ಜಯದೇವ ನೆರವಿನಿಂದ ಕಿಮ್ಸ್ ಹೃದ್ರೋಗ ವಿಭಾಗ ಅಭಿವೃದ್ಧಿ
ಹುಬ್ಬಳ್ಳಿ, ಮೇ 03 : 'ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ. ಆಸ್ಪತ್ರೆಯ ಹೃದ್ರೋಗ ಚಿಕಿತ್ಸಾ ವಿಭಾಗವನ್ನು ಜಯದೇವ ಆಸ್ಪತ್ರೆಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಮಂಗಳವಾರ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 5.5 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ ಹಾಗೂ ವಿವಿಧ ಘಟಕಗಳ ಉದ್ಛಾಟನೆಯನ್ನು ಸಚಿವರು ನೆರವೇರಿಸಿದರು. [ಮೂರು ವೈದ್ಯಕೀಯ ಕಾಲೇಜು ಆರಂಭಕ್ಕೆ ಒಪ್ಪಿಗೆ ಸಿಕ್ಕಿತು]

'ಆಸ್ಪತ್ರೆಯ ಎಲ್ಲ ಅಗತ್ಯಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ. ಕಲಬುರಗಿ ಹಾಗೂ ಮೈಸೂರು ನಗರಗಳಲ್ಲಿಯೂ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಜಯದೇವ ಆಸ್ಪತ್ರೆಯ ಸಹಯೋಗದಲ್ಲಿ ಹೃದ್ರೋಗ ವಿಭಾಗವನ್ನು ಅಭಿವೃದ್ಧಿ ಮಾಡಲಾಗುತ್ತದೆ' ಎಂದರು. [ಕರ್ನಾಟಕದ ಮೊದಲ ಚರ್ಮ ಬ್ಯಾಂಕ್ ಉದ್ಘಾಟನೆ]
ವೈದ್ಯಕೀಯ ಸೀಟುಗಳಲ್ಲಿ ಹೆಚ್ಚಳ : 'ಕಳೆದ 2 ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 6 ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ 6 ಹೊಸ ಕಾಲೇಜುಗಳು ಆರಂಭವಾಗಲಿವೆ. ಇದರಿಂದಾಗಿ ಸರ್ಕಾರಿ ಕೋಟಾದಡಿ 2,100 ಸೀಟುಗಳು ದೊರೆಯಲಿವೆ' ಎಂದರು. [ಕಿಮ್ಸ್ ವೈದ್ಯರಿಗೆ ಎಚ್ಚರಿಕೆ ನೀಡಿದ ವಿನಯ್ ಕುಲಕರ್ಣಿ]

'ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ಗ್ರಾಮೀಣ ಸೇವೆ ಕಡ್ಡಾಯ ಕಾಯ್ದೆ ಜಾರಿಗೊಳಿಸಲಾಗಿದೆ. ನ್ಯಾಯಾಲಯದ ತಡೆಯಾಜ್ಞೆ ಇರುವುದರಿಂದ ಸಮರ್ಪಕ ಅನುಷ್ಠಾನ ಕಷ್ಟವಾಗಿದೆ' ಎಂದು ಸಚಿವರು ವಿವರಿಸಿದರು.
ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ವಿನಯ ಕುಲಕರ್ಣಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ ಶೆಟ್ಟರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.













Click it and Unblock the Notifications