಸಿದ್ದರು. ಸಚಿವ ನಿತಿನ್ ಗಡ್ಕರಿ ಜೊತೆ ಮಾತುಕತೆ ನಡೆಸಿ ಅನುದಾನ ತಂದಿದ್ದಾರೆ. ರಸ್ತೆ ನಿರ್ಮಾಣಕ್ಕೆ ಸೋಮವಾರ ಚಾಲನೆ ಸಿಗುತ್ತಿದೆ.












Click it and Unblock the Notifications