ಲೋಕಸಭೆಯತ್ತ ಕಾಂಗ್ರೆಸ್ ಚಿತ್ತ: ಜೋಶಿ ವಿರುದ್ಧ ಕಣಕ್ಕಿಳಿಯುತ್ತಾರಾ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಮೇ 15: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ತಂತ್ರಗಾರಿಕೆ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಗೆಲುವಿನ ಗದ್ದುಗೆ ಏರಿದ ಕಾಂಗ್ರೆಸ್ ಈಗ ಮತ್ತೊಂದು ಕಾರ್ಯತಂತ್ರಕ್ಕೆ ಮುಂದಾಗಿದೆ. ಸೋತ ಅಭ್ಯರ್ಥಿಯನ್ನು ಮತ್ತೊಂದು ಅಂಗಳಕ್ಕೆ ಅಣಿ ಮಾಡಲು ನಿರ್ಧಾರ ಮಾಡಿದೆ.
ಟಿಕೆಟ್ ತಪ್ಪಿದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಮ್ಮ ಶಿಷ್ಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋಲುಂಡಿದ್ದಾರೆ. ಇದು ನನ್ನ ಕೊನೆಯ ಚುನಾವಣೆ ಎಂದಿದ್ದ ಶೆಟ್ಟರ್, ನನಗಿನ್ನೂ ವಯಸ್ಸಾಗಿಲ್ಲ ಎನ್ನುವ ಮೂಲಕ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯತ್ತ ಚಿತ್ತ ನೆಟ್ಟಿದೆ. ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿರುವ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಮುಂದಿನ ಚುನಾವಣೆಗೆ ಅಣಿಗೊಳಿಸುತ್ತಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕೆ ಇಳಿಸಲು ತೆರೆಮರೆಯ ಕಸರತ್ತು ನಡೆಸಿದೆ ಎನ್ನಲಾಗುತ್ತಿದೆ.

ಇನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಆಗಬಹುದೇ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಮೂಲೆಗಟ್ಟುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್, ಸಂತೋಷ ಎಂದು ಶೆಟ್ಟರ್ ನೇರ ಆರೋಪ ಮಾಡಿದ್ದರು. ಇದನ್ನೇ ರಾಜಕೀಯ ದಾಳವಾಗಿ ಕಾಂಗ್ರೆಸ್ ತೆಗೆದುಕೊಂಡರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿಗೆ ಎದುರಾಳಿಯನ್ನಾಗಿ ಜಗದೀಶ ಶೆಟ್ಟರ್ ಅವರನ್ನು ನಿಲ್ಲಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಒಟ್ಟಿನಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ವಿನಯ ಕುಲಕರ್ಣಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು. ಆದರೆ, ವಿನಯಗೆ ಗೆಲುವು ಸಾಧಿಸಲಾಗಲಿಲ್ಲ. ಜೋಶಿ ಅವರನ್ನು ಗೆಲ್ಲಿಸುವಲ್ಲಿ ಜಗದೀಶ್ ಶೆಟ್ಟರ್ ಅವರ ಕೊಡುಗೆ ಇತ್ತು ಎಂದು ಹೇಳಲಾಗುತ್ತಿದೆ. ಇದೀಗ ಜಗದೀಶ ಶೆಟ್ಟರ್ ಪಕ್ಷದಲ್ಲಿದ್ದು, ಪ್ರಹ್ಲಾದ್ ಜೋಶಿ ಹಾಗೂ ಜಗದೀಶ್ ಶೆಟ್ಟರ್ ನೇರಾನೇರಾ ಎದುರಾಳಿಗಳಾದರೂ ಅಚ್ಚರಿ ಪಡಬೇಕಿಲ್ಲ.












Click it and Unblock the Notifications